‘ಗೃಹಲಕ್ಷ್ಮಿ ಯೋಜನೆ’ಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು : ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : ರಾಜ್ಯ ಸರಕಾರದ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿ ಮನೆಯ ಯಜಮಾನಿ(ಮಹಿಳೆ) ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ.
ಶನಿವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ನಿಧನರಾಗಿದ್ದು, ಅವರ ಹೆಸರಲ್ಲಿ ಬೇರೆಯವರು 100ಕೋಟಿ ರೂಪಾಯಿಗೂ ಹೆಚ್ಚು ಹಣ ಪಡೆದಿರುವುದು ಸರಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಅಥವಾ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಹೀಗಾಗಿ ಎಲ್ಲ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ನಾವು ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರನ್ನೂ ತೆಗೆದುಹಾಕುವ ಉದ್ದೇಶವು ರಾಜ್ಯ ಸರಕಾರಕ್ಕಿಲ್ಲ. ಸರಿಯಾದ ಮಾಹಿತಿ ನೀಡುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬುದು ಸರಕಾರದ ಉದ್ದೇಶ. ಹೀಗಾಗಿ, ಗೃಹಲಕ್ಷ್ಮೀ ಯೋಜನೆಯ ಎಲ್ಲ ಫಲಾನುಭವಿಗಳು ಮತ್ತೆ ಅರ್ಜಿ ಹಾಕಬೇಕಿದೆ ಎಂದು ತಿಳಿಸಿದರು.
‘ಗೃಹಜ್ಯೋತಿ ಯೋಜನೆ’ ಪರಿಶೀಲನೆ ಮಾಡಬೇಕಿದೆ :
ಇನ್ನೊಂದೆಡೆ ‘ಗೃಹಜ್ಯೋತಿ ಯೋಜನೆ’ ಅಡಿಯಲ್ಲಿನ ಫಲಾನುಭವಿಗಳ ಸಂಬಂಧ ಗೊಂದಲವಿದ್ದು, ಒಬ್ಬರ ಹೆಸರಿನಲ್ಲಿ ಐದಾರು ವಿದ್ಯುತ್ ಮೀಟರ್ಗಳಿವೆ. ಆ ಮನೆಯಲ್ಲಿ ಅವರೇ ವಾಸವಿದ್ದಾರಾ? ಅಥವಾ ಬೇರೆಯವರು ಇದ್ದಾರೆಯೇ? ಎಂದು ಗೊತ್ತಾಗುತ್ತಿಲ್ಲ. ಈ ಯೋಜನೆ ನಮ್ಮ ರಾಜ್ಯದವರಿಗೆ ಸಿಗುತ್ತಿದೆಯೇ ಅಥವಾ ಬೇರೆ ರಾಜ್ಯದವರಿಗೆ ಸಿಗುತ್ತಿದೆಯೇ? ಎಂದು ಪರಿಶೀಲನೆ ಮಾಡಬೇಕಿದೆ ಎಂದು ಅವರು ವಿವರಿಸಿದರು.
ನಿಧಿ ಬಳಕೆಗೆ ನೀತಿ ರಚನೆ: ನಾವು ನೂತನ ‘ಸಿಎಸ್ಆರ್’ ನೀತಿ ಜಾರಿಗೆ ಮುಂದಾಗಿದ್ದು, ಕಂಪೆನಿಗಳು ತಮ್ಮ ವಾರ್ಷಿಕ ಆದಾಯದ ಶೇ.2ರಷ್ಟು ಹಣವನ್ನು ಸಿಎಸ್ಆರ್ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂಬ ನಿರ್ದೇಶನವಿದೆ. ಈ ನಿಧಿಯನ್ನು ಗ್ರಾಮೀಣ ಭಾಗದ ಶಾಲೆಗಳ ನಿರ್ಮಾಣಕ್ಕೆ ಬಳಸಲು ತೀರ್ಮಾನಿಸಲಾಗಿದೆ.
ಹಳ್ಳಿಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಮೂಲಸೌಕರ್ಯ ಒದಗಿಸಲು ತೀರ್ಮಾನಿಸಲಾಗಿದೆ. ಖಾಸಗಿ ಶಾಲೆಗಳು ಈ ಗ್ರಾಮೀಣ ಭಾಗದ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು. ಸರಕಾರಿ ಶಾಲೆಗಳಲ್ಲಿ ನಗರ ಪ್ರದೇಶದಲ್ಲಿ ಸಿಗುವ ಶಿಕ್ಷಣ, ಸಿಗುವಂತೆ ಮಾಡಬೇಕು ಎಂದು ಶಿವಕುಮಾರ್ ಮಾಹಿತಿ ನೀಡಿದರು.
