ʼಪ್ರಜಾಸೇವಾ ಇಲಾಖೆʼ ಜನರ ಬಳಿಗೆ ಸರಕಾರ ಕೊಂಡೊಯ್ಯುವ ನಮ್ಮ ಆಲೋಚನೆಯ ಭಾಗ : ಜಿ.ಪರಮೇಶ್ವರ್
► "ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ಪ್ರತಿ ತಾಲ್ಲೂಕಿನಲ್ಲಿ ಅಭಿಯಾನ" ► ಗುಬ್ಬಿ ಪಟ್ಟಣದಲ್ಲಿ ಆಯೋಜಿಸಿದ್ದ ಮೊದಲ 'ಪ್ರಜಾಸೇವಾ ಅಭಿಯಾನ ಜನಸಭೆ' ಕಾರ್ಯಕ್ರಮ
ತುಮಕೂರು: ಸರಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು, ಸರಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಪ್ರಜಾಸೇವಾ ಇಲಾಖೆಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳು, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ಅವರು ಇಂದು ಪ್ರಜಾ ಸೇವಾ ಇಲಾಖೆ ಹಾಗೂ ತುಮಕೂರು ಜಿಲ್ಲಾಡಳಿತದ ವತಿಯಿಂದ ಗುಬ್ಬಿ ಪಟ್ಟಣದಲ್ಲಿ ಆಯೋಜಿಸಿದ್ದ ಮೊದಲ 'ಪ್ರಜಾಸೇವಾ ಅಭಿಯಾನ ಜನಸಭೆ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸೆಪ್ಟೆಂಬರ್ 5 ನಮ್ಮೆಲ್ಲರಿಗೂ ಆದರ್ಶಪ್ರಾಯರಾದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ಇಡೀ ದೇಶದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಅದೇ ದಿನ ಪ್ರಜಾಸೇವಾ ಅಭಿಯಾನ ಆಚರಿಸಬೇಕು ಎಂದು ಸಿಎಂ ಅವರು ಕರೆ ಕೊಟ್ಟಿದ್ದರು. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ನೂತನ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದಾರೆ ಎಂದರು.
ಯಾವುದೇ ಇಲಾಖೆಯ ಸಮಸ್ಯೆಗಳನ್ನು ನೇರವಾಗಿ ಈ ಇಲಾಖೆಯಡಿ ದಾಖಲಿಸಿದರೆ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಸಕಾಲದಲ್ಲಿ ಪರಿಹರಿಸಿಕೊಡುವ ಕೆಲಸ ಮಾಡಿಕೊಡಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮ ಇಂದಿನ ದಿನಕ್ಕೆ ಮಾತ್ರ ಸೀಮಿತವಾಗಿಲ್ಲ. ಪ್ರತಿ ತಿಂಗಳು ಮೊದಲನೆ ಮತ್ತು ಮೂರನೇ ಶನಿವಾರದಂದು ಪ್ರತಿ ತಾಲ್ಲೂಕಿನಲ್ಲಿ ಅಭಿಯಾನ ನಡೆಸಲಾಗುತ್ತದೆ. ತಾಲೂಕು ಮುಗಿದ ಬಳಿಕ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಅಭಿಯಾನ ಸಭೆ ನಡೆಸಲಾಗುವುದು. ಇದು ನಿರಂತರವಾಗಿ ನಡೆಯುತ್ತದೆ. ಇವತ್ತು ಅರ್ಜಿ ನೀಡಲು ಆಗದವರು ಮೂರನೇ ಶನಿವಾರ ಅರ್ಜಿ ಸಲ್ಲಿಸಬಹುದು ಎಂದರು.
