×
Ad

ಕೆಎಸ್‌ಸಿಎ ಚುನಾವಣೆ | ಶಾಂತಕುಮಾರ್ ನಾಮಪತ್ರ ಅಂಗೀಕರಿಸಿ, ಚುನಾವಣೆ ನಡೆಸಲು ಹೈಕೋರ್ಟ್ ನಿರ್ದೇಶನ

Update: 2025-11-29 18:30 IST

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್ (ಕೆಎಸ್‌ಸಿಎ) ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿರುವ ಕೆ.ಎನ್‌. ಶಾಂತಕುಮಾರ್‌ ಅವರ ನಾಮಪತ್ರ ತಿರಸ್ಕರಿಸಿದ್ದ ಚುನಾವಣಾಧಿಕಾರಿಯ ಕ್ರಮ ರದ್ದುಪಡಿಸಿರುವ ಹೈಕೋರ್ಟ್, ನಾಮಪತ್ರ ಅಂಗೀಕರಿಸುವಂತೆ ಚುನಾವಣಾಧಿಕಾರಿಗಳಿಗೆ ನಿರ್ದೇಶಿಸಿದೆ.

ನಾಮಪತ್ರ ತಿರಸ್ಕರಿಸಿದ್ದ ಕೆಎಸ್‌ಸಿಎ ಚುನಾವಣಾಧಿಕಾರಿ ಕ್ರಮ ಪ್ರಶ್ನಿಸಿ ಕೆ.ಎನ್‌. ಶಾಂತಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ಪ್ರಕಟಿಸಿತು.

ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಶಾಂತಕುಮಾರ್ ಅವರ ನಾಮಪತ್ರ ತಿರಸ್ಕರಿಸಿ ನವೆಂಬರ್ 24ರಂದು ಚುನಾವಣಾಧಿಕಾರಿ ಹೊರಡಿಸಿದ್ದ ಆದೇಶ ರದ್ದುಪಡಿಸಿದೆಯಲ್ಲದೆ, ನಿಗದಿತ ವೇಳಾಪಟ್ಟಿಯಂತೆ ಡಿಸೆಂಬರ್ 7ರಂದೇ ಚುನಾವಣೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ನಿರ್ದೇಶಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಲಭ್ಯವಾಗಬೇಕಿದೆ.

ಪ್ರಕರಣದ ಹಿನ್ನೆಲೆ:

ಡಿಸೆಂಬರ್ 7ರಂದು ನಡೆಯಲಿರುವ ಚುನಾವಣೆಯ ಪ್ರಕ್ರಿಯೆಯ ಭಾಗವಾಗಿ ಶಾಂತಕುಮಾರ್ ಅವರು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ, ನಾಮಪತ್ರ ತಿರಸ್ಕರಿಸಲಾಗಿತ್ತು.

ಇದರಿಂದ ಹೈಕೋರ್ಟ್ ಮೆಟ್ಟಿಲೇರಿದ್ದ ಶಾಂತಕುಮಾರ್ ಅವರು, ತಮ್ಮ ನಾಮಪತ್ರ ತಿರಸ್ಕರಿಸಿ ಚುನಾವಣಾಧಿಕಾರಿಯ ಆದೇಶ ರದ್ದುಪಡಿಸಬೇಕು, ತಮ್ಮ ಉಮೇದುವಾರಿಕೆ ಎತ್ತಿ ಹಿಡಿಯಲು ಚುನಾವಣಾಧಿಕಾರಿಗೆ ನಿರ್ದೇಶಿಸಬೇಕು ಹಾಗೂ ಚುನಾವಣಾ ಕ್ಯಾಲೆಂಡರ್‌ನ ನಿಯಮಾನುಸಾರ ಚುನಾವಣಾ ಪ್ರಕ್ರಿಯೆಯನ್ನು ನಿರ್ವಹಿಸಲು ನಿರ್ದೇಶಿಸಬೇಕು ಎಂದು ಕೋರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News