1,741.60 ಕೋಟಿ ರೂ. ಬಂಡವಾಳ ಹೂಡಿಕೆಯ 63 ಯೋಜನೆಗಳಿಗೆ ಅನುಮೋದನೆ : ಎಂ.ಬಿ.ಪಾಟೀಲ್
ಎಂ.ಬಿ.ಪಾಟೀಲ್
ಬೆಂಗಳೂರು : ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಬುಧವಾರ ಖನಿಜ ಭವನದಲ್ಲಿ ನಡೆದ 153ನೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯು, ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ 1,741.60 ಕೋಟಿ ರೂ.ಬಂಡವಾಳ ಹೂಡಿಕೆಯ 63 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ 7,219 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ದಕ್ಷಿಣ ಕನ್ನಡ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅತ್ಯಾಧುನಿಕ ಫೀಡ್ ಪ್ಲ್ಯಾಂಟ್, ಪ್ರಿಫ್ಯಾಬ್ರಿಕೇಟೆಡ್ ಮ್ಯಾಡುಲರ್, ಬಸ್ ಬಾಡಿ ಬಿಲ್ಡಿಂಗ್, ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಮತ್ತು ಬಿಡಿಭಾಗ ತಯಾರಿಕೆ ಸೇರಿದಂತೆ 60 ಯೋಜನೆಗಳು ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳು ಒಳಗೊಂಡಂತೆ 63 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಅನುಮೋದನೆ ಪಡೆದ ಯೋಜನೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿ ತಾಲೂಕಿನಲ್ಲಿ 125.88 ಕೋಟಿ ರೂ.ವೆಚ್ಚದ ಅತ್ಯಾಧುನಿಕ ಫೀಡ್ ಪ್ಲ್ಯಾಂಟ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 97.52 ಕೋಟಿ ರೂ.ವೆಚ್ಚದ ಪ್ರಿಫ್ಯಾಬ್ರಿಕೇಟೆಡ್ ಮಾಡ್ಯುಲರ್ ಪ್ರಾಡಕ್ಟ್ಟ್ ಘಟಕ, ತುಮಕೂರು ಜಿಲ್ಲೆಯ ಹಿರೇಹಳ್ಳಿಯಲ್ಲಿ 91.2 ಕೋಟಿ ರೂ. ವೆಚ್ಚದ ಟ್ರಾನ್ಸ್ ಫಾರ್ಮರ್ ರೇಡಿಯೇಟರ್ ತಯಾರಿಕಾ ಘಟಕ ಸ್ಥಾಪನೆ ಪ್ರಮುಖವಾಗಿವೆ ಎಂದು ಅವರು ಹೇಳಿದ್ದಾರೆ.
50 ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್ ಹಾಗೂ ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 593.80 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. 2,093 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. 15 ಕೋಟಿ ರೂ.ಗಳಿಂದ 50 ಕೋಟಿ ರೂ. ಒಳಗಿನ 53 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 1,106.6 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. 4,961 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಂದ 41.20 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. 165 ಜನರಿಗೆ ಉದ್ಯೋಗ ಅವಕಾಶ ದೊರೆಯಲಿವೆ ಎಂದು ಎಂ.ಬಿ.ಪಾಟೀಲ್ ವಿವರಿಸಿದ್ದಾರೆ.
ಸಭೆಯಲ್ಲಿ ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಎನ್.ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ರಾಹುಲ್ ಎಸ್.ಸಂಕನೂರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.