ರೋಗಿಗಳಿಗೆ ಎದುರಾಗುವ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಹಾಯವಾಣಿ ಆರಂಭಕ್ಕೆ ಚಿಂತನೆ : ಯು.ಟಿ.ಖಾದರ್
Update: 2026-06-10 21:27 IST
ಬೆಂಗಳೂರು : ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಎದುರಾಗುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಆರೋಗ್ಯ ಸೌಧದಲ್ಲಿ ಸಹಾಯವಾಣಿ ಅನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಔಷಧಿ ಲಭ್ಯತೆ ಸಮಸ್ಯೆ ಎದುರಾದರೆ ನೇರವಾಗಿ ಕಚೇರಿಗೆ ಅಥವಾ ಇಲಾಖೆಯ ಕಾರ್ಯದರ್ಶಿಗಳ ಕಚೇರಿಗೆ ಕರೆ ಮಾಡಿ ತಿಳಿಸಿದರೆ ಅದನ್ನು ಸರಿಪಡಿಸಲಾಗುವುದು. ಇದಕ್ಕಾಗಿ ಸಹಾಯವಾಣಿ ತೆರೆಯಲು ಯೋಜಿಸಿದ್ದೇವೆ ಎಂದರು.
ರೋಗಿಗಳಿಂದ ದೂರು ಬಂದ ಆಸ್ಪತ್ರೆಗಳ ವಿರುದ್ಧ ಆರೋಗ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೂರುಗಳು ಸಾಬೀತಾದಲ್ಲಿ ಸಂಬಂಧಿತ ಅಧಿಕಾರಿಗಳು, ವೈದ್ಯರು ಅಥವಾ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.