ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು
ಪ್ರವೀಣ್ ನೆಟ್ಟಾರು
ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನೌಷಾದ್(32) ಮತ್ತು ಅಬ್ದುಲ್ ನಾಸಿರ್(41) ಎಂದು ಗುರುತಿಸಲಾಗಿದೆ. ಎನ್ಐಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿಯಾದ ನೌಶಾದ್ನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಿವಾಸಿಯಾದ ಅಬ್ದುಲ್ ನಾಸಿರ್ನನ್ನು ಕೇರಳದ ಕೊಚ್ಚಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣದ ಒಟ್ಟು 27 ಜನ ಆರೋಪಿಗಳ ಪಟ್ಟಿಯಲ್ಲಿ ಬಂಧಿತರಿಬ್ಬರ ಹೆಸರನ್ನೂ ಸೇರಿಸಲಾಗಿತ್ತು. ಕೃತ್ಯ ಎಸಗಿದ್ದ ಮುಖ್ಯ ಶೂಟರ್ ಗಳು ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಬಂಧಿತರಿಬ್ಬರು ನೆರವಾಗಿದ್ದರು. ಅಲ್ಲದೆ, ಪ್ರಮುಖ ಆರೋಪಿಗಳಿಗೆ ಮೈಸೂರು, ಚಾಮರಾಜನಗರ ಹಾಗೂ ತಮಿಳುನಾಡಿನ ಈರೋಡ್ನಲ್ಲಿ ಸುರಕ್ಷಿತವಾಗಿ ಅಡಗಿಕೊಳ್ಳಲು ರಹಸ್ಯ ಅಡಗುತಾಣಗಳ ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂಬ ಆರೋಪ ಬಂಧಿತರ ಮೇಲೆ ಇದೆ ಎಂದು ಎನ್ಐಎ ಅಧಿಕಾರಿಗಳು ಹೇಳಿದ್ದಾರೆ.