ಆ.13ರಿಂದ ಆ.27ರ ವರೆಗೆ ವಿಧಾನಸೌಧ ಸುತ್ತಲೂ ನಿಷೇಧಾಜ್ಞೆ ಜಾರಿ

Update: 2026-08-08 00:01 IST

ಬೆಂಗಳೂರು: ಅನುಮತಿ ಪಡೆದು ಫ್ರೀಡಂ ಪಾರ್ಕ್‍ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ, ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಆ.13ರಿಂದ ಆ.27ರ ವರೆಗೆ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನದ ಹಿನ್ನೆಲೆಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅಧಿವೇಶನಗಳು ಸುಸೂತ್ರವಾಗಿ ನಡೆಸುವ ದೃಷ್ಟಿಯಿಂದ ಈ ಕ್ರಮವನ್ನು ವಹಿಸಲಾಗಿದೆ. ನಿಷೇಧಾಜ್ಞೆಯ ಸಮಯದಲ್ಲಿ ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ ಎಂದು ಉಲ್ಲೇಖಿಸಲಾಗಿದೆ.

ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News