×
Ad

ನ.28ರಂದು ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್‍ಗೆ ಚಾಲನೆ : ಲಕ್ಷ್ಮೀ ಹೆಬ್ಬಾಳ್ಕರ್

Update: 2025-11-19 19:04 IST

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್ ಹಾಗೂ ಅಕ್ಕ ಪಡೆಗೆ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಬುಧವಾರ ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಕರೆ ನೀಡಿದರು.

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ದೇಶಕಟ್ಟಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಅಂದರೆ ಗ್ಯಾರಂಟಿ ಸರಕಾರ ಅಂತ ಅರ್ಥ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಇಂದಿರಾ ಗಾಂಧಿ ಅವರಿಂದ ಕ್ರಾಂತಿಕಾರಕ ಬದಲಾವಣೆ: ಇಡೀ ದೇಶವೆ ಬಡತನದಿಂದ ಬಳಲುತ್ತಿದ್ದ ವೇಳೆ ಬಡ ಮಕ್ಕಳಿಗೂ ಪೌಷ್ಠಿಕ ಆಹಾರ ಸಿಗಬೇಕು. ಪೌಷ್ಠಿಕ ಆಹಾರದ ಜೊತೆಗೆ ಶಿಕ್ಷಣ ಸಿಗಬೇಕು ಎನ್ನುವ ದೃಷ್ಟಿಯಿಂದ 1975ರಲ್ಲಿ ಮೈಸೂರು ಜಿಲ್ಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅಂಗನವಾಡಿ ಆರಂಭಿಸಿದರು ಎಂದು ಅವರು ತಿಳಿಸಿದರು.

ಇದೀಗ ಅಂಗನವಾಡಿ ಆರಂಭವಾಗಿ 50 ವರ್ಷ ಪೂರೈಸಿದೆ. ಹಾಗಾಗಿ ಅಂದಿನ ಕಾರ್ಯಕ್ರಮದಲ್ಲಿ ಅಕ್ಕಪಡೆ, ಎಲ್‍ಕೆಜಿ, ಯುಕೆಜಿಗೆ ಚಾಲನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

2028ಕ್ಕೆ ನಮ್ಮದೆ ಸರಕಾರ: ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರಥ್ಯದ ನಮ್ಮ ಸರಕಾರ ಗ್ಯಾರಂಟಿ ಸರಕಾರ ಆಗಿದ್ದು, 2028ಕ್ಕೂ ನಮ್ಮದೆ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರೂಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೆ ಪರಿಷ್ಕರಿಸಲಾಗಿದೆ. 2,500 ರೂ.ಗಳಿಂದ 1500 ರೂಪಾಯಿಗೆ ಇಳಿಸಲಾಗಿದೆ. 3.50 ಕೋಟಿ ಫಲಾನುಭವಿಗಳ ಸಂಖ್ಯೆಯನ್ನು 1.50 ಕೋಟಿಗೆ ಇಳಿಸಲಾಗಿದೆ ಎಂದು ಅವರು ಟೀಕಿಸಿದರು.

ಗೌರವ ಧನ ಹೆಚ್ಚಳವೆ ಮತ್ತೊಂದು ಗ್ಯಾರಂಟಿ: ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ರೂಪಾಯಿ ಹೆಚ್ಚಿಸಲಾಗಿದೆ. ಶೀಘ್ರವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಂದು ಸಾವಿರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು. ಇದೆ ನಮ್ಮ ಸರಕಾರದ ಮತ್ತೊಂದು ಗ್ಯಾರಂಟಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು.

ಜಿಲ್ಲೆಯಿಂದ 2.50 ಲಕ್ಷಕ್ಕೂ ಹೆಚ್ಚು  ಷೇರುದಾರರ ಗುರಿ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2.80 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದಾರೆ. ಈ ಪೈಕಿ ಕನಿಷ್ಠ 2.50 ಲಕ್ಷ ಫಲಾನುಭವಿಗಳನ್ನು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಷೇರುದಾರರನ್ನಾಗಿ ಮಾಡಬೇಕು. ಗೃಹಲಕ್ಷ್ಮಿ ಯೋಜನೆಯ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರೆ ಕಾರಣ. ಅದೇ ರೀತಿ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಮನೆ ಮನೆ ತಲುಪುವಂತಾಗಬೇಕು ಎಂದು ಅವರು ಕರೆ ನೀಡಿದರು.

ಬೆಂಗಳೂರು ದಕ್ಷಿಣದ ಜನರು ರಾಜಕೀಯವಾಗಿ ಪ್ರಬುದ್ಧರು: ಓರ್ವ ಪ್ರಧಾನಮಂತ್ರಿ ಹಾಗೂ ಮೂವರು ಮುಖ್ಯಮಂತ್ರಿಗಳನ್ನು ಕೊಟ್ಟ ಕೀರ್ತಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸಲ್ಲುತ್ತದೆ. ಜಿಲ್ಲೆಯ ಜನ ರಾಜಕೀಯವಾಗಿ ಸಾಕಷ್ಟು ಪ್ರಬುದ್ಧರು. ಮನೆ ಮನೆಗಳಲ್ಲಿ ನಾಯಕರಿದ್ದಾರೆ. ಅಂತ ನಾಯಕರು ಬೆಳೆಯಲು ತಾಯಂದಿರ ಶ್ರಮವೆ ಪ್ರಮುಖ ಕಾರಣ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ನುಡಿದರು.

ಈ ವೇಳೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಪರಿಷತ್ ಸದಸ್ಯ ಎಸ್.ರವಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ರಾಜು, ರೇಶ್ಮೆ ಮಾರಾಟ ಮಂಡಳಿ ಅಧ್ಯಕ್ಷ ಗಂಗಾಧರ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್ ಕುಮಾರ್, ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಇಲಾಖೆಯ ಉಪ ನಿರ್ದೇಶಕ ದಿನೇಶ್ ಜೆ.ಆರ್. ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News