ಮುಳ್ಳಯ್ಯನಗಿರಿಯನ್ನು ಸಂರಕ್ಷಿತ ಮೀಸಲು ಪ್ರದೇಶವೆಂದು ಘೋಷಿಸಲು ಕೋರಿ ಅರ್ಜಿ; ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್

Update: 2026-07-30 20:57 IST

ಬೆಂಗಳೂರು: ಪಶ್ಚಿಮಘಟ್ಟದ ಭಾಗವಾಗಿರುವ ಚಂದ್ರದ್ರೋಣ ಪರ್ವತ ಖ್ಯಾತಿಯ ಪರಿಸರ ಸೂಕ್ಷ್ಮ ಮುಳ್ಳಯ್ಯನಗಿರಿ ಬೆಟ್ಟದ ಇಡೀ ಪ್ರದೇಶವನ್ನು ತಕ್ಷಣ 'ಸಂರಕ್ಷಿತ ಮೀಸಲು ಪ್ರದೇಶ' ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಚಿಕ್ಕಮಗಳೂರಿನ ದಿ ಭದ್ರಾ ವೈಲ್ಡ್ ಲೈಫ್ ಕನ್ಸರ್ವೇಷನ್ ಟ್ರಸ್ಟ್‌ನ ಟ್ರಸ್ಟೀ ಹಾಗೂ ಪರಿಸರವಾದಿ ಡಿ. ವಿ. ಗಿರೀಶ್ ಮತ್ತು ವೈಲ್ಡ್ ಲೈಫ್ ಕನ್ಸರ್ವೇಷನ್ ಆ್ಯಕ್ಷನ್ ಟೀಮ್‌ನ ವ್ಯವಸ್ಥಾಪಕ ಟ್ರಸ್ಟೀ ಶ್ರೀದೇವ್ ಹುಲಿಕೆರೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು‌.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್), ಚಿಕ್ಕಮಗಳೂರು ಜಿಲ್ಲಾಧಿಕಾರಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು.

ಅರ್ಜಿಯಲ್ಲೇನಿದೆ?

ವನ್ಯಜೀವಿ (ಸಂರಕ್ಷಣಾ) ಕಾಯ್ದೆ-1972ರ ಸೆಕ್ಷನ್ 36ಎ ಅನ್ವಯ ಮುಳ್ಳಯ್ಯನಗಿರಿ ಬೆಟ್ಟದ 14 ಸಾವಿರ ಎಕರೆ ಪ್ರದೇಶವನ್ನು 'ಸಂರಕ್ಷಿತ ಮೀಸಲು ಪ್ರದೇಶ' ಎಂದು ಘೋಷಿಸುವಂತೆ ಚಿಕ್ಕಮಗಳೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಯು ರಾಜ್ಯ ಸರ್ಕಾರಕ್ಕೆ ಕರಡು ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಹಲವು ಬಾರಿ ಮನವಿಗಳನ್ನು ಕೊಟ್ಟರೂ ಯಾವುದೇ ಕ್ರಮ ಜರುಗಿಸಲಾಗಿಲ್ಲ. ಈಗ ಸಂರಕ್ಷಿತ ಮೀಸಲು ಪ್ರದೇಶದ ವ್ಯಾಪ್ತಿಯನ್ನು 10 ಸಾವಿರ ಎಕರೆಗೆ ಇಳಿಸಲಾಗಿದೆ ಎಂದು ಹೇಳಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಆದ್ದರಿಂದ, ಮುಳ್ಳಯ್ಯನಗಿರಿ ಬೆಟ್ಟದ ಇಡೀ ಪ್ರದೇಶವನ್ನು ತಕ್ಷಣದಿಂದಲೇ ಸಂರಕ್ಷಿತ ಮೀಸಲು ಪ್ರದೇಶವೆಂದು ಘೋಷಿಸಬೇಕು. ಇದರ ನಿರ್ವಹಣೆಗೆ ವ್ಯವಸ್ಥಾಪನಾ ಸಮಿತಿ ರಚಿಸಬೇಕು, ಬೆಟ್ಟದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳು ಮತ್ತು ಅದಕ್ಕೆ ನೀಡಲಾಗುವ ಹಣಕಾಸಿನ ನೆರವು ತಕ್ಷಣ ನಿಲ್ಲಿಸಬೇಕು ಎಂದು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News