ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಬಲಪಡಿಸಲು ಎಚ್.ಎಸ್.ಎಂ ಉನ್ನತೀಕರಣ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ರಾಜ್ಯದ ವಿವಿಧ ಸರಕಾರಿ ಇಲಾಖೆಗಳಲ್ಲಿ ಬಳಸಲಾಗುತ್ತಿರುವ ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಾರ್ಡ್ವೇರ್ ಸೆಕ್ಯುರಿಟಿ ಮಾಡ್ಯೂಲ್(ಎಚ್ಎಸ್ಎಂ) ಅನ್ನು ಉನ್ನತೀಕರಿಸುವ ಕಾರ್ಯವನ್ನು ರಾಜ್ಯ ಸರಕಾರ ಕೈಗೊಂಡಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದು ಸಾಮಾನ್ಯ ನಿರ್ವಹಣಾ ಕಾರ್ಯವಲ್ಲ; ರಾಜ್ಯದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಮತ್ತಷ್ಟು ಸುರಕ್ಷಿತ, ವಿಶ್ವಾಸಾರ್ಹ ಹಾಗೂ ಭವಿಷ್ಯದ ಅಗತ್ಯಗಳಿಗೆ ಸಜ್ಜುಗೊಳಿಸುವ ತಾಂತ್ರಿಕ ಸುಧಾರಣೆಯಾಗಿದೆ ಎಂದು ಅವರು ಹೇಳಿದ್ದಾರೆ.
ನಾಗರಿಕ ಸೇವೆಗಳ ಪರಿಣಾಮಕಾರಿ ವಿತರಣೆಗೆ ಸುರಕ್ಷಿತ ಡಿಜಿಟಲ್ ವ್ಯವಸ್ಥೆಗಳು ಅತ್ಯಗತ್ಯ. ಸರಕಾರದ ಪ್ರಮುಖ ಡಿಜಿಟಲ್ ಮೂಲಸೌಕರ್ಯಗಳನ್ನು ಅತ್ಯಾಧುನಿಕ ಭದ್ರತಾ ಮಾನದಂಡಗಳಿಗೆ ಅನುಗುಣವಾಗಿ ನಿರಂತರವಾಗಿ ಬಲಪಡಿಸುವ ಕಾರ್ಯವನ್ನು ನಾವು ಕೈಗೊಳ್ಳುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಆಧಾರ್ ದೃಢೀಕರಣ ಸೇವೆಯಲ್ಲಿ ಬಳಸುವ ಎನ್ಕ್ರಿಪ್ಷನ್ ಕೀಗಳನ್ನು ಸುರಕ್ಷಿತವಾಗಿ ನಿರ್ವಹಿಸುವ ಪ್ರಮುಖ ವ್ಯವಸ್ಥೆಯಾದ ಎಚ್.ಎಸ್.ಎಂ ಮೂಲಕ ರಾಜ್ಯದ ವಿವಿಧ ಸರಕಾರಿ ಇಲಾಖೆಗಳಲ್ಲಿ ಪ್ರತಿದಿನ ಸುಮಾರು 10 ರಿಂದ 12 ಲಕ್ಷ ಆಧಾರ್ ದೃಢೀಕರಣ ವ್ಯವಹಾರಗಳು ನಡೆಯುತ್ತಿವೆ. ಈ ಉನ್ನತೀಕರಣದ ಭಾಗವಾಗಿ ಇತ್ತೀಚಿನ ಭದ್ರತಾ ಪ್ಯಾಚ್ಗಳು, ಬಗ್ ಫಿಕ್ಸ್ ಗಳು ಹಾಗೂ ಒ.ಇ.ಎಂ ಬೆಂಬಲಿತ ತಂತ್ರಾಂಶ ನವೀಕರಣಗಳನ್ನು ಅಳವಡಿಸಲಾಗುತ್ತಿದೆ ಎಂದು ಅವರು ನುಡಿದಿದ್ದಾರೆ.
ಈ ಕಾರ್ಯವನ್ನು ಸಾರ್ವಜನಿಕ ಸೇವೆಗಳಿಗೆ ಹೆಚ್ಚಿನ ತೊಂದರೆ ಉಂಟಾಗುವಂತೆ ಜು.31, ಆ.1 ಮತ್ತು 2ರಂದು ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯ ವರೆಗೆ ಕಚೇರಿ ವೇಳೆಯ ನಂತರ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿರುವ ಅವರು, ಸಾರ್ವಜನಿಕರಿಗೆ ಆಗಬಹುದಾದ ಅನಾನುಕೂಲವನ್ನು ಸಾಧ್ಯವಾದಷ್ಟು ಕಡಿಮೆಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸುರಕ್ಷಿತ, ವಿಶ್ವಾಸಾರ್ಹ ಮತ್ತು ಭವಿಷ್ಯೋನ್ಮುಖ ಡಿಜಿಟಲ್ ಆಡಳಿತ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮ ಸರಕಾರದ ಆದ್ಯತೆಯಾಗಿದೆ. ನಾಗರಿಕರ ಡಿಜಿಟಲ್ ಮಾಹಿತಿಯ ಭದ್ರತೆ ಹಾಗೂ ಸೈಬರ್ ಸ್ಥೈರ್ಯವನ್ನು ಇನ್ನಷ್ಟು ಬಲಪಡಿಸಲು ನಾವು ನಿರಂತರವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ಭರವಸೆ ನೀಡಿದ್ದಾರೆ.