Bidar | ಬಸವಕಲ್ಯಾಣದಲ್ಲಿ ಮದರಸಾ ಶಿಕ್ಷಕರಿಬ್ಬರ ಮೇಲೆ ಹಲ್ಲೆ ಆರೋಪ : ಠಾಣೆಗೆ ಮುತ್ತಿಗೆ
ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಬೀದರ್ : ಮದರಸಾ ಶಿಕ್ಷಕರಿಬ್ಬರ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ಸಾಯಂಕಾಲ ಬಸವಕಲ್ಯಾಣ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನೂರಾರು ಜನರು ಪೊಲೀಸ್ ಠಾಣೆ ಎದುರು ಜಮಾವಣೆಗೊಂಡು ಆರೋಪಿಗಳನ್ನು ಒಪ್ಪಿಸುವಂತೆ ಆಗ್ರಹಿಸಿ ಮುತ್ತಿಗೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಸಂಜೆ ಮದರಸಾ ಶಿಕ್ಷಕರಿಬ್ಬರು ನಗರದ ಯಾತ್ರಿ ನಿವಾಸದ ಕಡೆಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ, ಸುಮಾರು 6ರಿಂದ 7 ಅಪರಿಚಿತ ಯುವಕರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಸಮುದಾಯದವರು ಠಾಣೆ ಎದುರು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗುಂಪನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಗದ್ದಲದ ವೇಳೆ ಠಾಣೆಯಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.
ಘಟನೆ ತಿಳಿದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕಿಸಿದರು. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಉದ್ವಿಗ್ನ ವಾತಾವರಣ ಮುಂದುವರಿದಿದೆ.
ಘಟನೆಗೆ ಸಂಬಂಧಿಸಿ ಹಲ್ಲೆ ನಡೆಸಿದ ಅಪರಿಚಿತ ಯುವಕರ ವಿರುದ್ಧ ಹಾಗೂ ಠಾಣೆಗೆ ಮುತ್ತಿಗೆ ಹಾಕಿ ಸರ್ಕಾರಿ ಆಸ್ತಿ ಹಾನಿ ಮಾಡಿದ ಆರೋಪದ ಮೇಲೆ 49 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.