ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?; ಸಂಪುಟ ಸಹೋದ್ಯೋಗಿಗಳಿಗೆ ಉಪಹಾರ ಸಭೆ ಆಯೋಜನೆ
ʼರಾಜೀನಾಮೆ ಕೊಡುತ್ತೇನೆʼ ಎಂದು ಸಿದ್ದರಾಮಯ್ಯ ಹೇಳಿದ್ದಾರೆ : ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳ ನಡುವೆಯೇ, ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಂಪುಟ ಸಹದ್ಯೋಗಿಗಳಿಗೆ ಬೆಳಗ್ಗೆ 9 ಗಂಟೆಗೆ ಉಪಹಾರ ಸಭೆಯನ್ನು ಆಯೋಜನೆ ಮಾಡಿದ್ದಾರೆ.
ಉಪಹಾರ ಸಭೆಯಲ್ಲಿ ಪ್ರಮುಖ ವಿಚಾರಗಳ ಬಗ್ಗೆ ಸಚಿವರೊಂದಿಗೆ ಸಮಾಲೋಚನೆ ನಡೆಸಲಿರುವ ಸಿದ್ದರಾಮಯ್ಯ, ಆನಂತರ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಸರಕಾರದ ಸಾಧನೆಗಳು, ಮುಂದಿನ ರಾಜಕೀಯ ನಡೆ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಸದಿಲ್ಲಿಯಲ್ಲೆ ಉಳಿದುಕೊಂಡಿದ್ದು, ನಾಳೆ ಮುಂಜಾನೆ ದಿಲ್ಲಿಯಿಂದ ಹೊರಟು ನೇರವಾಗಿ ಮುಖ್ಯಮಂತ್ರಿ ನಿವಾಸದಲ್ಲಿ ಆಯೋಜಿಸಿರುವ ಉಪಹಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಅಧಿಕಾರ ಹಸ್ತಾಂತರ ಪ್ರಕ್ರಿಯೆ ಯಾವುದೆ ಗೊಂದಲಗಳಿಲ್ಲದೆ ಸುಸೂತ್ರವಾಗಿ ನಡೆಯುವಂತೆ ಮಾಡಲು, ಉಭಯ ನಾಯಕರ ಒಗ್ಗಟ್ಟು ಪ್ರದರ್ಶನ ಮಾಡುವ ಉದ್ದೇಶದಿಂದ ಈ ಉಪಹಾರ ಸಭೆ ಆಯೋಜಿಸಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಂಪುಟದ ಸದಸ್ಯರೊಂದಿಗೆ ಯಾವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ರಾಜ್ಯಪಾಲರ ಬಳಿ ಸಮಯ ಕೇಳಿರುವ ಸಿಎಂ?:
ಗುರುವಾರವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಜ್ಯಪಾಲರ ಬಳಿ ಸಿದ್ದರಾಮಯ್ಯ ಸಮಯ ಕೇಳಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಳಿಕ ಸಿದ್ದರಾಮಯ್ಯಗೆ ರಾಜ್ಯಸಭಾ ಸ್ಥಾನದ ಜೊತೆಗೆ ಪಕ್ಷದಲ್ಲಿ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ವಹಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಈ ಸಂಬಂಧ ರಾಹುಲ್ ಗಾಂಧಿ, ಮಂಗಳವಾರ ಹೊಸದಿಲ್ಲಿಯಲ್ಲಿ ನಡೆದ ಮಾತುಕತೆ ವೇಳೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾವು ರಾಜೀನಾಮೆ ಕೊಡಬೇಡಿ ಎಂದು ಹೇಳಿದ್ದೇವೆ. ಆದರೆ, ತಾನು ಹೈಕಮಾಂಡ್ಗೆ ಮಾತು ಕೊಟ್ಟಿದ್ದೇನೆ. ಅದರಂತೆ ನಡೆದುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದರು.
‘ಸಿದ್ದರಾಮಯ್ಯ ಹಳೆಯ ಹುಲಿ’ :
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಖಚಿತತೆ ಇಲ್ಲ. ಏಕೆಂದರೆ ಅವರು ಹಳೆಯ ಹುಲಿ. ರಾಜಕೀಯದಲ್ಲಿ ಅವರು ಯಾವಾಗ ಯಾವ ಆಟ ಆಡುತ್ತಾರೆಂದು ಊಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸರಕಾರ ಕುರ್ಚಿಗಾಗಿ ಹೋರಾಟ ಮಾಡುವುದನ್ನು ನಿಲ್ಲಿಸಿ, ಜನರ ಸಮಸ್ಯೆಗಳ ಕಡೆ ತಕ್ಷಣ ಗಮನ ಹರಿಸಬೇಕು.
ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ
ಸಿದ್ದರಾಮಯ್ಯ ನಿವಾಸದ ಬಳಿ ಗದ್ದಲ :
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಕಾಂಗ್ರೆಸ್ ಹೈಕಮಾಂಡ್ ತಮ್ಮ ನಿರ್ಧಾರವನ್ನು ಹಿಂಪಡೆಯಬೇಕು. ರಾಹುಲ್ ಗಾಂಧಿ ಕೈಗೊಂಡಿರುವ ನಿರ್ಧಾರಕ್ಕೆ ನಮ್ಮ ವಿರೋಧವಿದೆ ಎಂದು ಮುಖ್ಯಮಂತ್ರಿಯ ಅಧಿಕೃತ ನಿವಾಸ ಕಾವೇರಿ ಬಳಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹೇಳಿದ್ದಾರೆ.
‘ರಾಜೀನಾಮೆ ನೀಡಬೇಡಿ ಸರ್’
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರಿಂದ ರಾಜ್ಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಡು ಅಲ್ಲಿನ ಸಿಬ್ಬಂದಿಗಳು ‘ದಯವಿಟ್ಟು ರಾಜೀನಾಮೆ ನೀಡಬೇಡಿ ಸರ್’ ಎಂದು ಕಣ್ಣೀರು ಹಾಕಿದರು. ಸಿಬ್ಬಂದಿಗಳ ಮಾತನ್ನು ಆಲಿಸಿದ ಸಿದ್ದರಾಮಯ್ಯ, ಯಾವುದೆ ಪ್ರತಿಕ್ರಿಯೆ ನೀಡದೆ ತಮ್ಮ ಕಚೇರಿಯತ್ತ ಹೆಜ್ಜೆ ಹಾಕಿದರು.