ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಜೆಡಿಎಸ್ ದೂರು
ಸಾಂದರ್ಭಿಕ ಚಿತ್ರ
ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎಸ್.ಶಿವಣ್ಣ ಅವರು ಕ್ರಿಮಿನಲ್ ಪ್ರಕರಣಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ದೂರು ಸಲ್ಲಿಸಿದೆ.
ಗುರುವಾರ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗೋವಿಂದರಾಜು ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ದೂರ ಸಲ್ಲಿಕೆ ಮಾಡಿದ್ದು, ತಮ್ಮ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಅಫಿಡವಿಟ್ನಲ್ಲಿ ಬಿ.ಎಸ್.ಶಿವಣ್ಣ ಮುಚ್ಚಿಹಾಕಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿದ್ದಾರೆ.
ಬಿ.ಎಸ್.ಶಿವಣ್ಣ ವಿರುದ್ಧ ಒಟ್ಟು ನಾಲ್ಕು ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇದು ಅಫಿಡವಿಟ್ನಲ್ಲಿ ಹಾಕಬೇಕೆಂಬ ನಿಯಮವಿಲ್ಲ ಎಂದು ಮುಚ್ಚಿ ಹಾಕಿದ್ದಾರೆ. ಹೀಗಾಗಿ ತಪ್ಪು ಮಾಹಿತಿ ನೀಡಿರುವ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಅಫಿಡವಿಟ್ನಲ್ಲಿ ಯಾವುದೇ ಅಭ್ಯರ್ಥಿಗಳು ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಇಲ್ಲಿ ಅಭ್ಯರ್ಥಿಯು ಮುಚ್ಚಿ ಹಾಕಿರುವುದರಿಂದ ಇದೊಂದು ಗಂಭೀರ ಸ್ವರೂಪದ ಪ್ರಕರಣವಾಗಿರುವುದರಿಂದ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.