ಬೆಂಗಳೂರು,ಆ.24: ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್)ಯ ಕರಡು ಮತದಾರರ ಪಟ್ಟಿಯನ್ನು ಸೋಮವಾರ(ಆ.24) ರಂದು ಪ್ರಕಟಿಸುವುದಾಗಿ ಚುನಾವಣಾ ಆಯೋಗ ತಿಳಿಸಿದ್ದರೂ, ಸೋಮವಾರ ಬೆಳಗ್ಗೆಯವರೆಗೂ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಕರಡು ಪಟ್ಟಿ ಲಭ್ಯವಾಗಿಲ್ಲ.

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಭಾರಿ ಸಂಖ್ಯೆಯ ಮತದಾರರನ್ನು ಎಎಸ್‌ಡಿಡಿಒ (ASDDO), ಅನ್‌ಮ್ಯಾಪ್ಡ್‌ ಹಾಗೂ ಲಾಜಿಕಲ್‌ ಡಿಸ್ಕ್ರೆಪೆನ್ಸಿ ವಿಭಾಗಗಳಲ್ಲಿ ಗುರುತಿಸಲಾಗಿರುವ ಹಿನ್ನೆಲೆಯಲ್ಲಿ ಕರಡು ಪಟ್ಟಿಯ ಪ್ರಕಟಣೆಗೆ ಮತದಾರರು ಕಾತುರದಿಂದ ಕಾಯುತ್ತಿದ್ದಾರೆ. ಕರಡು ಪಟ್ಟಿ ಪ್ರಕಟವಾದ ಬಳಿಕವೇ ಮತದಾರರು ತಮ್ಮ ಹೆಸರು ಮತಪಟ್ಟಿಯಲ್ಲಿ ಮುಂದುವರಿದಿದೆಯೇ, ಯಾವುದೇ ಬದಲಾವಣೆ ಮಾಡಲಾಗಿದೆಯೇ ಅಥವಾ ಹೆಸರು ಕೈಬಿಡಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಸಾಧ್ಯವಾಗಲಿದೆ.

ಕರಡು ಪಟ್ಟಿ ಪ್ರಕಟವಾದ ನಂತರ ಆಕ್ಷೇಪಣೆ ಹಾಗೂ ಹಕ್ಕು ಸಲ್ಲಿಸಲು ಅವಕಾಶ ಇರಲಿದೆ. ಹೀಗಾಗಿ ಕರಡು ಪಟ್ಟಿ ಪ್ರಕಟಣೆಯಲ್ಲಿ ವಿಳಂಬವಾದರೆ, ಮತದಾರರಿಗೆ ತಮ್ಮ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ದೊರೆಯುವ ಸಮಯದ ಮೇಲೂ ಪರಿಣಾಮ ಬೀರಲಿದೆ.

ವಿಶೇಷವಾಗಿ ಎಸ್‌ಐಆರ್‌ ಸಂದರ್ಭದಲ್ಲಿ ಹೆಸರು, ವಿಳಾಸ ಹಾಗೂ ಮತಗಟ್ಟೆ ವಿವರಗಳಲ್ಲಿ ಬದಲಾವಣೆಗಳಾಗಿರುವ ಬಗ್ಗೆ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಕರಡು ಪಟ್ಟಿಯಲ್ಲಿನ ಮಾಹಿತಿಯನ್ನು ಸಾರ್ವಜನಿಕವಾಗಿ ಪರಿಶೀಲಿಸಲು ಅವಕಾಶ ಕಲ್ಪಿಸುವುದು ಅತ್ಯಂತ ಮಹತ್ವದ್ದಾಗಿದೆ.

ಚುನಾವಣಾ ಆಯೋಗದ ಪ್ರತಿಕ್ರಿಯೆ:

ಈ ಕುರಿತು ಪ್ರತಿಕ್ರಿಯಿಸಿದ ಜಂಟಿ ಮುಖ್ಯ ಚುನಾವಣಾಧಿಕಾರಿ ಯೋಗೇಶ್ವರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಒಪ್ಪಿಗೆಗಾಗಿ ಕಳುಹಿಸಿಕೊಡಲಾಗಿದೆ. ಸೋಮವಾರ ಬೆಳಗ್ಗೆ 11.30 ಗಂಟೆಯ ಬಳಿಕ ಪಟ್ಟಿ ಪ್ರಕಟವಾಗಲಿದೆ. ಅಲ್ಲದೇ ಮಧ್ಯಾಹ್ನ 3 ಗಂಟೆಗೆ ಮುಖ್ಯ ಚುನಾವಣಾಧಿಕಾರಿ ಪತ್ರಿಕಾಗೋಷ್ಠಿ ನಡೆಸಿ ಉಳಿದ ಎಲ್ಲ ವಿವರಗಳನ್ನು ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor