×
Ad

ಕಾಂಗೋ, ಉಗಾಂಡಾದಲ್ಲಿ ಎಬೋಲಾ ವೈರಸ್ ಪತ್ತೆ: ಮುನ್ನೆಚ್ಚರಿಕಾ ಕ್ರಮ ಕೈಗೊಂಡ ರಾಜ್ಯ ಸರಕಾರ

Update: 2026-05-22 22:50 IST

ಸಾಂದರ್ಭಿಕ ಚಿತ್ರ (AI)

ಬೆಂಗಳೂರು: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ಉಗಾಂಡಾ ದೇಶಗಳಲ್ಲಿ ಎಬೋಲಾ ವೈರಸ್ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು 'ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ'ಯನ್ನು ಘೋಷಿಸಿದ್ದು, ರಾಜ್ಯದಲ್ಲಿ ಐಸೋಲೇಷನ್ ಕೇಂದ್ರ, ಕ್ವಾರಂಟೈನ್ ಮತ್ತು ಚಿಕಿತ್ಸಾ ಕೇಂದ್ರ ತೆರೆಯುವುದು ಸೇರಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರವು ತಿಳಿಸಿದೆ.

ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ಬೆಂಗಳೂರಿನಲ್ಲಿ ಐಸೋಲೇಷನ್ ಕೇಂದ್ರವಾಗಿ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯನ್ನು ಗುರುತಿಸಲಾಗಿದ್ದು, ಕ್ವಾರಂಟೈನ್ ಮತ್ತು ಚಿಕಿತ್ಸಾ ಕೇಂದ್ರವಾಗಿ ನಗರದ ಎಪಿಡೆಮಿಕ್ ಡಿಸೀಸ್ ಆಸ್ಪತ್ರೆಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದೆ.

ಮಂಗಳೂರಿನಲ್ಲಿ ಶ್ರೀನಿವಾಸ್ ಪೋರ್ಟ್ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿ ಹಾಗೂ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಐಸೋಲೇಷನ್ ಮತ್ತು ಚಿಕಿತ್ಸಾ ಕೇಂದ್ರವಾಗಿ ಗುರುತಿಸಲಾಗಿದೆ. ಸಂಶಯಾಸ್ಪದ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ನಿಗದಿತ ಆಂಬುಲೆನ್ಸ್ ಸೇವೆಯನ್ನೂ ಸಿದ್ಧವಾಗಿಡಲಾಗಿದೆ ಎಂದು ಹೇಳಿದೆ.

ಸಂಶಯಾಸ್ಪದ ಎಬೋಲಾ ಪ್ರಕರಣಗಳ ಮಾದರಿಗಳನ್ನು ಸಂಗ್ರಹಿಸಿ, ಬೆಂಗಳೂರಿನ ಎನ್ ಐ ವಿ ಮೂಲಕ ಪರೀಕ್ಷೆಗಾಗಿ ಪುಣೆಯ ಎನ್ ಐ ವಿ ಕಳುಹಿಸಲಾಗುತ್ತದೆ ಅರೋಗ್ಯ ಇಲಾಖೆಯು ಹೇಳಿದೆ.

ಎಬೋಲಾ ಪೀಡಿತ ದೇಶಗಳಿಗೆ ಇತ್ತೀಚೆಗೆ ಪ್ರಯಾಣ ಮಾಡಿದವರು ಭಾರತಕ್ಕೆ ಮರಳಿದ ನಂತರ 21 ದಿನಗಳ ಕಾಲ ಆರೋಗ್ಯ ಮೇಲ್ವಿಚಾರಣೆ ಹಾಗೂ ಪ್ರತ್ಯೇಕ ವೀಕ್ಷಣೆಯಲ್ಲಿ ಇರಬೇಕು. ಪ್ರಯಾಣಿಕರಲ್ಲಿ ರೋಗದ ಯಾವುದೇ ರೋಗಲಕ್ಷಣಗಳು ಕಂಡುಬಂದರೆ ಅವರು ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ವರದಿ ಮಾಡಬೇಕು ಎಂದು ಅರೋಗ್ಯ ಇಲಾಖೆಯು ಸೂಚನೆ ನೀಡಿದೆ.

ಎಬೋಲಾ ರೋಗವು ಗಂಭೀರ ವೈರಲ್ ಸೋಂಕಾಗಿದ್ದು, ಜ್ವರ, ತಲೆನೋವು, ಸ್ನಾಯು ನೋವು, ಗಂಟಲು ನೋವು, ವಾಂತಿ, ತೀವ್ರ ಅತಿಸಾರ, ಹೊಟ್ಟೆ ನೋವು, ದದ್ದು ಹಾಗೂ ಕಣ್ಣು ಕೆಂಪಾಗುವುದು ಮುಂತಾದ ಲಕ್ಷಣಗಳನ್ನು ಉಂಟುಮಾಡಬಹುದು. ಸೋಂಕಿತ ವ್ಯಕ್ತಿಗಳ ರಕ್ತ, ಅಂಗಗಳು, ದೇಹ ದ್ರವಗಳೊಂದಿಗೆ ನೇರ ಸಂಪರ್ಕ, ಅಥವಾ ಹಾಸಿಗೆ, ಬಟ್ಟೆ, ಸಿರಿಂಜ್‌ನಂತಹ ಕಲುಷಿತ ವಸ್ತುಗಳ ಸಂಪರ್ಕದಿಂದ ರೋಗ ಹರಡುತ್ತದೆ. ಆರೋಗ್ಯ ಸಿಬ್ಬಂದಿಗಳು ಮತ್ತು ಸೋಂಕಿತ ವ್ಯಕ್ತಿಯ ಕುಟುಂಬ ಸದಸ್ಯರು ಹಾಗೂ ನಿಕಟ ಸಂಪರ್ಕದಲ್ಲಿರುವವರು ಹೆಚ್ಚಿನ ಅಪಾಯದಲ್ಲಿರುತ್ತಾರೆ. ಪ್ರಸ್ತುತ ಭಾರತದಲ್ಲಿ ಇಬೋಲಾ ಪ್ರಕರಣಗಳು ವರದಿಯಾಗಿಲ್ಲ. ಆದರೂ, ರಾಜ್ಯ ಆರೋಗ್ಯ ಇಲಾಖೆ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News