ಭೂ ದಾಖಲೆಗಳಲ್ಲಿ ಸುಳ್ಳು ದಾಖಲೆ ಸೃಷ್ಟಿ ತಡೆಯಲು ಡಿಜಿಟಲೀಕರಣ ಮಹತ್ವದ ಹೆಜ್ಜೆ : ಕೃಷ್ಣ ಬೈರೇಗೌಡ
ಬೆಂಗಳೂರು : ರಾಜ್ಯದ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದ್ದು, ಭೂ ದಾಖಲೆಗಳಲ್ಲಿ ನಕಲಿ ನಮೂದು ಹಾಗೂ ಸುಳ್ಳು ದಾಖಲೆಗಳ ಸೃಷ್ಟಿಯನ್ನು ತಡೆಯಲು ಡಿಜಿಟಲೀಕರಣ ಮಹತ್ವದ ಹೆಜ್ಜೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸೋಮವಾರ ಇಲ್ಲಿನ ಕಂದಾಯ ಭವನದಲ್ಲಿ ಬೆಂಗಳೂರು ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಯ ಕಂದಾಯ ದಾಖಲಾತಿಗಳ ಸ್ಕ್ಯಾನಿಂಗ್ ಮತ್ತು ಡಿಜಿಟಲೀಕರಣಗೊಳಿಸುವ ‘ಭೂ ಸುರಕ್ಷಾ ಯೋಜನೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ಕ್ಯಾನಿಂಗ್ ಮೂಲಕ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ರಕ್ಷಿಸುವುದರಿಂದ ಭವಿಷ್ಯದಲ್ಲಿ ನಕಲಿ ದಾಖಲೆಗಳ ಸೃಷ್ಟಿಗೆ ಕಡಿವಾಣ ಹಾಕಿದಂತಾಗುವುದು. ಕಂದಾಯ ದಾಖಲೆಗಳು ಅಥವಾ ಕಡತಗಳು ಕಳುವಾಗುವುದನ್ನು ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರ ಕೈಬೆರಳ ತುದಿಯಲ್ಲೇ ಅವರ ಜಮೀನಿನ ದಾಖಲೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಇಂದು ನಮ್ಮ ಉದ್ದೇಶ ಯಶಸ್ವಿಯಾಗಿದ್ದು, ಸಾರ್ವಜನಿಕರು ಭೂ ಸುರಕ್ಷಾ ವೆಬ್ ಸೈಟ್ ಮೂಲಕ ತಮ್ಮ ಮನೆಯಲ್ಲಿದ್ದೇ ಭೂ ದಾಖಲೆಗಳನ್ನು ಪಡೆಯಬಹುದಾಗಿದೆ. ಈಗಾಗಲೇ ಸ್ಕ್ಯಾನಿಂಗ್ ಆಗಿರುವ ಎಲ್ಲ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯವಿದ್ದು, 36,36,596 ಪುಟಗಳನ್ನು ಸಾರ್ವಜನಿಕರು ಆನ್ಲೈನ್ ಮೂಲಕ ಪಡೆದಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಹಿಂದಿನ ವರ್ಷ ಜನವರಿಯಲ್ಲಿ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. 240 ತಾಲೂಕುಗಳ ಪೈಕಿ 70 ತಾಲೂಕುಗಳಲ್ಲಿ ಗಣಕೀಕರಣ ಸಂಪೂರ್ಣವಾಗಿ ಮುಗಿಸಲಾಗಿದೆ. ಇದೀಗ ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಲು ಇಂದಿನಿಂದ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ತಾಲೂಕು ಕಚೇರಿಗಳ ಮೂಲ ದಾಖಲೆ ಸ್ಕ್ಯಾನಿಂಗ್ ಪ್ರಗತಿಯ ಹಾದಿಯಲ್ಲಿರುವಾಗಲೇ ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಉಪವಿಭಾಗಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡುವ ಕೆಲಸಕ್ಕೂ ಮುಂದಾಗಿದ್ದಾರೆ. ಇಂದು ಎಸಿ ಕಚೇರಿಗಳ ಸ್ಕ್ಯಾನಿಂಗ್ಗೆ ಸಾಂಕೇತಿಕವಾಗಿ ಚಾಲನೆ ನೀಡುವ ಮೂಲಕ ಇಡೀ ರಾಜ್ಯಾದ್ಯಂತ ಎಸಿ, ಡಿಸಿ ಕಚೇರಿಗಳ ಕಂದಾಯ ದಾಖಲೆಗಳ ಗಣಕೀಕರಣಕ್ಕೆ ಸಾಂಕೇತಿಕ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈ ಹಿಂದೆ ಹೊರ ಬಂದಿರುವ ನಕಲಿ ದಾಖಲೆಗಳ ಸೃಷ್ಟಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಪ್ರತಿಯೊಂದು ಅನುಮಾನಾಸ್ಪದ ಪ್ರಕರಣಗಳನ್ನು ಕುಲಂಕೂಷವಾಗಿ ಪರಿಶೀಲಿಸಿ ಅಗತ್ಯವಿದ್ದಲ್ಲಿ, ಫೋರೆನ್ಸಿಕ್ ಲ್ಯಾಬ್ಗೆ ಕಳಿಸಿ ದಾಖಲೆಗಳ ನೈಜತೆ ಕುರಿತು ವರದಿಯನ್ನು ಪಡೆದು ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಇನ್ನೂ ಮುಂದೆ ದಾಖಲೆಗಳನ್ನು ಸ್ಕ್ಯಾನ್ ಮಾಡುವಾಗ ಅನುಮಾನಾಸ್ಪದವಾದ ದಾಖಲೆಗಳನ್ನು ಫೋರೆನ್ಸಿಕ್ ಮೂಲಕ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದ ಎಲ್ಲ ಎಸಿ, ಡಿಸಿ ಕಚೇರಿಯ ದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳಲ್ಲಿ ಮುಗಿಸಲಾಗುವುದು. ಸರ್ವೇ ಇಲಾಖೆ ಹಾಗೂ ನೋಂದಣಿ ಇಲಾಖೆಯಲ್ಲೂ ಸ್ಕ್ಯಾನಿಂಗ್ ಕೆಲಸಗಳು ಬಹುತೇಕ ಆರಂಭವಾಗಿದ್ದು, ಈ ಎಲ್ಲ ಕೆಲಸಗಳಿಗೆ 150 ಕೋಟಿ ರೂ. ಅನುದಾನ ಇದೆ. ಈಗಾಗಲೇ 100 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಆನೇಕಲ್, ದೇವನಹಳ್ಳಿ ಸೇರಿದಂತೆ ಕೆಲವು ತಾಲೂಕುಗಳಲ್ಲಿ ನಕಲಿ ದಾಖಲೆಗಳನ್ನೂ ಸ್ಕ್ಯಾನ್ ಮಾಡಿರುವ ದೂರು ಇದ್ದು, 16 ಜನರ ಮೇಲೆ ಎಫ್ಐಆರ್ ಮಾಡಲಾಗಿದೆ. ಇಂತಹ ಕೆಲಸಕ್ಕೂ ನಿಯಂತ್ರಣ ಹೇರಲಾಗುತ್ತಿದೆ. ಆದರೆ, ಸ್ಕ್ಯಾನಿಂಗ್ ನಂತರ ಯಾವುದೇ ವಂಚನೆಗೆ ಅವಕಾಶ ಇಲ್ಲ ಎಂದು ಅವರು ತಿಳಿಸಿದರು.
ಇದೇ ವೇಳೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಕಂದಾಯ ಇಲಾಖೆ ಎಲ್ಲ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಶಾಶ್ವತವಾಗಿ ಸಂರಕ್ಷಿಸಲಾಗುತ್ತಿದೆ. ಹಿಂದಿನ ಜನವರಿಯಲ್ಲಿ ತಾಲೂಕು ಕಚೇರಿಗಳಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಾಜ್ಯಾದ್ಯಂತ 100 ಕೋಟಿ ಪುಟಗಳಷ್ಟು ಭೂ ದಾಖಲೆ ಇದ್ದು, 62 ಕೋಟಿ ಪುಟಗಳನ್ನು ಈಗಾಗಲೇ ಸ್ಕ್ಯಾನ್ ಮಾಡಿ ಮುಗಿಸಲಾಗಿದೆ. ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಎಲ್ಲ ಪುಟಗಳನ್ನೂ ಸಂಪೂರ್ಣ ಸ್ಕ್ಯಾನ್ ಮಾಡಲಾಗುವುದು.
- ಕೃಷ್ಣ ಬೈರೇಗೌಡ, ಕಂದಾಯ ಸಚಿವ