×
Ad

ಮಾದಪಟ್ಟಣ ಕಲ್ಲು ಕ್ವಾರಿ ದುರಂತ: ಸಿಎಂ ಡಿ. ಕೆ ಶಿವಕುಮಾರ್‌ ಸಂತಾಪ

ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರದಿಂದ ಸೂಕ್ತ ಕ್ರಮ : ಸಿಎಂ

Update: 2026-07-02 12:13 IST

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕ್ರಷರ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ.

ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ, ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

"ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದ ಬಳಿ ಕ್ರಷರ್‌ ಬಂಡೆ ಕುಸಿದು 7 ಕಾರ್ಮಿಕರು ಸಾವನ್ನಪ್ಪಿರುವ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಕಾರ್ಮಿಕರ ಸುರಕ್ಷತೆಯನ್ನು ಕಾಪಾಡುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ನಮ್ಮ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ"

ಜಿ.ಪರಮೇಶ್ವರ್‌, ಉಪಮುಖ್ಯಮಂತ್ರಿ

"ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರಕಾರ ನೊಂದ ಕುಟುಂಬ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜತೆಗೆ ಇನ್ನಿತರ ತುರ್ತು ನೆರವು ಒದಗಿಸಬೇಕು. ಜತೆಗೆ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ಕ್ರಮ ವಹಿಸಿ ಸಂಬಂಧಿತ ಇಲಾಖೆ ತೀವ್ರ ನಿಗಾ ಇರಿಸುವಂತೆ ಆದೇಶಿಸಬೇಕು. ಇಂಥ ಕಠಿಣ ಕ್ರಮಗಳು ಆಗದಿರುವ ಕಾರಣಕ್ಕೆ ಈ ರೀತಿಯ ದುರಂತಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಕ್ರಮ ಆಗಿಲ್ಲ ಎನ್ನುವುದು ಅತ್ಯಂತ ಬೇಸರದ ಸಂಗತಿ. ಕ್ವಾರಿ ಮಾಲೀಕರು ಕೂಡ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು"

ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವರು


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News