ಸಾಮಾಜಿಕ ಜಾಗೃತಿಗೆ ಎನ್ನೆಸ್ಸೆಸ್ ಪ್ರೇರಕ: ಜಗದೀಶ್ ಕುಮಾರ್
ಉಡುಪಿ, ಸೆ.22: ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯ ಮಾಡುತ್ತವೆ. ಎನ್ನೆಸ್ಸೆಸ್ ವಿದ್ಯಾರ್ಥಿ ಗಳಲ್ಲಿ ನಾಯಕತ್ವ, ಶಿಸ್ತಿನ ಮನೋಭಾವ, ಜವಾಬ್ದಾರಿ ಹಾಗೂ ಸಹಕಾರದ ಗುಣಗಳನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತವೆ ಎಂದು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಹೇಳಿದ್ದಾರೆ.
ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಅಂಗವಾಗಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿಶೇಷ ವಾರ್ಷಿಕ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎನ್ನೆಸ್ಸೆಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ, ರಾಷ್ಟ್ರಪ್ರೇಮ ಮತ್ತು ಸೇವಾ ಭಾವನೆಗಳನ್ನು ಬೆಳೆಸಿ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುತ್ತವೆ ಎಂದರು.
ಡಯಟ್ನ ಹಿರಿಯ ಉಪನ್ಯಾಸಕ ಚಂದ್ರನಾಯಕ್ ಮಾತನಾಡಿ, ಯುವಕರು ದೇಶದ ಭವಿಷ್ಯ. ರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆ ಸುವ ಅತಿದೊಡ್ಡ ಶಕ್ತಿ. ಅವರು ಸತ್ಯ, ನ್ಯಾಯ ಮತ್ತು ಸಮಾನತೆಯ ಮೌಲ್ಯ ಗಳನ್ನು ಪಾಲಿಸಿದಾಗ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಬಾಲಕಿಯರ ಸರಕಾರಿ ಪದ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಿರೂಪಮಾ ಪ್ರಸಾದ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ, ಕಾಲೇಜಿನ ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ರತ್ನಾಕರ್, ಖಜಾಂಜಿ ಶೇಖರ್ ಕೋಟ್ಯಾನ್, ನಿವೃತ್ತ ಉಪನ್ಯಾಸಕ ದಯಾನಂದ ಡಿ, ಹಿರಿಯ ಉಪನ್ಯಾಸಕಿ ಡಾ.ಉಷಾ ಉಪಸ್ಥಿತರಿದ್ದರು.
ಎನ್ನೆಸ್ಸೆಸ್ ಶಿಬಿರಾಧಿಕಾರಿ ಭವ್ಯ ಸ್ವಾಗತಿಸಿ, ಉಪನ್ಯಾಸಕಿ ಗಿರಿಜಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಶುಭಗೀತಾ ವಂದಿಸಿದರು.