ಬೆಂಗಳೂರು : ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ಪಡಿತರ ಪಡೆಯಲು ತೊಂದರೆಯಾಗುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ತಾಂತ್ರಿಕ ತಂಡದೊಂದಿಗೆ ಆದ್ಯತೆ ಮೇರೆಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಸಚಿವ ರಿಝ್ವಾನ್ ಅರ್ಶದ್ ತಿಳಿಸಿದ್ದಾರೆ.

ಅಸ್ತಿತ್ವದಲ್ಲಿರುವ ಸಾಫ್ಟ್‌ ವೇರ್‌ ನ ಸಾಮಥ್ರ್ಯವನ್ನು ಪರಿಶೀಲಿಸಲು ಲೋಡ್ ಟೆಸ್ಟಿಂಗ್ ನಡೆಸಿ, ಅಗತ್ಯಕ್ಕೆ ಅನುಗುಣವಾಗಿ ಸಾಫ್ಟ್‌ ವೇರ್ ಅನ್ನು ಉನ್ನತೀಕರಿಸುವಂತೆ ತಾಂತ್ರಿಕ ತಂಡ ಸಲಹೆ ನೀಡಿದೆ. ಸರ್ವರ್ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಿ, ಅರ್ಹ ಫಲಾನುಭವಿಗಳಿಗೆ ಯಾವುದೇ ಅನಗತ್ಯ ತೊಂದರೆಯಾಗದಂತೆ ಸಕಾಲದಲ್ಲಿ ಪಡಿತರ ದೊರೆಯುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಪಡಿತರ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಸುಗಮ, ಪರಿಣಾಮಕಾರಿ ಹಾಗೂ ವಿಶ್ವಾಸಾರ್ಹಗೊಳಿಸಲು ಸಾಫ್ಟ್‌ ವೇರ್ ಉನ್ನತೀಕರಣ ಸೇರಿದಂತೆ ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಉತ್ತಮ ಹಾಗೂ ತಡೆರಹಿತ ಸೇವೆ ಒದಗಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ರಿಝ್ವಾನ್ ಅರ್ಶದ್ ತಿಳಿಸಿದ್ದಾರೆ.

ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲಾವಾರು ನಿಗದಿಪಡಿಸಿರುವ ಆಹಾರ ಧಾನ್ಯಗಳ ಕೋಟಾದ ಎತ್ತುವಳಿಯನ್ನು ಚುರುಕುಗೊಳಿಸಲಾಗುತ್ತಿದೆ. ಧಾರವಾಡ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಗದಗ, ಹಾಸನ, ಉಡುಪಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳು ಈಗಾಗಲೇ ಶೇ.100ರಷ್ಟು ಆಹಾರ ಧಾನ್ಯಗಳನ್ನು ಎತ್ತುವಳಿ ಮಾಡಿಕೊಂಡು ಮುಂಚೂಣಿಯಲ್ಲಿವೆ ಎಂದು ಅವರು ಹೇಳಿದ್ದಾರೆ.

ಕಡಿಮೆ ಪ್ರಮಾಣದ ಎತ್ತುವಳಿ ಇರುವ ಜಿಲ್ಲೆಗಳಲ್ಲಿ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಿ, ಈ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಶೇ.100ರಷ್ಟು ಆಹಾರ ಧಾನ್ಯಗಳ ಎತ್ತುವಳಿ ಪೂರ್ಣಗೊಳ್ಳುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಿಝ್ವಾನ್ ಅರ್ಶದ್ ತಿಳಿಸಿದ್ದಾರೆ

ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ನಮ್ಮ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರಕಾರದ ಸೂಚನೆಯಂತೆ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸರ್ವರ್ ಮೇಲೆ ಹೆಚ್ಚಿದ ಒತ್ತಡ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಪಾಲುದಾರರೊಂದಿಗೆ ಸಭೆ ನಡೆಸಿ, ಸಾಫ್ಟ್‌ ವೇರ್‌ ನ ಸಾಮಥ್ರ್ಯವನ್ನು ಪರಿಶೀಲಿಸಲು ಲೋಡ್ ಟೆಸ್ಟಿಂಗ್ ನಡೆಸಲಾಗಿದೆ. ಅಗತ್ಯವಿರುವಂತೆ ಸಾಫ್ಟ್‌ ವೇರ್ ಉನ್ನತೀಕರಣಕ್ಕೆ ತಾಂತ್ರಿಕ ತಂಡಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಪಡಿತರ ವಿತರಣಾ ವ್ಯವಸ್ಥೆಯನ್ನು ಹೆಚ್ಚು ಸುಗಮ, ವೇಗ, ಪರಿಣಾಮಕಾರಿ ಹಾಗೂ ವಿಶ್ವಾಸಾರ್ಹಗೊಳಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರ ಹಕ್ಕಿನ ಪಡಿತರವನ್ನು ತಲುಪಿಸುವಲ್ಲಿ ಯಾವುದೇ ರಾಜಿ ಇಲ್ಲ. ಅರ್ಹ ಪ್ರತಿಯೊಬ್ಬ ಫಲಾನುಭವಿಗೂ ಸಕಾಲದಲ್ಲಿ ಪಡಿತರ ತಲುಪಿಸುವುದು ನಮ್ಮ ಬದ್ಧತೆ ಎಂದು ರಿಝ್ವಾನ್ ಅರ್ಶದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor