ಧ್ವಜ ವಿವಾದವಲ್ಲ: ಸಂಘ ಪರಿವಾರಿಗರ ದೂರಗಾಮಿ ಚಿತಾವಣೆ, ದಳದ ಅಪಾಯಕಾರಿ ಅವಕಾಶವಾದ

Update: 2024-02-01 05:49 GMT

Photo: twitter.com/hd_kumaraswamy

ಬ್ರಾಹ್ಮಣ್ಯದ ಪುನರುತ್ಥಾನವನ್ನು ಹಿಂದುತ್ವದ ವಿಜಯವೆಂದು ನಂಬಿಸುವ ಆರೆಸ್ಸೆಸ್ ಮತ್ತದರ ಸಿದ್ಧಾಂತಿಗಳು ಭಾರತದ ಮೇಲೆ ನಡೆದ ಎಲ್ಲಾ ಪರಕೀಯರ ದಾಳಿಗಳನ್ನು ಎದುರಿಸಲು ಹಿಂದೂ ರಾಜರು ಇದೇ ಬಾವುಟವನ್ನೇ ಬಳಸಿದ್ದರು ಎಂದು ಯಾವುದೇ ಪುರಾವೆಯಿಲ್ಲದೆ ಪ್ರತಿಪಾದಿಸುತ್ತಾರೆ. ಅದು ಸಹಜವೇ ಆಗಿದೆ. ಏಕೆಂದರೆ ಸಂಘಪರಿವಾರದ ಯಾವುದೇ ಪ್ರತಿಪಾದನೆಗಳಿಗೆ ಅವರ ನಂಬಿಕೆಯೇ ಪುರಾವೆ ಹೊರತು ಸಾಕ್ಷ್ಯಾಧಾರಗಳು ಇರುವುದಿಲ್ಲ.

ಆದರೆ ಪರಕೀಯರಾದ ಆರ್ಯರು ದಾಳಿ ನಡೆಸಿದಾಗ ಇಲ್ಲಿನ ಮೂಲನಿವಾಸಿ ದ್ರಾವಿಡರು ಅಥವಾ ಆರ್ಯರಿಗೆ ಮುಂಚೆಯೇ ಇಲ್ಲಿಗೆ ವಲಸೆ ಬಂದಿದ್ದ ಮೂಲ ಜನಾಂಗದವರು ಯಾವ ಬಾವುಟವನ್ನಿಟ್ಟುಕೊಂಡು ವಿರೋಧಿಸಿದರು ಎಂಬ ಪ್ರಶ್ನೆಗೂ ಅವರ ಬಳಿ ಉತ್ತರವಿರುವುದಿಲ್ಲ.

ಎಲ್ಲಕ್ಕಿಂತ ಮುಖ್ಯವಾಗಿ ಮೊಗಲರ ಸಾಮ್ರಾಜ್ಯದ ವಿರುದ್ಧ ನಡೆದ ಎಲ್ಲಾ ಸಾಮಂತರ ಬಂಡಾಯಗಳನ್ನು ಮುಸ್ಲಿಮ್ ಆಳ್ವಿಕೆಯ ವಿರುದ್ಧದ ಹಿಂದೂ ಬಂಡಾಯವೆಂದೇ ಕಥೆ ಕಟ್ಟುವ ಆರೆಸ್ಸೆಸ್, ಇತಿಹಾಸಕ್ಕೆ ಹೋಗಿ ಆ ಎಲ್ಲಾ ರಾಜರಿಗೂ ಭಗವಾಧ್ವಜವನ್ನು ಕೊಟ್ಟು ಬಂದಿದೆ!

ಅವರ ಪ್ರಕಾರ ಈ ದೇಶದ ಗುಲಾಮಗಿರಿ ಯೆಂದರೆ ಬ್ರಿಟಿಷ್ ದಾಸ್ಯವಲ್ಲ. ಮುಸ್ಲಿಮ್ ಆಳ್ವಿಕೆ ಮತ್ತು ಮುಸ್ಲಿಮರು ಈ ದೇಶದವರಲ್ಲ. ಹಾಗೆಯೇ ಕ್ರಿಶ್ಚಿಯನ್ನರು ಕೂಡ.

ಈ ದೇಶದ ಚರಿತ್ರೆಯಲ್ಲಿ ನಾವು ವೈಭವದ ಯುಗವೆಂದು ಪರಿಗಣಿಸ ಬೇಕಿರುವುದು ಹಾಗೂ ಪುನರ್ ಸ್ಥಾಪಿಸಬೇಕಿರುವುದು ಬುದ್ಧಧರ್ಮವನ್ನು ನಾಶ ಮಾಡಿದ ಗುಪ್ತರ ಕಾಲದ ಬ್ರಾಹ್ಮಣ್ಯವನ್ನು. ಹೀಗಾಗಿ ಭಗವಾಧ್ವಜವೇ ಅವರ ಚರಿತ್ರೆ ಹಾಗೂ ಭವಿಷ್ಯದ ಆಶಯಗಳ ಸಂಕೇತ.

ಆದ್ದರಿಂದ ಅವರು ಪ್ರತಿಪಾದಿಸುತ್ತಿರುವುದು ಸನಾತನ ಭಗವಾಧ್ವಜವನ್ನೂ ಅಲ್ಲ. ಆರೆಸ್ಸೆಸ್ ಮಾರ್ಪಡಿಸಿರುವ ಭಗವಾಧ್ವಜವನ್ನು!

ಹೀಗೆ ಸ್ವತಂತ್ರ ಭಾರತದ ಧ್ವಜ ಮತ್ತು ಭಗವಾಧ್ವಜಗಳು ಎರಡು ತದ್ವಿರುದ್ಧ ಆಶಯ, ಚರಿತ್ರೆ ಮತ್ತು ಭವಿಷ್ಯಗಳ ಪ್ರತೀಕಗಳೇ ಆಗಿವೆ. ಆದ್ದ ರಿಂದಲೇ ಸಂಘಪರಿವಾರವು ಸ್ವಾತಂತ್ರ್ಯ ಹೋರಾಟದುದ್ದಕ್ಕೂ ಆ ನಂತರವೂ ಸ್ವತಂತ್ರ ಭಾರತ ಧ್ವಜಕ್ಕೆ ನಿರಂತರ ಅವಮಾನವನ್ನು ಮಾಡುತ್ತಲೇ ಬಂದಿದೆ.

ಭಾರತದ ಧ್ವಜಕ್ಕೆ ಆರೆಸ್ಸೆಸ್ ಮಾಡುತ್ತಲೇ ಇರುವ ಅಪಮಾನದ ಇತಿಹಾಸ

1930ರಲ್ಲಿ ಕಾಂಗ್ರೆಸ್ ಅಧಿವೇಶನವು ಅಧಿಕೃತವಾಗಿ ಸಂಪೂರ್ಣ ಸ್ವಾತಂತ್ರ್ಯದ ಘೋಷಣೆಯನ್ನು ನೀಡಿ 1930ರ ಜನವರಿ 26ರಂದು ಸ್ವತಂತ್ರ ಭಾರತದ ಘೋಷಣೆಯ ಭಾಗವಾಗಿ ಎಲ್ಲೆಡೆ ಭಾರತದ ಸ್ವತಂತ್ರ ಧ್ವಜವನ್ನು ಹಾರಿಸಲು ಕರೆ ನೀಡುತ್ತದೆ.

ಆಗ ಆರೆಸ್ಸೆಸ್‌ನ ಮೊದಲ ಸರಸಂಘ ಚಾಲಕ ಹೆಡಗೇವಾರ್ ಅವರು:

‘‘ಕೊನೆಗೂ ನಮ್ಮ ಘೋಷಣೆಯನ್ನು ಕಾಂಗ್ರೆಸ್ ಒಪ್ಪಿಕೊಂಡಿದ್ದಕ್ಕೆ ನಾವು ಅಭಿನಂದಿಸುತ್ತೇವೆ. ಹೀಗಾಗಿ ನಮ್ಮ ಎಲ್ಲಾ ಶಾಖಾ ಕಚೇರಿಗಳಲ್ಲೂ ಭಗವಾಧ್ವಜವನ್ನು ಹಾರಿಸಬೇಕು’’ ಎಂದು ಆದೇಶಿಸುತ್ತಾರೆ!

1947ರ ಸೆಪ್ಟಂಬರ್‌ನಲ್ಲಿ ಬಿಜೆಪಿಯ ಪಿತಾಮಹ ಶಾಮ ಪ್ರಸಾದ್ ಮುಖರ್ಜಿಯವರು ನೆಹರೂ ಮಂತ್ರಿಮಂಡಲದ ಸದಸ್ಯರಾಗಿದ್ದರೂ ತಮ್ಮ ಅಧಿಕೃತ ನಿವಾಸದ ಮೇಲೆ ಭಾರತದ ಬಾವುಟವನ್ನು ಹಾರಿಸದೆ ಹಿಂದೂ ಮಹಾ ಸಭಾದ ಬಾವುಟವನ್ನು ಹಾರಿಸುತ್ತಾರೆ.

ಅದೇ ವರ್ಷ ನವೆಂಬರ್‌ನಲ್ಲಿ ಸಂಘಪರಿವಾರದ ಮುಖಪತ್ರಿಕೆ ‘ಆರ್ಗನೈಸರ್’ನಲ್ಲಿ ಬರೆಯಲಾದ ಸಂಪಾದಕೀಯವೊಂದು:

‘‘ವಿಧಿಯಾಟದ ಭಾಗವಾಗಿ ಅಧಿಕಾರ ಪಡೆದುಕೊಂಡಿರುವ ಇಂದಿನ ಸರಕಾರವು ತ್ರಿವರ್ಣ ಧ್ವಜವನ್ನು ಭಾರತದ ರಾಷ್ಟ್ರಧ್ವಜವನ್ನಾಗಿ ಅಂಗೀಕರಿಸಿದೆ. ಆದರೆ ಭಾರತದ ಜನರೆಂದೂ ತ್ರಿವರ್ಣ ಧ್ವಜವನ್ನು ತಮ್ಮ ಬಾವುಟವನ್ನಾಗಿ ಅಂಗೀಕರಿಸಲಾರರು. ಏಕೆಂದರೆ ಮೂರು ಎಂಬ ಸಂಖ್ಯೆ ಭಾರತೀಯರ ಪಾಲಿಗೆ ಕೆಟ್ಟ ಶಕುನವಾಗಿದೆ’’ ಎಂದೆಲ್ಲ ಬರೆಯುತ್ತಾರೆ.

ತ್ರಿಶೂಲ, ತ್ರಿಮೂರ್ತಿ ಎಂದೆಲ್ಲಾ ತ್ರಿವಳಿಗಳನ್ನೇ ಆರಾಧಿಸುವ ಹಿಂದೂ ಧರ್ಮದ ವಕ್ತಾರರು ನೀಡಿದ ಹೇಳಿಕೆಯಿದು.

ಸ್ವಾತಂತ್ರ್ಯಾನಂತರದಲ್ಲೂ ಮುಂದುವರಿದ ದೇಶದ್ರೋಹ- ಧ್ವಜದ್ರೋಹ

ಸ್ವಾತಂತ್ರ್ಯ ಬಂದ ಮರುವರ್ಷ 1948ರ ಜನವರಿ 30 ರಂದು ಆರೆಸ್ಸೆಸ್ ಮತ್ತು ಹಿಂದೂಮಹಾ ಸಭಾದಿಂದ ತರಬೇತಿ ಹೊಂದಿದ ನಾಥೂರಾಮ್ ಗೋಡ್ಸೆ ಎಂಬ ಸ್ವತಂತ್ರ ಭಾರತದ ಪ್ರಥಮ ಭಯೋತ್ಪಾದಕ ಗಾಂಧಿಯನ್ನು ಕೊಂದ ನಂತರ ಆರೆಸ್ಸೆಸ್ ನಿಷೇಧವಾಗುತ್ತದೆ.

ಹಿಂದುತ್ವ ಪಕ್ಷಪಾತಿಯಾಗಿದ್ದ ಆಗಿನ ಗೃಹಮಂತ್ರಿ ಸರ್ದಾರ್ ಪಟೇಲರಿಗೂ ಕೂಡಾ ಆರೆಸ್ಸೆಸ್‌ನ ನಡೆಗಳೂ ಅತಿಯೆನಿಸುತ್ತವೆ. ಆದರೂ ಆರೆಸ್ಸೆಸ್ ಮತ್ತೆ ಮುಖ್ಯಧಾರೆಗೆ ಮರಳುವ ಬಗ್ಗೆ ಒಲವು ಹೊಂದಿದ್ದ ಪಟೇಲರು ಆರೆಸ್ಸೆಸ್ ಮೇಲಿನ ನಿಷೇಧವನ್ನು ಹಿಂದೆಗೆದುಕೊಳ್ಳಲು:

‘‘ಆರೆಸ್ಸೆಸ್ ಭಾರತದ ಸಂವಿಧಾನವನ್ನು ಒಪ್ಪಿಕೊಳ್ಳಬೇಕು. ಭಾರತದ ಬಾವುಟ, ಲಾಂಛನಗಳಿಗೆ ಮರ್ಯಾದೆ ಕೊಡಬೇಕು ಹಾಗೂ ತನ್ನ ರಹಸ್ಯ ಕಾರ್ಯಾಚರಣೆಯನ್ನು ನಿಲ್ಲಿಸಿ ತನ್ನ ಸಂಘಟನೆಗೂ ಒಂದು ಬಹಿರಂಗ ಪ್ರಣಾಳಿಕೆ ಹಾಗೂ ಕಾರ್ಯವಿಧಾನ ಘೋಷಿಸಿ ಒಂದು ಸಾಂಸ್ಕೃತಿಕ ಸಂಘಟನೆಯಾಗಿ ಮಾತ್ರ ಕೆಲಸ ಮಾಡಬೇಕು’’ ಎಂದು ತಾಕೀತು ಮಾಡುತ್ತಾರೆ. ಆ ಶರತ್ತಿನ ಮೇಲೆ ಆರೆಸ್ಸೆಸ್ ಮೇಲಿನ ನಿಷೇಧವನ್ನು 1949ರ ಜುಲೈನಲ್ಲಿ ಹಿಂದೆಗೆದುಕೊಳ್ಳಲಾಗುತ್ತದೆ.

ಭಾರತದ ಸಂವಿಧಾನ ಮತ್ತು ಬಾವುಟಕ್ಕೆ ಒಳಪಡುವ ಶರತ್ತಿನ ಮೇಲೆ ಹೊರಬಂದ ಆರೆಸ್ಸೆಸ್ ಮಾಡಿದ್ದೇನು?

1949ರ ನವೆಂಬರ್ 26ರಂದು ಭಾರತದ ಸಂವಿಧಾನ ರಚನಾ ಪ್ರಕ್ರಿಯೆ ಪೂರ್ಣವಾಗುತ್ತದೆ. ನವೆಂಬರ್ 30ರಂದು ‘ಆರ್ಗನೈಸರ್’ ಸಂಪಾದಕೀಯವು ಭಾರತದ ಸಂವಿಧಾನವನ್ನು ಹೀಗಳೆಯುತ್ತಾ:

‘‘ಭಾರತದ ಸಂವಿಧಾನದಲ್ಲಿ ಸನಾತನ ಭಾರತದಲ್ಲಿ ವಿಕಸನಗೊಂಡ ಸಂವಿಧಾನದ ಉಲ್ಲೇಖವೇ ಇಲ್ಲ. ಈಗಲೂ ಜಗತ್ತಿನಾದ್ಯಂತ ಮನುಸ್ಮತಿಯು ಅಪಾರವಾದ ಗೌರವವನ್ನೂ ಮತ್ತು ಎಲ್ಲರ ಸ್ವಪ್ರೇರಿತ ಮನ್ನಣೆಯನ್ನೂ ಪಡೆದುಕೊಳ್ಳುತ್ತದೆ. ಆದರೆ ನಮ್ಮ ಸಂವಿಧಾನ ಪಂಡಿತರಿಗೆ ಇದರ ಬಗ್ಗೆ ಅರಿವೇ ಇಲ್ಲ’’ ಎಂದು ಸಮಾನತೆಯ ಸಂವಿಧಾನದ ಬದಲಿಗೆ ತಾರತಮ್ಯದ ಮನುಸ್ಮತಿಯನ್ನು ಎತ್ತಿಹಿಡಿಯುತ್ತದೆ.

ಆರೆಸ್ಸೆಸ್‌ನ ಎರಡನೇ ಸರಸಂಘಚಾಲಕ ಗೋಳ್ವಾಲ್ಕರ್ ಅವರು ತಮ್ಮ ‘ಬಂಚ್ ಆಫ್ ಥಾಟ್ಸ್’ ಬರಹ ಸಂಕಲನದಲ್ಲಿ ತ್ರಿವರ್ಣ ಧ್ವಜವನ್ನು ಭಾರತದ ಧ್ವಜವನ್ನಾಗಿ ಮಾಡಿದ್ದನ್ನು ತೀವ್ರವಾಗಿ ಟೀಕಿಸುತ್ತಾರೆ:

‘‘ನಮ್ಮ ನಾಯಕರುಗಳು ನಮ್ಮ ದೇಶಕ್ಕೆ ಹೊಸ ಬಾವುಟ ಮತ್ತು ಹೊಸ ರಾಷ್ಟ್ರಗೀತೆಯನ್ನು ಕೊಟ್ಟಿದ್ದಾರೆ. ಏಕೆ ಹೀಗೆ? ಅತ್ಯಂತ ಸನಾತನವಾದ ನಮ್ಮ ರಾಷ್ಟ್ರಕ್ಕೆ ಒಂದು ಬಾವುಟ ಇರಲಿಲ್ಲವೇ? ರಾಷ್ಟ್ರಗೀತೆ ಇರಲಿಲ್ಲವೇ? ಇತ್ತು. ಹಾಗಿದ್ದ ಮೇಲೆ ಏಕೀ ವಿಸ್ಮತಿ?’’ ಎಂದು ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸುತ್ತಾರೆ.

ಭಾರತವೆಂಬುದು ಅಮೂರ್ತವಾದ ಒಂದು ನಾಗರಿಕತೆಯಾಗಿದ್ದರೂ ಅದು ಎಂದೂ ನಾಗರಿಕರು ಸ್ವಇಚ್ಛೆಯಿಂದ ಒಪ್ಪಿಕೊಳ್ಳುವ ಒಂದು ರಾಷ್ಟ್ರವಾಗಿರಲಿಲ್ಲ.

ರಾಷ್ಟ್ರವೆಂಬ ಪರಿಕಲ್ಪನೆಯೇ ಒಂದು ಆಧುನಿಕ ಉತ್ಪನ್ನ. ಹೀಗಿರುವಾಗ ಗೋಳ್ವಾಲ್ಕರ್ ಹೇಳುತ್ತಿರುವ ರಾಷ್ಟ್ರ ಆರೆಸ್ಸೆಸ್ ಕಟ್ಟಬಯಸುವ ಹಿಂದೂ ರಾಷ್ಟ್ರವೇ ಹೊರತು ಮತ್ತೇನಲ್ಲ. ಇಲ್ಲಿ ಅವರು ಸೂಚಿಸುತ್ತಿರುವುದು ಭಗವಾಧ್ವಜವನ್ನೇ ಹೊರತು ಬೇರೇನನ್ನೂ ಅಲ್ಲ.

ಆರೆಸ್ಸೆಸ್ ಕಚೇರಿಯ ಮೇಲೆ ರಾಷ್ಟ್ರೀಯ ದಿನಗಳಂದೂ ರಾಷ್ಟ್ರಧ್ವಜವಿರುತ್ತಿರಲಿಲ್ಲ!

ಹೀಗೆ ಭಾರತ ರಾಷ್ಟ್ರ ಮತ್ತು ರಾಷ್ಟ್ರಧ್ವಜದ ಬಗ್ಗೆ ಸಂಘಪರಿವಾರದ ತಿರಸ್ಕಾರ ಮತ್ತು ಭಾರತವನ್ನು ಹಿಂದೂರಾಷ್ಟ್ರ ಅರ್ಥಾತ್ ಬ್ರಾಹ್ಮಣ ರಾಷ್ಟ್ರವನ್ನಾಗಿ ಮಾಡುವ ಪ್ರಯತ್ನಗಳು 47ರ ನಂತರವೂ ಮುಂದುವರಿಯಿತು.

ಹಾಗೆ ನೋಡಿದರೆ 2002ರ ವರೆಗೂ ಆರೆಸ್ಸೆಸ್ ಕಚೇರಿಗಳ ಮೇಲೆ ಭಾರತದ ಬಾವುಟ ಹಾರಾಡಲೇ ಇರಲಿಲ್ಲ. 2001ರಲ್ಲಿ ರಾಷ್ಟ್ರಪ್ರೇಮಿ ಯುವದಳ ಎಂಬ ಸಂಘಟನೆಯ ಕಾರ್ಯಕರ್ತರು ಆರೆಸ್ಸೆಸ್‌ನ ನಾಗಪುರದ ಪ್ರಧಾನ ಕಚೇರಿಯ ಮೇಲೆ ಬಲವಂತವಾಗಿ ರಾಷ್ಟ್ರಧ್ವಜವನ್ನು ಹಾರಿಸಿದರು. ಅವರನ್ನು ಹಿಡಿದು ಆರೆಸ್ಸೆಸ್‌ನ ದೇಶಭಕ್ತ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದರು. ಆ ನಂತರ 2002ರಲ್ಲಿ ಮೊದಲ ಬಾರಿಗೆ ಆರೆಸ್ಸೆಸ್‌ನ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ಏಕೆ ಹೀಗೆ?

2002ರಲ್ಲಿ ವಾಜಪೇಯಿ ಸರಕಾರ ರಾಷ್ಟ್ರಧ್ವಜವನ್ನು ಖಾಸಗಿಯವರು ಹಾರಿಸಬಹುದೆಂದು ಭಾರತದ ಧ್ವಜ ನಿಯಮಗಳಿಗೆ ತಿದ್ದುಪಡಿ ತರುವವರೆಗೆ ಖಾಸಗಿ ವ್ಯಕ್ತಿ-ಸಂಘಟನೆಗಳು ರಾಷ್ಟ್ರಧ್ವಜವನ್ನು ಹಾರಿಸುವಂತಿರಲಿಲ್ಲ ವಾದ್ದರಿಂದ ಆವರೆಗೆ ಆರೆಸ್ಸೆಸ್ ಕಚೇರಿಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿರಲಿಲ್ಲ ಎಂಬ ಸಬೂಬನ್ನು ಆರೆಸ್ಸೆಸ್ ನೀಡುತ್ತದೆ.

ಆದರೆ ಭಾರತದ 1955ರ ರಾಷ್ಟ್ರ ಧ್ವಜದ ನಿಯಮಗಳಾಗಲೀ, 1971ರ ನಿಯಮಗಳಾಗಲೀ ಖಾಸಗಿ ವ್ಯಕ್ತಿಗಳು ಮತ್ತು ಸಂಘಟನೆಗಳು ಪ್ರತಿದಿನ ರಾಷ್ಟ್ರಧ್ವಜವನ್ನು ಹಾರಿಸುವುದನ್ನು ಮಾತ್ರ ನಿಷೇಧಿಸುತ್ತವೆ.

ಅರ್ಥಾತ್ ರಾಷ್ಟ್ರೀಯ ದಿನಗಳಾದ ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ದಿನ ಇನ್ನಿತ್ಯಾದಿ ಆರು ದಿನಗಳಂದು ಎಲ್ಲಾ ವ್ಯಕ್ತಿಗಳೂ ಹಾಗೂ ಸಂಘಟನೆಗಳು ತಮ್ಮ ಮನೆ ಮತ್ತು ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಅನುಮತಿಸುತ್ತದೆ. ಆದರೂ ಆರೆಸ್ಸೆಸ್ ಕಚೇರಿಯ ಮೇಲೆ ರಾಷ್ಟ್ರಧ್ವಜದ ಬದಲಿ ಭಗವಾಧ್ವಜ ಮಾತ್ರ ಹಾರುತ್ತಿರುವುದಕ್ಕೆ ಕಾರಣ ಬಿಡಿಸಿ ಹೇಳಬೇಕಿಲ್ಲ.

2002ರ ತನಕ ತಮ್ಮ ಕಚೇರಿಗಳ ಮೇಲೆ ಉದ್ದೇಶಪೂರ್ವಕವಾಗಿ ರಾಷ್ಟ್ರ ಧ್ವಜ ಹಾರಿಸದ ಈ ಸಂಘಿಗಳು 1994ರಲ್ಲಿ ಹುಬ್ಬಳ್ಳಿಯಲ್ಲಿ ಅಂಜುಮನ್ ಮೈದಾನದಲ್ಲಿ, ಶ್ರೀನಗರದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜ ಹಾರಿಸಲು ಮುಂದಾಗಿದ್ದರು. ಅದರ ಹಿಂದೆ ಭಾರತದ ಧ್ವಜವನ್ನು ಕೂಡಾ ಭಗವಾಧ್ವಜದ ಉದ್ದೇಶಕ್ಕೆ ಪೂರಕವಾಗಿ ಬಳಸಿಕೊಳ್ಳುವ ಉದ್ದೇಶವೇ ಇತ್ತು. ರಾಷ್ಟ್ರಭಕ್ತಿಯಲ್ಲ.

ತೀರಾ ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರು ರೈತ ಹೋರಾಟದಲ್ಲಿ ಮೃತನಾದ ಹುತಾತ್ಮ ಕಿಸಾನನಿಗೆ ರಾಷ್ಟ್ರಧ್ವಜ ಸುತ್ತಿಸಿ ಅಂತಿಮ ಕಾರ್ಯಕ್ರಮವನ್ನು ಮಾಡಿದ್ದನ್ನು ಹಾಗೂ ಹಿಂದೊಮ್ಮೆ ಕಾಂಗ್ರೆಸ್ ಪಕ್ಷವು ವಿಧಾನ ಸೌಧದಲ್ಲಿ ರಾಷ್ಟ್ರಧ್ವಜವನ್ನು ಪ್ರದರ್ಶಿಸುತ್ತಾ ಪ್ರತಿಭಟನೆ ಮಾಡಿದ್ದನ್ನು ರಾಷ್ಟ್ರಧ್ವಜಕ್ಕೆ ಆದ ಅಪಮಾನ ಎಂದು ಇಲ್ಲದ ಕಾನೂನನ್ನು ಉದ್ದರಿಸುತ್ತಾ ಹುಸಿ ದೇಶಪ್ರೇಮವನ್ನು ಪ್ರದರ್ಶಿಸುತ್ತಿದ್ದಾರೆ.

ಆದರೆ ಬಿಜೆಪಿ ಪ್ರಧಾನಿ ಮೋದಿ ಯೋಗದಿನದಂದು ರಾಷ್ಟ್ರ ಧ್ವಜದಿಂದ ಬಹಿರಂಗವಾಗಿ ಬೆವರು ಒರೆಸಿಕೊಂಡಿದ್ದನ್ನು, 2015ರಲ್ಲಿ ಉತ್ತರಪ್ರದೇಶದ ದಾದ್ರಿಯಲ್ಲಿ ಅಖ್ಲಾಕ್ ಖಾನ್ ಎಂಬ ಮುಗ್ಧ ವೃದ್ಧನನ್ನು ಕೊಂದ ಆರೋಪ ಹೊತ್ತಿದ್ದ ಸಿಸೋಡಿಯಾ ಎಂಬ ಬಿಜೆಪಿ ನಾಯಕ ಮೃತನಾದಾಗ ಆತನ ಹೆಣಕ್ಕೆ ರಾಷ್ಟ್ರಧ್ವಜವನ್ನು ಸುತ್ತಿ ಅಂತ್ಯಕ್ರಿಯೆ ನಡೆಸಿದ್ದನ್ನು, ಬಿಜೆಪಿಯ ನಾಯಕ ಕಲ್ಯಾಣ್ ಸಿಂಗ್ ಮೃತರಾದಾಗ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಬಾವುಟವನ್ನು ಇರಿಸಿದ್ದನ್ನು ಅಷ್ಟೇ ವಿತಂಡವಾದದಿಂದ ಸಮರ್ಥಿಸಿಕೊಳ್ಳುತ್ತಾರೆ.

ಸಾರಾಂಶವಿಷ್ಟೆ...

ರಾಷ್ಟ್ರಧ್ವಜವನ್ನು ಇಳಿಸಿ ಭಗವಾಧ್ವಜವನ್ನು ಹಾರಿಸಬೇಕೆಂಬುದು, ರಾಮನೇ ರಾಷ್ಟ್ರವೆನ್ನುವುದು, ದೇಶವೇ ದೇವನೆನ್ನುವುದು ಒಂದೇ ಷಡ್ಯಂತ್ರದ ಭಾಗ: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಆಶಯದ ದೇಶವನ್ನು ನಾಶ ಮಾಡಿ ಮತ್ತೊಮ್ಮೆ ಇಲ್ಲಿನ ಶೂದ್ರರನ್ನು ಹನುಮರನ್ನಾಗಿಸಿ ಬ್ರಾಹ್ಮಣ್ಯದ ಗುಲಾಮರನ್ನಾಗಿಸಿಕೊಳ್ಳುವುದೇ ಆಗಿದೆ.

ಇದನ್ನು ಯುವಜನಾಂಗಕ್ಕೆ ಅರ್ಥಪಡಿಸಿ ಸಂಘಟಿಸುವುದು ಎಷ್ಟು ತುರ್ತಿನ ವಿಷಯವಾಗಿದೆ ಎಂಬುದನ್ನು ಕೆರಗೋಡು ಪ್ರಕರಣ ಮುಖಕ್ಕೆ ರಾಚುವಂತೆ ಹೇಳುತ್ತಿದೆ. ಅದನ್ನು ಹಿಂದುತ್ವದ ಜೊತೆ ಅವಕಾಶವಾದಿ ರಾಜಿ ಮಾಡಿಕೊಂಡಿರುವ ಮತ್ತು ಆರೆಸ್ಸೆಸ್‌ನ ಬಿ ಟೀಂ ನಂತಿರುವ ಪಕ್ಷಗಳು ಮಾಡುವುದಿಲ್ಲ. ಹೀಗಾಗಿ ಈ ದೇಶವನ್ನು ಸಮಾನತೆ ಮತ್ತು ಸೌಹಾರ್ದದ ತೋಟವಾಗಿ ಉಳಿಸಿಕೊಳ್ಳಬೇಕೆಂದಿರುವವರೇ ಅದನ್ನು ಸಮರೋಪಾದಿಯಲ್ಲಿ ಮಾಡಬೇಕು. ಅಲ್ಲವೇ?

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ಶಿವಸುಂದರ್

contributor

Similar News