‘ಭಾರತ್ ಜೋಡೋ ಯುವ ಸಂಘ’ ಹೆಸರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ : ಆರ್.ಅಶೋಕ್
ಬೆಂಗಳೂರು : ಭಾರತ್ ಜೋಡೋ ಯುವ ಸಂಘಗಳ ಹೆಸರಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕರ್ತರಿಗೆ ಗಂಜಿ ಕೇಂದ್ರಗಳನ್ನು ನಿರ್ಮಿಸಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ, ವೃದ್ಧರಿಗೆ, ಅನಾಥರಿಗೆ, ವಿಧವೆಯರಿಗೆ ಪಿಂಚಣಿ ಫಲಾನುಭವಿಗಳಿಗೆ ಸಹಾಯಧನ ನೀಡದೆ ತಡೆಹಿಡಿದಿರುವ ಸರಕಾರ, ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ರಾಜ್ಯದ ತೆರಿಗೆದಾರರ ಹಣದಲ್ಲಿ ಪುನರ್ವಸತಿ ಕಲ್ಪಿಸುತ್ತಿದೆ ಎಂದು ಹರಿಹಾಯ್ದರು.
ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ., ಅನ್ನಭಾಗ್ಯದ 750 ಕೋಟಿ ರೂ.ಹಣವನ್ನು ಇನ್ನೂ ನೀಡಿಲ್ಲ. ಆಗಿನ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಅಧಿವೇಶನದಲ್ಲಿ ಕಣ್ಣೀರು ಹಾಕಿ ಸತ್ಯ ಒಪ್ಪಿಕೊಂಡರು. ಆದರೂ ಇನ್ನೂ ಫಲಾನುಭವಿಗಳಿಗೆ ಹಣ ತಲುಪಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ದಿನಕ್ಕೊಂದು ಯೋಜನೆ ಕೊಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣಗೆ 58 ಲಕ್ಷ ರೂ.ವಸತಿ ಭತ್ಯೆ ನೀಡಲಾಗುತ್ತಿದೆ. ವೇತನ, ಇತರೆ ಭತ್ಯೆ, ಸೌಲಭ್ಯಗಳು, ಅವರಿಗೆ 12 ಸಿಬ್ಬಂದಿ ಇದ್ದಾರೆ. ಎಲ್ಲ ಸೇರಿ 2ಕೋಟಿ ರೂ.ವರೆಗೆ ವೆಚ್ಚವಾಗುತ್ತಿದೆ. ಪ್ರತಿಪಕ್ಷದ ನಾಯಕನಾದ ನನಗೆ ಸರಕಾರದಿಂದ ಇನ್ನೂ ಮನೆ ನೀಡಿಲ್ಲ. ಆದರೆ ಸಮಿತಿಯ ಉಪಾಧ್ಯಕ್ಷರಿಗೆ ಸರಕಾರಿ ಮನೆ ನೀಡಿ 58ಲಕ್ಷ ರೂ.ಖರ್ಚು ಮಾಡಲಾಗಿದೆ ಎಂದು ಅವರು ದೂರಿದರು.
ರಾಹುಲ್ ಗಾಂಧಿ ಕಾಂಗ್ರೆಸ್ ಬ್ಯಾನರ್ ಕೆಳಗೆ ನಡೆಸಿದ ಭಾರತ್ ಜೋಡೋ ಹೆಸರಲ್ಲಿ ಸಂಘಗಳನ್ನು ರಚಿಸಿ ಕಾಂಗ್ರೆಸ್ನ ನಿರುದ್ಯೋಗಿ ಕಾರ್ಯಕರ್ತರಿಗೆ ಉದ್ಯೋಗ ನೀಡಲಾಗುತ್ತಿದೆ. ಪ್ರತಿ ಸಮಿತಿಗೆ ತರಬೇತುದಾರರನ್ನು ನೇಮಿಸಿ 24 ಸಾವಿರ ರೂ.ವೇತನ ನಿಗದಿ ಮಾಡಲಾಗುತ್ತಿದೆ. ಈ ಯೋಜನೆಗೆ ಒಟ್ಟು 1,010 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ. ಇದು ತೆರಿಗೆದಾರರ ಬೆವರಿನ ಹಣದ ದುರ್ಬಳಕೆಯಾಗಿದೆ ಎಂದು ಅವರು ಟೀಕಿಸಿದರು.
ಪೇಮೆಂಟ್ ಮಾಡಬೇಕು: ‘ಸಚಿವರೇ ಇಲ್ಲದೆ ಸರಕಾರ ವಿಧಾನ ಮಂಡಲ ಅಧಿವೇಶನ ನಡೆಸಲು ಮುಂದಾಗಿದೆ. ಇದೀಗ ಪೇಮೆಂಟ್ ಸಚಿವರು ಬರುತ್ತಿದ್ದಾರೆ. ಒಂದು ಸಚಿವ ಸ್ಥಾನಕ್ಕೆ 100-150 ಕೋಟಿ ರೂ.ಗಳನ್ನು ಹೈಕಮಾಂಡ್ಗೆ ನೀಡಬೇಕಿದೆ. ನಾನೇ ಐದು ವರ್ಷ ಸಿಎಂ ಎಂದ ಸಿದ್ದರಾಮಯ್ಯ ಎಲ್ಲಿಗೆ ಹೋಗಿದ್ದಾರೆ?. ರಾಜ್ಯದಲ್ಲಿ ರೈತರ ಹೋರಾಟಗಳು ಮುಂದುವರಿದರೆ ಮೂರನೇ ಸಿಎಂ ಬರಬಹುದು. ಈಗ ಇರುವುದು ರಿಯಲ್ ಎಸ್ಟೇಟ್ ಸರಕಾರ’
-ಆರ್.ಅಶೋಕ್ ವಿಪಕ್ಷ ನಾಯಕ