ಲೋಕಸಭಾ ಚುನಾವಣೆ | ಎ.20ರಂದು ರಾಜ್ಯಕ್ಕೆ ಮತ್ತೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

Update: 2024-04-17 14:46 GMT

ಪ್ರಧಾನಿ ನರೇಂದ್ರ ಮೋದಿ (PTI)

ಬೆಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಎ.20ರಂದು ಚಿಕ್ಕಬಳ್ಳಾಪುರಕ್ಕೆ  ಆಗಮಿಸಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗುತ್ತದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಮಧ್ಯ, ಬೆಂಗಳೂರು ಉತ್ತರ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಸಭೆ ಇದಾಗಿದ್ದು, ಸಿದ್ಧತಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಅದೇ ರೀತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸವೂ ಕೂಡ ನಿಗದಿಯಾಗಿದೆ. ಎ.23, 24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸುತ್ತಾರೆ. 23ರಂದು ಬೆಳಿಗ್ಗೆ ಯಶವಂತಪುರದಲ್ಲಿ ರೋಡ್ ಶೋ, ಬಳಿಕ ಯಲಹಂಕದಲ್ಲಿ ಸಾರ್ವಜನಿಕ ಸಭೆ ಇರುತ್ತದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಇರುತ್ತದೆ. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಇರಲಿದೆ ಎಂದು ವಿವರಿಸಿದರು.

ಎ.24ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಹುಬ್ಬಳ್ಳಿ ರೋಡ್ ಶೋ ದಲ್ಲಿ ಪಾಲ್ಗೊಳ್ಳುತ್ತಾರೆ. ಅಂದೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದರು.

(ಸಮೀರ್)

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News