ಸರ್ಕಾರ ಜನರ ಸಮಸ್ಯೆಗಳನ್ನು ಬಗೆಹರಿಸಿಕೊಡುವ ಕೆಲಸ ಮಾಡಲಿದೆ. ಸಮಸ್ಯೆಗಳು ನಿರಂತರವಾಗಿ ಬರುತ್ತಲೇ ಇರುತ್ತವೆ. ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಿದರೆ, ಕರ್ನಾಟಕ ಸರ್ಕಾರ ಒಳ್ಳೆಯ ಆಡಳಿತಕ್ಕೆ ಹೆಸರುವಾಸಿಯಾಗುತ್ತದೆ. ಜನರ ಸಮಸ್ಯೆಗಳನ್ನು ಬಹುಬೇಗ ಬಗೆಹರಿಸಿದರೆ ಆಡಳಿತ ಚುರುಕಾಗಿದೆ ಎಂಬ ಮಾತಿಗೂ ಅರ್ಥ ಬರುತ್ತದೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಆರಂಭದಲ್ಲಿ ಬಹಳಷ್ಟು ಟೀಕೆಗಳು ಕೇಳಿಬಂದವು. ಯಾರಿಗೆ ಸಹಾಯ ಹಸ್ತದ ನಿರೀಕ್ಷೆಯಿತ್ತು, ಸರ್ಕಾರದಿಂದ ಸಹಾಯ ಬೇಕಾಗಿತ್ತು ಅಂತವರಿಗೆ ಗ್ಯಾರಂಟಿ ಯೋಜನೆಗಳು ಹೆಚ್ಚು ಅನುಕೂಲವಾಗಿವೆ. ಕೂಲಿ ಮಾಡುವವರಿಗೆ, ಬಡವರಿಗೆ ಜೀವನಕ್ಕೆ ಸಹಾಯವಾಗುತ್ತಿದೆ. ಕೂಲಿ ಮಾಡುವ ಹೆಣ್ಣು ಮಗಳಿಗೆ ಎರಡು ಸಾವಿರ ರೂ. ದೊಡ್ಡದು. ಆಕೆಗೆ ಎರಡು ಸಾವಿರ ರೂಪಾಯಿ ಎರಡು ಲಕ್ಷದ ಮೌಲ್ಯಕ್ಕೆ ಸಮ. ಅವಶ್ಯಕತೆ ಇರುವ ಎಲ್ಲ ಮಹಿಳೆಯರು ಎರಡು ಸಾವಿರ ರೂಪಾಯಿ ಪಡೆಯುತ್ತಿದ್ದಾರೆ. ಸರ್ಕಾರಿ ನೌಕರಿಯಲ್ಲಿರುವ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಪಡೆಯುವುದಿಲ್ಲ ಎಂದು ಸರ್ಕಾರಿ ನೌಕರರ ಸಂಘ ತಿಳಿಸಿದೆ. ಅವರಿಗೆ ಧನ್ಯವಾದಗಳನ್ನು ತಿಳಿಸಿದರು.
ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಾಗ 'ಅಜ್ಜಿಯೊಬ್ಬರಿಗೆ ಎರಡು ಸಾವಿರ ರೂ. ಬರುತ್ತದೆಯೇ ಎಂದು ವಿಚಾರಿಸಿದೆ. ಆಗ ಆಕೆ ಎರಡು ಸಾವಿರ ರೂ. ಹಣ ನನಗೆ ಔಷಧ ತೆಗೆದುಕೊಳ್ಳಲು ಸಹಾಯವಾಗುತ್ತಿದೆ. ನಾನು ಬದುಕಿರುವುದೇ ಎರಡು ಸಾವಿರ ರೂ. ಹಣದಿಂದ' ಎಂಬ ಮಾತನ್ನು ಹೇಳಿದರು. ಇದನ್ನು ಕೇಳಿ ನಮ್ಮ ಕಾರ್ಯಕ್ರಮ ಸಾರ್ಥಕವೆಂಬ ಭಾವನೆ ಮೂಡಿತ್ತು ಎಂದು ನೆನೆದರು.
15 ಲಕ್ಷಕ್ಕೂ ಹೆಚ್ಚು ನಿವೇಶನ ಯೋಜನೆ :
ನಾನು ಕಂದಾಯ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡ ಬಳಿಕ ಹೊಸ ಯೋಜನೆಯನ್ನು ಹಾಕಿಕೊಂಡಿದ್ದೇನೆ. ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂಬುದು ನನ್ನ ಆಶಯ. ಬಡವರಿಗೆ 30×40 ಅಳತೆಯ ನಿವೇಶನವನ್ನು ಉಚಿತವಾಗಿ ನೀಡಲಾಗುವುದು. ರಾಜ್ಯಾದ್ಯಂತ 15 ಲಕ್ಷಕ್ಕೂ ಹೆಚ್ಚು ನಿವೇಶನ ಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ. ಬಹಳಷ್ಟು ಜನರಿಗೆ ಜಾಗ ಇಲ್ಲ, ಮನೆಯೂ ಇಲ್ಲ. ನಿವೇಶನ ನೀಡಿದರೆ ಮನೆ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಅವರ ಬದುಕಲ್ಲಿ ನೆಮ್ಮದಿ ಮೂಡುತ್ತದೆ. ಲಭ್ಯ ಇರುವ ಸರ್ಕಾರಿ ಜಾಗದಲ್ಲಿ ನಿವೇಶನ ಸಿದ್ಧಪಡಿಸಿ, ಬಡವರಿಗೆ ಕೊಡುವ ಕೆಲಸ ಮಾಡಲು ಹೊರಟಿದ್ದೇವೆ. ಶಾಸಕರ ಮೂಲಕ ಗ್ರಾಮ ಸಭೆಗಳನ್ನು ಮಾಡಿ, ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗುಬ್ಬಿ ಶಾಸಕರು ಹಾಗೂ ಕೆಎಸ್ಆರ್ಟಿಸಿ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಹೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಅಶ್ವಿಜ .ಬಿ.ವಿ, ಗ್ಯಾರಂಟಿ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಗೌಡ ಮುಂತಾದವರು ಇದ್ದರು.