×
Ad

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಹೆಚ್ಚಳ | ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ : ಸಿದ್ದರಾಮಯ್ಯ

Update: 2025-04-07 18:54 IST

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರು ಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಸೋಮವಾರ ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಲೆ ಏರಿಕೆಗೆ ಕೇಂದ್ರ ಸರಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರೇ ದೇಶದ ಜನರ ಮುಂದೆ ಬಿಚ್ಚಿಟ್ಟು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಈಗ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು ಎರಡು ರೂಪಾಯಿಗಳಷ್ಟು ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂಪಾಯಿಯಷ್ಟು ಏರಿಕೆ ಮಾಡಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು ಎಂಬುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಂತರ್‌ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಒಂದೇ ಸಮನೆ ಏರಿಸುತ್ತಾ ಹೋಗಲು ಕಾರಣ ಏನು ಎಂಬುದನ್ನು ಬಿಜೆಪಿ ನಾಯಕರು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಕ್ಕಿ, ಬೇಳೆ, ಮೀನು, ಮಾಂಸ, ತರಕಾರಿಯಿಂದ ಹಿಡಿದು ಹೊಟೇಲ್ ತಿಂಡಿ ವರೆಗೆ ಎಲ್ಲದರ ಬೆಲೆ ಏರಿಕೆಗೆ ಮೂಲ ಕಾರಣ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಇರುವ ಕೇಂದ್ರ ಸರಕಾರದ ಜನವಿರೋಧಿ ನೀತಿ ಎನ್ನುವುದು ಆರ್ಥಿಕ ವ್ಯವಹಾರದ ಸಾಮಾನ್ಯ ಜ್ಞಾನ ಇದ್ದವರಿಗೆಲ್ಲ ಗೊತ್ತು ಎಂದು ಅವರು ತಿಳಿಸಿದ್ದಾರೆ.

ಹೀಗಿದ್ದರೂ, ಬೆಲೆ ಏರಿಕೆಯ ಪಾಪದ ಹೊರೆಯನ್ನು ನಮ್ಮ ತಲೆ ಮೇಲೆ ಕಟ್ಟಲು ಹೊರಟಿರುವ ಬಿಜೆಪಿ ನಾಯಕರ ಮುಖಕ್ಕೆ ಮೋದಿ ಮಸಿ ಬಳಿದಿದ್ದಾರೆ. ಜನಾಕ್ರೋಶ ಯಾತ್ರೆ ಹೊರಟವರು ಒಂದೋ ಪ್ರಧಾನಿ ಮೇಲೆ ಒತ್ತಡ ಹೇರಿ ಕೇಂದ್ರ ಸರಕಾರ ಹೆಚ್ಚಿಸಿರುವ ಬೆಲೆಯನ್ನು ಇಳಿಸುವಂತೆ ಮಾಡಬೇಕು, ಇಲ್ಲವೇ ಯಾತ್ರೆಯನ್ನು ಕೊನೆಗೊಳಿಸಿ ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಮನೆಗೆ ಮರಳಬೇಕು. ಇದರ ಹೊರತಾಗಿ ಈ ಯಾತ್ರೆಯ ಪ್ರಹಸನವನ್ನು ಮುಂದುವರಿಸಿದರೆ ಜನರ ಆಕ್ರೋಶಕ್ಕೆ ತುತ್ತಾಗುವುದು ಖಂಡಿತ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News