ಕರ್ನೂಲ್ ಬಸ್ ದುರಂತ ; ಕೆಎಸ್ಸಾರ್ಟಿಟಿ ಬಸ್ಗಳ ಸುರಕ್ಷತೆ ಪರಿಶೀಲನೆಗೆ ತಂಡ ರಚಿಸಿ : ರಾಮಲಿಂಗಾರೆಡ್ಡಿ ಸೂಚನೆ
ರಾಮಲಿಂಗಾರೆಡ್ಡಿ
ಬೆಂಗಳೂರು : ಕರ್ನೂಲ್ ಬಸ್ ದುರಂತದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೆಎಸ್ಸಾರ್ಟಿಸಿ ಪ್ರಯಾಣಿಕರ ಸುರಕ್ಷತೆ ಆದ್ಯತೆ ನೀಡಿದೆ. ಪ್ರಾಣ ಹಾನಿಗೆ ಯಾವುದೇ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದುದರಿಂದ ಈ ಕೂಡಲೇ ಬಸ್ಗಳಲ್ಲಿನ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ತಂಡಗಳನ್ನು ರಚಿಸಿ, ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.
ರವಿವಾರ ಈ ಕುರಿತು ಸಾರಿಗೆ ಇಲಾಖೆಯ ರಸ್ತೆ ಸಾರಿಗೆ ಮತ್ತು ಸುರಕ್ಷತೆ ಆಯುಕ್ತರು ಹಾಗೂ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಇತ್ತೀಚೆಗೆ ಕರ್ನೂಲ್ ಬಸ್ ದುರಂತ ತೀವ್ರ ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲ ಸಾರಿಗೆ ಬಸ್ಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ಹಾವೇರಿ ಬಳಿ ಜಬ್ಬಾರ್ ಟ್ರಾವೆಲ್ಸ್ ನ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ನಾನು ಆ ವೇಳೆ ರಾಜ್ಯದ ಸುಮಾರು 50 ಸಾವಿರ ವಾಹನಗಳಲ್ಲಿ ಸಾರಿಗೆ ಸಂಸ್ಥೆಗಳ ಬಸ್ಗಳು, ಗುತ್ತಿಗೆ ಆಧಾರದ ಬಸ್ಗಳು, ಖಾಸಗಿ ಪ್ರವಾಸಿ ಬಸ್ಗಳು, ಟೆಂಪೋ ಟ್ರಾವೆಲರ್ಸ್, ಶಾಲಾ ವಾಹನಗಳಲ್ಲಿ ತುರ್ತು ನಿರ್ಗಮನಗಳನ್ನು ಕಡ್ಡಾಯ ಅಳವಡಿಸುವಂತೆ ಮತ್ತು ಸರ್ಮಪಕವಾಗಿ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲಿಸಲು ಒಂದು ಅಭಿಯಾನವನ್ನೇ ಕೈಗೆತ್ತಿಕೊಂಡಿದ್ದರಿಂದ, ಹಲವು ಬಸ್ಗಳಲ್ಲಿನ ಲೋಪದೋಷಗಳು ಗಮನಕ್ಕೆ ಬಂದು ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯವಾಯಿತು ಎಂದು ಅವರು ತಿಳಿಸಿದ್ದಾರೆ.
ಖಾಸಗಿ ಬಸ್ಗಳಲ್ಲಿ ಯಾವುದೇ ವಾಣಿಜ್ಯ ಸರಕು ಸಾಗಿಸುವ ಸಂದರ್ಭದಲ್ಲಿ ಬೆಂಕಿ ಸ್ಪರ್ಷಕ್ಕೆ ಸರಳವಾಗಿ ಉರಿಯುವ ಅಥವಾ ಇತರೆ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು. ಎಲ್ಲಾ ಎಸಿ ಬಸ್ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಸರಕುಗಳನ್ನು ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಗಳ ನವೀಕರಣ ಪರಿಶೀಲನೆ ಮತ್ತು ಅನಧಿಕೃತವಾಗಿ ವಾಹನಗಳನ್ನು ಮಾರ್ಪಾಡು ಮಾಡಿರುವುದು ಕಂಡು ಬಂದರೆ ಕೂಡಲೇ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ತಿಳಿಸಿದ್ದಾರೆ.