ಅಗ್ನಿಶಾಮಕ, ವಿಪತ್ತು ನಿರ್ವಹಣಾ ಸೇವೆಗಳನ್ನು ಬಲಪಡಿಸಲು ಕ್ರಮ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ರಾಜ್ಯದ ಜನಸಂಖ್ಯೆ ಹಾಗೂ ಕೈಗಾರಿಕಾ ವಿಸ್ತರಣೆಗೆ ಅನುಗುಣವಾಗಿ ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ಸೇವೆಗಳನ್ನು ಮರುಪರಿಶೀಲಿಸಿ, ಬಲಪಡಿಸಲು ಕ್ರಮ ವಹಿಸಲಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.
ಶನಿವಾರ ನಗರದಲ್ಲಿರುವ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆಯ ಮುಖ್ಯ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮುಂಬಡ್ತಿ, ಸೇವಾ ಸೌಲಭ್ಯಗಳು ಮತ್ತು ಕಲ್ಯಾಣ ಕ್ರಮಗಳ ಕುರಿತು ಸರಕಾರ ಸಕಾರಾತ್ಮಕವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.
ರಾಜ್ಯವು ವೇಗವಾಗಿ ಕೈಗಾರಿಕೀಕರಣ, ನಗರೀಕರಣ ಹಾಗೂ ತಂತ್ರಜ್ಞಾನ ಆಧಾರಿತ ನವೋದ್ಯಮಗಳ ಬೆಳವಣಿಗೆಯತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಹಲವು ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಅಗ್ನಿಶಾಮಕ ಹಾಗೂ ವಿಪತ್ತು ನಿರ್ವಹಣಾ ಸೇವೆಗಳ ಸಮಗ್ರ ನೀಲನಕ್ಷೆ ಸಿದ್ಧಪಡಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆಧುನಿಕ ತಂತ್ರಜ್ಞಾನ, ಮೂಲಸೌಕರ್ಯ, ಮಾನವ ಸಂಪನ್ಮೂಲ, ತರಬೇತಿ ಮತ್ತು ತುರ್ತು ಸ್ಪಂದನಾ ಸಾಮಥ್ರ್ಯವನ್ನು ಒಳಗೊಂಡ ಕಾರ್ಯತಂತ್ರ ರೂಪಿಸಬೇಕು. ಹಾಗೆಯೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದರ ಜೊತೆಗೆ ಅಗತ್ಯವಿರುವ ಹೊಸ ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಇದಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಅವರು ಹೇಳಿದರು.
ಗೃಹರಕ್ಷಕ ಪಡೆಯನ್ನು ಇನ್ನಷ್ಟು ಸಮರ್ಥವಾಗಿ ಬಳಸಿಕೊಳ್ಳಲು ಸಮಗ್ರ ಕಾರ್ಯಸೂಚಿ ರೂಪಿಸಬೇಕು. ಗೃಹರಕ್ಷಕರ ಸೇವೆಯನ್ನು ವಿವಿಧ ಸಾರ್ವಜನಿಕ ಭದ್ರತೆ ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಗೃಹರಕ್ಷಕ ಪಡೆಯ ಸಿಬ್ಬಂದಿಯ ಸೇವಾ ಸೌಲಭ್ಯಗಳು ಹಾಗೂ ಗೌರವಧನವನ್ನು ಹೆಚ್ಚಿಸಲು ಅಗತ್ಯ ಪ್ರಸ್ತಾವವನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ನಂಜುಂಡಸ್ವಾಮಿ ಹಾಗೂ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
‘ಅಡುಗೆ ಅನಿಲ ಸೋರಿಕೆಯಿಂದ ಉಂಟಾಗುವ ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಗ್ನಿಶಾಮಕ ಸಿಬ್ಬಂದಿಗೆ ವಿಶೇಷ ತಾಂತ್ರಿಕ ತರಬೇತಿ ನೀಡುವ ವ್ಯವಸ್ಥೆ ರೂಪಿಸಲಾಗುತ್ತದೆ. ಈ ತರಬೇತಿ ಕಾರ್ಯಕ್ರಮಗಳಿಗೆ ಅಗತ್ಯವಾಗುವ ವೆಚ್ಚವನ್ನು ಅಡುಗೆ ಅನಿಲ ಸರಬರಾಜು ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಅಥವಾ ಇತರೆ ವ್ಯವಸ್ಥೆಗಳ ಮೂಲಕ ಭರಿಸಲು ಉದ್ದೇಶಿಸಲಾಗಿದೆ’
-ಪ್ರಿಯಾಂಕ್ ಖರ್ಗೆ, ಗೃಹ ಸಚಿವ