×
Ad

ಮಹಿಳಾ ಕೇಂದ್ರಿತ ʼಗ್ಯಾರಂಟಿʼಗಳ ಅನುಷ್ಠಾನದಿಂದ ಲಿಂಗಸಮಾನತೆ : ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

Update: 2025-02-07 19:58 IST

ಬೆಂಗಳೂರು : ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‍ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.

ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೊಟೇಲ್‍ನಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.

ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು, ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ, ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ, ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿ ನೀಡಿದರು.

ಮಹಿಳೆಯರು ಸ್ವಸಹಾಯ ಗುಂಪುಗಳನ್ನು ಸಂಘಟಿಸಲು, ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ  ಪ್ರೊತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿಯನ್ನು ಶ್ಲಾಘಿಸಿದ ವಿಶ್ವಸಂಸ್ಥೆಯ ಅಧ್ಯಕ್ಷರು, ಮುಂಬರುವ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಸಲಹೆ ನೀಡಿದರು, ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ನವೀಕರಿಸಬಹುದಾದ ಇಂಧನ ಉತ್ಪಾದನೆ ರಾಜ್ಯಕ್ಕೆ ಅಗ್ರಸ್ಥಾನ: ಒಟ್ಟು ಇಂಧನ ಉತ್ಪಾದನೆಯಲ್ಲಿ ಶೇ.40ರಷ್ಟು ಪಾಲು ನವೀಕರಿಸಬಹುದಾದ ಮೂಲಗಳಿಂದ ಬರುತ್ತಿರುವುದರಿಂದ ಕರ್ನಾಟಕವು ಶುದ್ಧ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದಕ್ಕೆ ವಿಶ್ವಸಂಸ್ಥೆಯ ಅಧ್ಯಕ್ಷರು ಸಂತೋಷ ವ್ಯಕ್ತಪಡಿಸಿದರು.

ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿ ಮತ್ತೆ, ಸಂಶೋಧನೆ ಮತ್ತು ನಾವೀನ್ಯತೆಗಾಗಿ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕವು ಸಾಧಿಸಿರುವ ಪ್ರಗತಿಯನ್ನು ಮೆಚ್ಚಿದ ಅವರು, ಇತರ ದೇಶಗಳಿಗೆ ಡಿಜಿಟಲ್ ರೂಪಾಂತರವನ್ನು ಉತ್ತೇಜಿಸುವ ಸಲುವಾಗಿ ಸಹಾಯದ ಅಗತ್ಯವಿದ್ದು, ರಾಜ್ಯದ ಬೆಂಬಲವನ್ನು ಕೋರಿದರು. ರಾಜ್ಯ, ಜಿಲ್ಲೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಸೂಚಕಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಕರ್ನಾಟಕ ರಚಿಸಿದ ಸುಸ್ಥಿರ ಅಭಿವೃದ್ದಿ ಗುರಿಗಳ ಡ್ಯಾಶ್‍ಬೋರ್ಡ್ ವೀಕ್ಷಿಸಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಿ.ಸತ್ಯವತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News