5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ; ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ : ಡಾ.ಯತೀಂದ್ರ
ಮೈಸೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಗೊಂದಲವಿಲ್ಲ. ಸಿಎಂ ಬದಲಾವಣೆ ಮಾಡಿ ಎಂದು ಯಾರೂ ಕೇಳುತ್ತಿಲ್ಲ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಇರಲಿದ್ದಾರೆ. ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈಕಮಾಂಡ್ ನೇರವಾಗಿ ಹೇಳದೆ ಇರಬಹುದು ಆದರೆ, ಸಿಗ್ನಲ್ ಕೊಟ್ಟಿದೆ. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ . ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಮಾಧ್ಯಮದಲ್ಲಿ ಮಾತ್ರ ಸಿಎಂ ಬದಲಾವಣೆ ಚರ್ಚೆ ಆಗುತ್ತಿದೆ. ಸದ್ಯಕ್ಕೆ ಸಿದ್ದರಾಮಯ್ಯ ಅವರನ್ನು ಇಳಿಸಿ ಅಂತ ಯಾರು ಕೇಳುತ್ತಿಲ್ಲ ಎಂದರು.
ಮನರೇಗಾ ವಿಚಾರದಲ್ಲಿ ಬಿಜೆಪಿ ವಿಚಾರಕ್ಕೆ ಸಂಬಂಧಿಸಿಂತೆ ಪ್ರತಿಕ್ರಿಯಿಸಿದ ಅವರು, ನಾವು ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಲ್ಲಿ ಸಾಗುತ್ತಿದ್ದೇವೆ. ಬಿಜೆಪಿಯವರಿಗೆ ಜನರ ಕೆಲಸ ಬೇಕಿಲ್ಲ. ಗಾಂಧೀಜಿಯ ಆಶಯಗಳು ಬೇಕಿಲ್ಲ. ಅದಕ್ಕಾಗಿ ಹೆಸರು ಬದಲಾವಣೆ ಮಾಡಿದ್ದಾರೆ ಎಂದರು.
ಕೆ.ಜೆ ಜಾರ್ಜ್ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಮೂಗು ತೂರಿಸಿದ್ದಾರೆ ಎಂಬ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನಿಜಕ್ಕೂ ನನಗೆ ಗೊತ್ತಿಲ್ಲ. ಖುದ್ದು ಕೆ.ಜೆ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಸುಖಾ ಸುಮ್ಮನೆ ನನ್ನ ಹೆಸರನ್ನು ಬಿಜೆಪಿ ಎಳೆದು ತರುವ ಕೆಲಸ ಮಾಡಿದೆ. ಅವರ ಆರೋಪದಲ್ಲಿ ಯಾವುದೇ ಉರುಳಿಲ್ಲ. ಸದನದಲ್ಲೂ ಕೂಡ ಬಿಜೆಪಿ ನನ್ನ ಹೆಸರು ಹೇಳಿದೆ. ಈ ಹಿಂದಿನಿಂದಲೂ ನನ್ನ ಟಾರ್ಗೆಟ್ ಮಾಡಿಕೊಂಡು ಬಂದಿದ್ದಾರೆ. ಅವರ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ನಾನು ಕೂಡ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ಮಾಡುವುದನ್ನು ಸ್ವಾಗತಿಸುತ್ತೇನೆ. ದೊಡ್ಡ ದೊಡ್ಡ ರಾಷ್ಟ್ರಗಳಲ್ಲಿ ಇವಿಎಂ ಮಿಷನ್ ರದ್ದು ಮಾಡಿ ಬ್ಯಾಲೆಟ್ ಪೇಪರ್ ಬಳಸುತ್ತಿದ್ದಾರೆ. ತಂತ್ರಜ್ಞಾನದಲ್ಲಿ ಮುಂದುವರೆದ ರಾಷ್ಟ್ರಗಳೇ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆಗೆ ಮುಂದಾಗಿದೆ. ನನ್ನ ಅಭಿಪ್ರಾಯವು ಅದೇ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸುವುದು ಸೂಕ್ತ. ಇದು ನನ್ನ ಅಭಿಪ್ರಾಯ ಎಂದರು.