‘ಉದ್ಯೋಗ ನಿಧಿ’ ಯೋಜನೆಯಡಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ರಾಜ್ಯದ ಹನ್ನೊಂದು ಹಿಂದುಳಿದ ಜಿಲ್ಲೆಗಳಲ್ಲಿ ಕೈಗಾರಿಕಾ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಮಹತ್ವಾಕಾಂಕ್ಷೆಯ ‘ಉದ್ಯೋಗ ನಿಧಿ’ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಜಿಲ್ಲೆಗಳಲ್ಲಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿಯನ್ನಿಟ್ಟುಕೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಶುಕ್ರವಾರ ಪ್ರಕಟನೆ ಹೊರಡಿಸಿರುವ ಅವರು, ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಮತ್ತು ಬಾಗಲಕೋಟೆ ಸೇರಿದಂತೆ ಅಭಿವೃದ್ಧಿಯಲ್ಲಿ ಹಿಂದುಳಿದ 11 ಜಿಲ್ಲೆಗಳಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ ಹಾಗೂ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಉದ್ಯಮಗಳ ವಿಸ್ತರಣೆಗೆ ಈ ಯೋಜನೆ ಉತ್ತೇಜನ ನೀಡಲಿದೆ ಎಂದಿದ್ದಾರೆ.
ಯೋಜನೆಯಡಿ ಅರ್ಹ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ಹೆಚ್ಚುವರಿಯಾಗಿ ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಲ್ಲಿ, ಪ್ರತಿ ಹೆಚ್ಚುವರಿ ಉದ್ಯೋಗಿಗೆ ತಿಂಗಳಿಗೆ 2,500 ರೂ.ನಂತೆ ಗರಿಷ್ಠ 24 ತಿಂಗಳವರೆಗೆ ಸರಕಾರ ಪ್ರೋತ್ಸಾಹಧನ ನೀಡಲಿದೆ ಎಂದು ಅವರು ತಿಳಿಸಿದರು.
ಈ ಯೋಜನೆಗಾಗಿ ವಾರ್ಷಿಕ 305 ಕೋಟಿ ರೂ. ಅನುದಾನವನ್ನು ಒದಗಿಸಲಾಗುತ್ತಿದ್ದು, ನಿಜವಾಗಿಯೂ ಹೊಸ ಉದ್ಯೋಗಗಳನ್ನು ಸೃಷ್ಟಿಸಿ ಅವುಗಳನ್ನು ನಿರಂತರವಾಗಿ ಉಳಿಸಿಕೊಳ್ಳುವ ಉದ್ಯಮಗಳಿಗೆ ಮಾತ್ರ ಸರಕಾರದ ನೆರವು ತಲುಪುವಂತೆ ವ್ಯವಸ್ಥೆ ರೂಪಿಸಲಾಗಿದೆ. ಹೊಸ ನೇಮಕಾತಿ ಹಾಗೂ ಉದ್ಯೋಗಿಗಳಿಗೆ ಪಾವತಿಸಲಾಗುವ ವೇತನವನ್ನು ಪರಿಶೀಲಿಸಿದ ನಂತರವೇ ಪ್ರೋ ತ್ಸಾಹಧನ ನೀಡಲಾಗುತ್ತದೆ. ಇದರಿಂದ ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಾತ್ರಿಪಡಿಸಲಾಗುತ್ತದೆ ಎಂದು ಅವರು ಹೇಳಿದರು.
ರಾಜ್ಯ ಸರಕಾರದ ‘ಯುವನಿಧಿ’ ಯೋಜನೆಯೊಂದಿಗೆ ಸಮನ್ವಯ ಸಾಧಿಸಿ ‘ಉದ್ಯೋಗ ನಿಧಿ’ಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಯುವನಿಧಿಯ ಮೂಲಕ ಯುವಜನರಿಗೆ ಉದ್ಯೋಗ ಪಡೆಯಲು ಅಗತ್ಯವಾದ ಬೆಂಬಲ ಮತ್ತು ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದರೆ, ಉದ್ಯೋಗ ನಿಧಿಯ ಮೂಲಕ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳಿಗೆ ನೇರ ಪ್ರೊತ್ಸಾಹ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.