ಹಿರಿತನ ಆಧಾರದ ಮೇಲೆ ಸಚಿವ ಸ್ಥಾನ ನೀಡುವಂತೆ ಕೇಳಿದ್ದೇನೆ : ರಾಮಲಿಂಗಾರೆಡ್ಡಿ
"ಡಿಸಿಎಂ ಹುದ್ದೆ ಸೃಷ್ಟಿಸುವುದು ಸರಿಯಲ್ಲ"
ರಾಮಲಿಂಗಾರೆಡ್ಡಿ
ಬೆಂಗಳೂರು : ‘ಹಿರಿತನವನ್ನು ಆಧರಿಸಿ ಸಚಿವ ಸ್ಥಾನ ನೀಡಲಿ. ನಿರ್ದಿಷ್ಟವಾಗಿ ಇಂತಹದ್ದೇ ಖಾತೆ ಕೊಡಿ ಎಂದು ನಾನು ಹೇಳುವುದಿಲ್ಲ, ನನಗೆ ಯಾವುದೇ ಖಾತೆ ನೀಡಿದರೂ ನಿಭಾಯಿಸುತ್ತೇನೆ’ ಎಂದು ಹಿರಿಯ ಶಾಸಕ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಾರಿಗೆ, ಗೃಹ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಇದೀಗ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ. ಹಿರಿತನ ಆಧಾರದ ಮೇಲೆ ಸಚಿವ ಸ್ಥಾನ ನೀಡುವಂತೆ ನಾನು ಕೇಳಿದ್ದೇನೆ’ ಎಂದರು.
‘ನನ್ನ ಪ್ರಕಾರ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬಾರದು. ಕರ್ನಾಟಕ ಮಾತ್ರವಲ್ಲದೇ, ಯಾವುದೇ ರಾಜ್ಯದಲ್ಲಿ ಡಿಸಿಎಂ ಹುದ್ದೆ ಸೃಷ್ಟಿಸುವುದು ಸರಿಯಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೂ ಹೈಕಮಾಂಡ್ ನಿರ್ಧಾರಕ್ಕೆ ತಲೆಬಾಗುವೆ’ ಎಂದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆಂಬುದರ ಬಗ್ಗೆ ಚರ್ಚೆಯಾಗಲಿದೆ ಎಂದರು.