ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಒಳ ಮೀಸಲಾತಿ: ಸದನದಲ್ಲಿ ಅಧಿಕೃತ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ
ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನ
ಸಿಎಂ ಸಿದ್ದರಾಮಯ್ಯ (Photo: X/@CMofKarnataka)
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಮೀಸಲಾತಿ ವರ್ಗೀಕರಣ ಮಾಡಲು ಸಚಿವ ಸಂಪುಟ ಮಂಗಳವಾರ ತೀರ್ಮಾನಿಸಿತ್ತು. ಈ ಕುರಿತು ಇಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಮೀಸಲಾತಿ ಬಗ್ಗೆ ತೆಗೆದುಕೊಂಡು ನಿರ್ಣಯವನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ಮಂಗಳವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಎಡಗೈ ಸಮುದಾಯಕ್ಕೆ ಶೇ. 6 ರಷ್ಟು, ಬಲಗೈ ಸಮುದಾಯಕ್ಕೆ ಶೇ. 6 ರಷ್ಟು ಹಾಗೂ ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಹೇಳಿದರು.
ನ್ಯಾ.ನಾಗಮೋಹನ್ ದಾಸ್ ವರದಿಯ ಶಿಫಾರಸುಗಳನ್ನು ಕೆಲವು ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿ ಕಲ್ಪಿಸಲಾಗಿದೆ. A, B, C ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದ್ದು, ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.
ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ - ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ - ಶೇ. 6 ಹಾಗೂ ಸಿ ಪ್ರವರ್ಗಕ್ಕೆ - ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ. ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಸದನಕ್ಕೆ ಮಾಹಿತಿ ನೀಡಿದರು.
ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
* ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ 'ಎ' ಪ್ರವರ್ಗಕ್ಕೆ - ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ - ಶೇ. 6 ಹಾಗೂ ಸಿ ಪ್ರವರ್ಗಕ್ಕೆ… pic.twitter.com/Ss3Ldenj4J
— CM of Karnataka (@CMofKarnataka) August 20, 2025