×
Ad

ಪ್ರತಿವರ್ಷ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪರಿಸರವಾದಿಗಳಿಗೆ ಪ್ರಶಸ್ತಿ : ಸಿಎಂ ಸಿದ್ದರಾಮಯ್ಯ

‘ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ’

Update: 2025-11-19 18:38 IST

ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ರೂ.ದತ್ತಿ ನಿಧಿಯನ್ನು ಸ್ಥಾಪಿಸಿ, ಆ ಠೇವಣಿ ಹಣದ ಬಡ್ಡಿಯಲ್ಲಿ ಪ್ರತಿವರ್ಷವೂ ಕಾರ್ಯಕ್ರಮ ಆಯೋಜಿಸಿ, ಕನಿಷ್ಠ ಐದು ಪರಿಸರವಾದಿಗಳಿಗೆ ‘ಸಾಲುಮರದ ತಿಮ್ಮಕ್ಕ’ನವರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬುಧವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಪರಿಸರ ಮತ್ತು ಅರಣ್ಯ ರಕ್ಷಣೆಗೆ ಹಲವು ಪ್ರಮುಖ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಪರಿಸರ ಸಂರಕ್ಷಣೆಯ ಜವಾಬ್ದಾರಿ ಕೇವಲ ಸರಕಾರದ ಮೇಲಿಲ್ಲ. ಸಾರ್ವಜನಿಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದರು.

ಭೂಮಿಯ ಮೇಲಿನ ಜೀವಸಂಕುಲಕ್ಕೆ ಉತ್ತಮ ಪರಿಸರದಲ್ಲಿ ಬದುಕಲು ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು, ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರಕಾರದ ವರದಿಯ ಪ್ರಕಾರ ದೇಶದಲ್ಲಿ 131 ನಗರಗಳು ಮಾಲಿನ್ಯದಿಂದ ಕೂಡಿದ್ದು, ನಿಗದಿತ ಮಟ್ಟಕ್ಕಿಂತಲೂ ಹೆಚ್ಚಿದೆ. ಅದರಲ್ಲಿ ಕರ್ನಾಟಕದ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಸೇರಿವೆ. ಇದು ಆತಂಕಕಾರಿ ವಿಷಯ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ವಾಸಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಎಲ್ಲರೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಸಾಲುಮರದ ತಿಮ್ಮಕ್ಕ ಇದಕ್ಕೆ ಶ್ರೇಷ್ಠ ಉದಾಹರಣೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜಧಾನಿ ಬೆಂಗಳೂರು ಗಾರ್ಬೇಜ್ ನಗರ ಎಂಬ ಟೀಕೆಗೆ ಗುರಿಯಾಗುತ್ತಿದ್ದು, ಬೆಂಗಳೂರನ್ನು ಗಾರ್ಬೇಜ್ ನಗರವಾಗಿಸುವುದು ನಮ್ಮ ಉದ್ದೇಶವಲ್ಲ. ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಿಸಬೇಕು ಎನ್ನುವುದು ಸರಕಾರದ ಉದ್ದೇಶ. ಜನರೂ ಹಸಿ ಮತ್ತು ಒಣ ತ್ಯಾಜ್ಯವನ್ನು ಬೇರ್ಪಡಿಸಬೇಕು. ಕೈಗಾರಿಕೋದ್ಯಮಿಗಳು ತ್ಯಾಜ್ಯವನ್ನು ಸಾರ್ವಜನಿಕರಿಗೆ, ಸಮಾಜಕ್ಕೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ನಿರ್ವಹಿಸುವುದು ಕೈಗಾರಿಕೋದ್ಯಮಿಗಳ ಜವಾಬ್ದಾರಿ ಎಂದು ಸಿದ್ದರಾಮಯ್ಯ ಹೇಳಿದರು.

ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಕೈಗಾರಿಕೆಗಳು ಅಗತ್ಯ. ಆದರೆ ಪರಿಸರ ಮಾಲಿನ್ಯ ಉಂಟಾಗದಂತೆ ಎಚ್ಚರ ವಹಿಸುವುದು ಅವಶ್ಯಕ. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಇತರರಿಗೆ ಮಾದರಿಯಾಗಬೇಕು. ತಿಮ್ಮಕ್ಕ ಪರಿಸರವಾದಿಯಾಗಿದ್ದರಿಂದ ನಾವು ಅವರನ್ನು ನೆನೆಸುತ್ತಿದ್ದೇವೆ. ವಿದ್ಯಾರ್ಥಿಗಳು ಪ್ರತಿ ವರ್ಷ ಇಂಥ ಸಮಾರಂಭಗಳನ್ನು ಆಯೋಜಿಸಿ ಜಾಗೃತಿ ಉಂಟುಮಾಡಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಬೈರತಿ ಸುರೇಶ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ನರೇಂದ್ರಸ್ವಾಮಿ, ಸಚಿವರಾದ ಚಲುವರಾಯಸ್ವಾಮಿ, ಬೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ದಿನೇಶ್ ಗುಂಡೂರಾವ್, ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸೇರಿದಂತೆ ಮತ್ತಿತರರು ಉಪಸ್ಥಿತದ್ದರು.

2030ರೊಳಗೆ ಪ್ಲಾಸ್ಟಿಕ್ ಮುಕ್ತ ಬೆಂಗಳೂರು ಸಾಧ್ಯ: ‘ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತದೆ. ಇದನ್ನು ನಾಗರಿಕರು ಅರ್ಥಮಾಡಿಕೊಳ್ಳದೇ ಹೋದರೆ ಪ್ಲಾಸ್ಟಿಕ್ ಮುಕ್ತ ನಗರವಾಗಲು ಸಾಧ್ಯವಿಲ್ಲ. ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ, ಸರಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ’

-ಸಿದ್ದರಾಮಯ್ಯ ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News