ಯೋಗೀಶ್ ಗೌಡ ಕೊಲೆ ಪ್ರಕರಣ | ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ವಿನಯ್ ಕುಲಕರ್ಣಿ
ಹೊಸದಿಲ್ಲಿ : ಬಿಜೆಪಿ ಮುಖಂಡ ಯೋಗಿಶ್ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಲಾಗಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಅದು ಕುಲಕರ್ಣಿಗೆ ಆದೇಶಿಸಿದೆ. ಇದರೊಂದಿಗೆ ವಿನಯ್ ಕುಲಕರ್ಣಿ ಅವರು ಜೈಲು ಸೇರುವ ಸಾಧ್ಯತೆಯಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗಿಶ್ಗೌಡ ಕೊಲೆ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ವಿನಯ್ ಕುಲಕರ್ಣಿ ಅವರಿಗೆ 2021ರ ಆಗಸ್ಟ್ 11ರಂದು ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು.
ಕುಲಕರ್ಣಿ ಹಾಗೂ ಇನ್ನೋರ್ವ ಆರೋಪಿಯು ಪ್ರಕರಣದ ಸಾಕ್ಷಿಗಳಿಗೆ 1 ಲಕ್ಷ ರೂ.ವರೆಗೆ ಹಣದ ಅಮಿಷವೊಡ್ಡುತ್ತಿದ್ದಾರೆ. ಇದು ಷರತ್ತುಗಳ ಉಲ್ಲಂಘನೆಯಾಗಿದ್ದು ಅವರ ಜಾಮೀನನ್ನು ರದ್ದುಪಡಿಸಬೇಕೆಂದು ಕೋರಿ ಸಿಬಿಐ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಸಿಬಿಐ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. 2016ರ ಮೇ ತಿಂಗಳಲ್ಲಿ ಯೋಗಿಶ್ ಗೌಡ ಅವರ ಕೊಲೆಯಾಗಿತ್ತು.