ಬಸ್ ಪ್ರಯಾಣ ದರ ಏರಿಕೆ; ಪರಿಶೀಲಿಸಲು ಸೂಚನೆ : ಸಚಿವ ಬೈರತಿ ಸುರೇಶ್
Update: 2026-08-18 20:37 IST
ಬೆಂಗಳೂರು : ತೈಲೋತ್ಪನ್ನಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಪರಿಶೀಲಿಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಅಧ್ಯಕ್ಷ ಅತುಲ್ ಕುಮಾರ್ ತಿವಾರಿ ನೇತೃತ್ವದಲ್ಲಿ ಟಿಕೆಟ್ ದರಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಸಮಿತಿ ನಾಲ್ಕೂ ನಿಗಮಗಳಿಗೆ ಖುದ್ದು ಭೇಟಿ ನೀಡಿ ಶೀಘ್ರದಲ್ಲೇ ವರದಿ ನೀಡಲಿದೆ ಎಂದರು.
ಆ ಸಮಿತಿ ವರದಿ ಸಲ್ಲಿಸಿದ ಬಳಿಕ ಬಸ್ ಪ್ರಯಾಣ ದರ ಏರಿಕೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಲಿದ್ದು, ಆ ಬಳಿಕ ಸಂಪುಟದ ಮುಂದೆ ತಂದು ದರ ಏರಿಕೆ ಸಂಬಂಧ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.