ಕೆಪಿಎಸ್ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತು; ಶಿವಶಂಕರಪ್ಪ ಸಾಹುಕಾರ್ ಅರ್ಜಿ ಕುರಿತ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Update: 2026-07-27 20:36 IST
ಬೆಂಗಳೂರು: ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಕೆಪಿಎಸ್ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ಜುಲೈ 13ರಂದು ರಾಜ್ಯಪಾಲರು ಹೊರಡಿಸಿರುವ ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿತ್ತು.
ಅರ್ಜಿ ಸಂಬಂಧ ಅರ್ಜಿದಾರರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದಗಳನ್ನು ಪೂರ್ಣಗೊಂಡಿದ್ದು, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಕೆಪಿಎಸ್ಸಿ ಹಾಗೂ ಸರ್ಕಾರದ ಪರ ವಕೀಲರು ಲಿಖಿತ ವಾದಾಂಶಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು.