×
Ad

ಡಿಸೆಂಬರ್ ಒಳಗೆ 2 ಲಕ್ಷ ಜಮೀನುಗಳಿಗೆ ದರ್ಖಾಸ್ತು ಪೋಡಿ, 30 ಲಕ್ಷ ರೈತರಿಗೆ ಅನುಕೂಲ : ಕೃಷ್ಣ ಬೈರೇಗೌಡ

Update: 2025-08-04 20:57 IST

ಕೃಷ್ಣ ಬೈರೇಗೌಡ

ಬೆಂಗಳೂರು: ರೈತರಿಗೆ ಕಾಂಗ್ರೆಸ್ ಸರಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ‘ನನ್ನ ಭೂಮಿ’ ಗ್ಯಾರಂಟಿ ಅಭಿಯಾನ ವೇಗ ಪಡೆದುಕೊಂಡಿದ್ದು, ಈವರೆಗೆ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಡಿಸೆಂಬರ್ ಒಳಗಾಗಿ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಸರಕಾರದ ಅವಧಿಯಲ್ಲಿ ಮೂರು ವರ್ಷಕ್ಕೆ ಕೇವಲ 5,801 ಪ್ರಕರಣಗಳಲ್ಲಿ ಮಾತ್ರ ರೈತರಿಗೆ ಪೋಡಿ ದುರಸ್ಥಿ ಮಾಡಿಕೊಡಲಾಗಿತ್ತು. ಆದರೆ, ಪ್ರಸಕ್ತ ಕಳೆದ ಡಿಸೆಂಬರ್‍ನಲ್ಲಿ ‘ನನ್ನ ಭೂಮಿ’ ಹೆಸರಿನಲ್ಲಿ ಪೋಡಿ ಅಭಿಯಾನ ಕೈಗೊಂಡಿದ್ದು, ಕೇವಲ 9 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನೂ 50 ರಿಂದ 70 ಸಾವಿರ ಪೋಡಿ ಪ್ರಕರಣಗಳು ದಾಖಲಾಗುವ ನಿರೀಕ್ಷೆ ಇದ್ದು, ಮುಂದಿನ ಡಿಸೆಂಬರ್ ಒಳಗೆ 2 ಲಕ್ಷ ಪ್ರಕರಣಗಳಲ್ಲಿ ರೈತರಿಗೆ ದರ್ಖಾಸ್ತು ಪೋಡಿ ಮಾಡಿಕೊಡಲು ನಿರ್ಧರಿಸಲಾಗಿದೆ. ಈ ಗುರಿ ಸಾಧ್ಯವಾದರೆ ಕನಿಷ್ಠ 7 ಲಕ್ಷ ಕುಟುಂಬಗಳಿಗೆ 30 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

1.62 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: 1.62 ಲಕ್ಷ ಕುಟುಂಬದ ಫಲಾನುಭವಿಗಳಿಗೆ ಇ-ಖಾತಾ ನೋಂದಣಿ ಮಾಡಿಸಿದ ಪಕ್ಕಾ ಹಕ್ಕುಪತ್ರ ನೀಡುವ ಗುರಿಯನ್ನು ನವೆಂಬರ್ ತಿಂಗಳ ಅಂತ್ಯದೊಳಗೆ ಯಶಸ್ವಿಗೊಳಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಗುರಿ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಹಾಡಿ, ಹಟ್ಟಿ, ತಾಂಡಾ, ಮಜರೆ ಗ್ರಾಮಗಳಲ್ಲಿ ವಾಸಿಸುತ್ತಿರುವವರು ಸಾಮಾಜಿಕವಾಗಿ ಹಾಗೂ ಆರ್ಥಿವಾಗಿ ಸಾಕಷ್ಟು ಹಿಂದುಳಿದವರು. ಆದರೆ, ಈ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸದ ಕಾರಣ ದಶಕಗಳಿಂದಲೂ ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಅವರು ತಿಳಿಸಿದರು.

ಹೀಗಾಗಿ ಇಂತಹ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದೆ. 4,250 ಅರ್ಹ ದಾಖಲೆ ರಹಿತ ಜನ ವಸತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಡಿಸೆಂಬರ್ ತಿಂಗಳ ಒಳಗೆ ಇಷ್ಟೂ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಸೂಚಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇನ್ನೂ 952 ಗ್ರಾಮ ಲೆಕ್ಕಿಗರಿಗೆ ಕಚೇರಿ ನೀಡುವ ಕೆಲಸ ಬಾಕಿ ಇದ್ದು, ಶೀಘ್ರದಲ್ಲೇ ಅವರಿಗೂ ಕಚೇರಿ ನೀಡಲು ಸೂಕ್ತ ಕ್ರಮ ವಹಿಸಲಾಗುವುದು. ಈಗಾಗಲೇ 4 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್ ಟಾಪ್ ನೀಡಲಾಗಿದ್ದು, ಉಳಿದವರಿಗೂ ಶೀಘ್ರದಲ್ಲೆ ನೀಡಲಾಗುವುದು ಎಂದು ಅವರು ಹೇಳಿದರು.

