×
Ad

ಸಾರಿಗೆ ನೌಕರರ ಮುಷ್ಕರ ವಾಪಸ್; ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

Update: 2025-08-07 15:33 IST

ಬೆಂಗಳೂರು : ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳು ನೀಡಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂಬ ಹೇಳಿಕೆ ಪರಿಗಣಿಸಿ, ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗುವುದರಿಂದ ಮುಷ್ಕರ ನಡೆಸದಂತೆ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಆದೇಶಿಸುವಂತೆ ಕೋರಿ ಬೆಂಗಳೂರಿನ ಜೆ. ಸುನೀಲ್‌ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕಾರ್ಮಿಕ ಸಂಘಟನೆಗಳ ಪರ ವಕೀಲರು ಹಾಜರಾಗಿ, ಸದ್ಯ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ಮಾಹಿತಿ ನೀಡಿ, ಆ ಕುರಿತ ನಿರ್ಣಯವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಸರಕಾರದ ಪರ ವಕೀಲರು, ಕಾರ್ಮಿಕರ ಜತೆ ಸಂಧಾನ ಮುಂದುವರಿಯುತ್ತಿದೆ. ಇಂದೂ ಸಹ ಮಾತುಕತೆ ನಡೆದಿದ್ದು, ಆಗಸ್ಟ್ 28ಕ್ಕೆ ಮತ್ತೆ ಸಂಧಾನ ಸಭೆ ನಡೆಯಲಿದೆ ಎಂದು ತಿಳಿಸಿದರು.

ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ಅವರು, ಸದ್ಯ ಮುಷ್ಕರ ಹಿಂಪಡೆಯಲಾಗಿದೆಯಾದರೂ, ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಮರುಕಳಿಸುವ ಸಾಧ್ಯತೆ ಇದೆ. ಆದ್ದರಿಂದ, ಪ್ರಕರಣ ಸಂಬಂಧ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಕಾಲಮಿತಿ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರ ಮತ್ತು ಕಾರ್ಮಿಕರ ನಡುವೆ ಸಂಧಾನ ಮುಂದುವರಿಯಲಿ. ಸದ್ಯ ಮುಷ್ಕರ ಹಿಂಪಡೆಯಲಾಗಿದೆ. ಆದ್ದರಿಂದ, ಪಿಐಎಲ್ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿ, ಅರ್ಜಿ ವಿಲೇವಾರಿ ಮಾಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News