ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ಗೆ ಸ್ಪೀಕರ್ ಅನುಮತಿ
ಬಿಜೆಪಿ ಶಾಸಕ ಮುನಿರತ್ನ
ಬೆಂಗಳೂರು: ಕ್ರಿಮಿನಲ್ ಪ್ರಕರಣಗಳ ಆರೋಪಗಳಡಿ ಕಾರಾಗೃಹಕ್ಕೆ ಹೋಗಿ ಬಳಿಕ ಜಾಮೀನಿನ ಮೇಲೆ ಹೊರಬಂದಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಚಾರ್ಜ್ಶೀಟ್ ಆಗಿರುವ ಪ್ರಕರಣವೊಂದರ ಪ್ರಾಸಿಕ್ಯೂಷನ್ಗೆ ಸ್ಪೀಕರ್ ಯು.ಟಿ.ಖಾದರ್ ಶನಿವಾರ ಅನುಮತಿ ನೀಡಿದ್ದಾರೆ.
ಹನಿಟ್ರ್ಯಾಪ್ಗೆ ಎಚ್ಐವಿ ಸೋಂಕಿತ ಮಹಿಳೆಯನ್ನು ಬಳಸಿಕೊಂಡಿದ್ದು, ಜಾತಿ ನಿಂದನೆ, ಆಮಿಷವೊಡ್ಡಿ ಅತ್ಯಾಚಾರ ನಡೆಸಿದ ಆರೋಪ ಸೇರಿದಂತೆ ಗಂಭೀರ ಆರೋಪಗಳ ಮೇಲೆ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣಗಳ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಹೋಗಿದ್ದರು. ಆ ಬಳಿಕ ಜಾಮೀನಿನ ಮೇಲೆ ಹೊರಬಂದು ಬಜೆಟ್ ಅಧಿವೇಶನದಲ್ಲೂ ಭಾಗಿಯಾಗಿದ್ದರು.
ಅಧಿವೇಶನ ಕಲಾಪದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಪ್ರಸ್ತಾಪದ ವೇಳೆ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಇದೇ ವಿಚಾರ ಸಂಬಂಧ ಬಿಜೆಪಿ ಶಾಸಕರು ಪ್ರತಿಭಟನೆಯನ್ನೂ ನಡೆಸಿದ್ದರು.