2027ರ ಅಂತ್ಯಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಸಚಿವ ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು: ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ’ಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗಿದ್ದು, 2027ರ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಪೂರ್ಣಗೊಳಿಸಿ ಉದ್ದೇಶಿತ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ಸರಕಾರ ಬದ್ಧವಾಗಿದೆ’ ಎಂದು ಪರಿಷತ್ತಿನ ಸಭಾ ನಾಯಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿ'ಸೋಜಾ ನಿಯಮ 72ರ ಅಡಿಯಲ್ಲಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಯೊಜನೆಯಡಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಬರಪೀಡಿತ 29 ತಾಲ್ಲೂಕುಗಳ 38 ಪಟ್ಟಣ ಪ್ರದೇಶಗಳು ಮತ್ತು 6,657 ಗ್ರಾಮಗಳ ಸುಮಾರು 75.59 ಲಕ್ಷ ಜನಸಂಖ್ಯೆಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದರು.
ಈ ಯೋಜನೆಗೆ ಪ್ರಾರಂಭದಲ್ಲಿ 2012ರಲ್ಲಿ 8,323.50 ಕೋಟಿ ರೂ.ಗಳ ಮೂಲ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ನಂತರ, 2023ರ ಜನವರಿಯಲ್ಲಿ 23,251 ಕೋಟಿ ರೂ.ಗಳ ಮೊತ್ತದ ಪುನರ್ ಪರಿಷ್ಕೃತ ಯೋಜನಾ ವರದಿಗೆ ಅನುಮೋದನೆ ದೊರೆತಿದ್ದು, ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಅರಣ್ಯ ಇಲಾಖೆ ತೀರುವಳಿ, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಪ್ರಕರಣಗಳು, ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೆ ಇಲಾಖೆಯ ಅನುಮತಿಗಳು ಮತ್ತು ಭೂಸ್ವಾಧೀನ ಪ್ರಕ್ರಿಯೆಗಳಿಂದ ಯೋಜನೆಯಲ್ಲಿ ವಿಳಂಬ ಉಂಟಾಗಿತ್ತು. ಪ್ರಸ್ತುತ ರೈತರೊಂದಿಗೆ ತ್ರಿಪಕ್ಷೀಯ ಒಪ್ಪಂದ ಮಾಡಿಕೊಂಡು ಭೂಸ್ವಾಧೀನ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಲಾಗುತ್ತಿದ್ದು, ಎಲ್ಲ ತಡೆಗಳನ್ನು ನಿವಾರಿಸಿ ಕಾಮಗಾರಿಯನ್ನು ಸಮರೋಪಾದಿಯಲ್ಲಿ 2027ರ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.