ಉದ್ಯೋಗ: ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಖಾಸಗಿ ಉದ್ಯೋಗ ವಿನಿಮಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಖಾಸಗಿ ವಲಯದಲ್ಲಿ ಉದ್ಯೋಗ ಬಯಸುವವರು ಇಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಉದ್ಯೋಗಿಗಳು ಅಗತ್ಯವಿರುವ ಕಂಪೆನಿಗಳು ತಮಗೆ ಬೇಕಾಗಿರುವ ಉದ್ಯೋಗಿಗಳ ಅರ್ಹತೆ ಮತ್ತು ಸಂಖ್ಯೆಯ ಮಾಹಿತಿ ನೀಡುತ್ತಾರೆ. ಇಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮಾಡಲಾಗುವುದು. ಕಂಪೆನಿಗಳಿಗೆ ಶೇ.100ರಷ್ಟು ಸ್ಥಳೀಯರನ್ನೆ ತೆಗೆದುಕೊಳ್ಳಿ ಎಂದು ಹೇಳಲು ಆಗುವುದಿಲ್ಲ. ಇದಕ್ಕಾಗಿ ನಿರ್ದಿಷ್ಟ ಪ್ರಮಾಣ ನಿಗದಿ ಮಾಡಲಾಗುವುದು. ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಸೇತುವೆ ನಿರ್ಮಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಅದೇ ರೀತಿ, ನನ್ನ ಕನಸಿನ ಕಾರ್ಯಕ್ರಮ ‘ಭಾರತ ಜೋಡೋ ಯುವಕರ ಸಂಘ’ ನಿರ್ಮಿಸಲು ಮುಂದಾಗಿದ್ದೇವೆ. ರಾಜ್ಯದಲ್ಲಿ 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, 4 ಸಾವಿರ ನಗರ ಪ್ರದೇಶದ ವಾರ್ಡ್ಗಳಿವೆ. ಈ ಭಾಗದಲ್ಲಿ ಯುವಕರ ಸೌಹಾರ್ದತೆಗೆ ಹಾಗೂ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಇದು ರಾಜಕೀಯೇತ್ತರ ಸಂಘಗಳಾಗಿದ್ದು, 16 ವರ್ಷಗಳಿಂದ 35 ಅಥವಾ 40 ವರ್ಷಗಳ ವರೆಗಿನವರು ಈ ಸಂಘಗಳ ಸದಸ್ಯರಾಗಬಹುದು. ವಯೋಮಿತಿಯನ್ನು ಶೀಘ್ರವೇ ತೀರ್ಮಾನಿಸಲಾಗುವುದು. ಕ್ರೀಡೆ, ಸಾಂಸ್ಕೃತಿಕ, ನಾಯಕತ್ವ ಪ್ರತಿಭೆ ಹೆಚ್ಚಿಸಲು ಅವಕಾಶ ಕಲ್ಪಿಸಲಾಗುವುದು. ರಾಜಕೀಯ ಹಸ್ತಕ್ಷೇಪವಿಲ್ಲದೇ ಸಂಘಗಳ ರಚನೆಗೆ ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಅವರು ಪ್ರಕಟಿಸಿದರು.
ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಯು.ಟಿ.ಖಾದರ್, ಕೃಷ್ಣಭೈರೇಗೌಡ, ಡಾ.ಯತೀಂದ್ರ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಕಾರ್ಯದರ್ಶಿ ರಾಜೇಂದ್ರ ಚೋಳನ್ ಸೇರಿದಂತೆ ಪ್ರಮುಖರಿದ್ದರು.
‘ಗ್ಯಾರೆಂಟಿ ಚೀಟಿ ಕೊಡುತ್ತೇವೆ’: ‘ಪ್ರಮುಖವಾಗಿ ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುತ್ತಿರುವವರು ಮನೆಯ ನಿಜವಾದ ಯಜಮಾನಿಯೇ ಎಂದು ತಿಳಿದುಕೊಳ್ಳಬೇಕಲ್ಲವೇ? ಒಂದು ಮನೆಗೆ ಒಬ್ಬರು ಮನೆ ಯಜಮಾನಿಯರನ್ನು ಆಯ್ಕೆ ಮಾಡಿಕೊಳ್ಳಬೇಕು. ಒಂದೇ ಮನೆಯಲ್ಲಿ ಇಬ್ಬರು ಮೂವರು ಯಜಮಾನಿಯರಿದ್ದರು ಅದನ್ನು ಪರಿಶೀಲನೆ ಮಾಡುತ್ತೇವೆ. ಜತೆಗೆ, ಮುಂದೆ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳಿಗೆ ನಾವು ಗುರುತಿನ ಚೀಟಿ ನೀಡುತ್ತೇವೆ’
-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