ಫೌತಿ ಖಾತೆ ಆಂದೋಲನಕ್ಕೆ ವೇಗ: ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿ ಮುಂದುವರೆಯುತ್ತಿದೆ. ಇದರಲ್ಲಿ ಯಾವುದೆಲ್ಲ ಸಾಧ್ಯವಿದೆ ಆ ಎಲ್ಲವನ್ನೂ ಫೌತಿ ಖಾತೆ ಅಭಿಯಾನದ ಮೂಲಕ ಈಗಿನ ವಾರಸುದಾರರ ಹೆಸರಿಗೆ ಬದಲಿಸುವ ಪ್ರಕ್ರಿಯೆಗೆ ವೇಗ ತುಂಬುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಹೀಗಾಗಿ ಜನರಿಂದ ಅರ್ಜಿ ಕರೆಯದೆ ನಾವೆ ರೈತರ ಮನೆ ಬಾಗಿಲಿಗೆ ತೆರಳಿ ಅಭಿಯಾನ ಮಾದರಿಯಲ್ಲಿ ಫೌತಿ ಖಾತೆ ಮಾಡಿಕೊಡುತ್ತಿದ್ದೇವೆ ಎಂದು ಅವರು ಹೇಳಿದರು.

ಈವರೆಗೆ 2.30 ಲಕ್ಷ ಜಮೀನುಗಳನ್ನು ಫೌತಿ ಖಾತೆ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅಭಿಯಾನಕ್ಕೆ ಮತ್ತಷ್ಟು ವೇಗ ತುಂಬಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಇ-ಫೌತಿ ಆಂದೋಲನದಲ್ಲಿ ಪ್ರಗತಿ ಸಾಧಿಸುವ ಗ್ರಾಮ ಲೆಕ್ಕಿಗರಿಗೆ ಪ್ರತಿ ಫೌತಿ ಪ್ರಕರಣಕ್ಕೆ 6 ರೂಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್, ಬೆಂಗಳೂರು ಕಂದಾಯ ವಿಭಾಗ ಆಯುಕ್ತ ಆದಿತ್ಯ ಆಮ್ಲನ್ ಬಿಶ್ವಾಸ್ ಹಾಗೂ ಕಂದಾಯ ಆಯುಕ್ತ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

ಜಲಾಶಯಗಳ ನಿರ್ವಹಣೆ ಬಗ್ಗೆ ಇರಲಿ ಎಚ್ಚರ: ‘ಪ್ರಸಕ್ತ ವರ್ಷ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. ಒಂದೆರಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದರೆ, 6-7 ಜಿಲ್ಲೆಗಳಲ್ಲಿ ವಾಡಿಕೆಗಿಂತ ತುಸು ಕಡಿಮೆ ಮಳೆಯಾಗಿದೆ. ಕಡಿಮೆ ಮಳೆಯಾಗಿರುವ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸೂಚನೆ ಇದೆ. ಆಗಸ್ಟ್ ಅಂತ್ಯದ ವೇಳೆಗೆ ಮಳೆ ಪ್ರಮಾಣ ಈ ಭಾಗಗಳಲ್ಲಿ ಸುಧಾರಣೆಯಾಗಲಿದೆ. ಜಲಾಶಯಗಳಿಗೆ ಒಳಹರಿವು ಉತ್ತಮವಾಗಿದೆ. ಆದರೆ, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲೂ ಪರಿಸ್ಥಿತಿ ಹೀಗೆ ಇರುತ್ತದೆ ಎಂದು ಹೇಳಲಾಗದು. ಹೀಗಾಗಿ ಜಿಲ್ಲಾಧಿಕಾರಿಗಳು ಜಲಾಶಯಗಳಲ್ಲಿನ ನೀರಿನ ಬಳಕೆಯ ಮೇಲೆ ಹೆಚ್ಚು ನಿಗಾವಹಿಸುವುದು ಉತ್ತಮ’

-ಕೃಷ್ಣ ಬೈರೇಗೌಡ, ಕಂದಾಯ ಸಚಿವ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News