ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ತನಿಖೆಗೆ ಕೋರಿ ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ
ಸಚಿವೆ ಶೋಭಾ ಕರಂದ್ಲಾಜೆ
ಬೆಂಗಳೂರು : ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಕೋರಿ ಕೇಂದ್ರ ಕಾರ್ಮಿಕ ಇಲಾಖೆಯ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.
ಸುಹಾಸ್ ಶೆಟ್ಟಿ ಅವರನ್ನು ಮಂಗಳೂರಿನ ಕಿನ್ನಿಪಡವು ಗ್ರಾಮದಲ್ಲಿ ಮೇ 1ರಂದು ಹತ್ಯೆ ಮಾಡಲಾಗಿದೆ. ಇದೊಂದೇ ಪ್ರಕರಣವಲ್ಲ. ಕೋಮು ಸಂಘರ್ಷವನ್ನು ಸೃಷ್ಟಿಸಲು ಬಯಸುತ್ತಿರುವ ದೇಶವಿರೋಧಿ ಶಕ್ಷಿಗಳ ಬೆಂಬಲದೊಂದಿಗೆ ಹಿಂದೂಗಳ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಆ ಮೂಲಕ ಹಿಂದೂ ಪರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯ ಸರಕಾರದ ನಿಷ್ಕ್ರಿಯತೆ ಹಾಗೂ ಓಲೈಕೆ ರಾಜಕಾರಣವು ಸಮಾಜ ವಿರೋಧಿ ಶಕ್ತಿಗಳಿಗೆ ಉತ್ತೇಜನ ನೀಡುತ್ತಿದೆ. ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧದ ಪ್ರಕರಣಗಳನ್ನು ಇತ್ತೀಚೆಗೆ ಹಿಂಪಡೆದದ್ದು ಮತ್ತು ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣಗಳು ಅದಕ್ಕೆ ಉದಾಹರಣೆಯಾಗಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ರೀತಿಯ ಮೃದು ಧೋರಣೆಗಳು ಕಾನೂನು ಉಲ್ಲಂಘಿಸುವವರನ್ನು ಮೌನವಾಗಿ ಬೆಂಬಲಿಸುವ ಸಂದೇಶ ರವಾನಿಸುತ್ತವೆ. ಇದರಿಂದಾಗಿಯೇ, ಪದೇಪದೇ ಗಲಭೆ ಮತ್ತು ದಾಳಿ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಬೇಕು ಎಂದು ಕೋರುತ್ತೇನೆ ಎಂದು ಶೋಭಾ ಕರಂದ್ಲಾಜೆ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.