ಪ್ರವಾಸೋದ್ಯಮಕ್ಕೆ ಮಾದರಿ ಜಿಲ್ಲೆಯಾಗಿ ಉಡುಪಿ ಅಭಿವೃದ್ಧಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.
ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಉಡುಪಿ, ಸೆ.27: ಪ್ರವಾಸೋದ್ಯಮದಲ್ಲಿಯೂ ಉಡುಪಿ ಜಿಲ್ಲೆಯನ್ನು ರಾಜ್ಯಕ್ಕೇ ಮಾದರಿಯಾಗುವಂತೆ ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳಲಾ ಗುವುದು. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ವಿಶ್ವ ಪ್ರವಾಸಿಗ ರನ್ನು ಸೆಳೆಯುವ ಪ್ರಯತ್ನದಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.
ಶನಿವಾರ ಮಲ್ಪೆ ಕಡಲ ಕಿನಾರೆಯಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾ ಅಥ್ಲೆಟಿಕ್ ಅಸೋಸೊಯೇಶನ್ ಸಹಯೋಗ ದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಹಾಗೂ ಸುಸ್ಥಿರ ಪರಿವರ್ತನೆ ಸಂದೇಶದೊಂದಿಗೆ ಹಮ್ಮಿಕೊಳ್ಳಲಾದ ಬೀಚ್ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.
ಉಡುಪಿ ಜಿಲ್ಲೆ ಬೀಚ್ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವನ್ನು ಹೊಂದಿರುವ ತಾಣವಾಗಿದೆ. ಬೀಚ್ ಪ್ರವಾಸೋ ದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೀಚ್ ಕ್ರೀಡಾಕೂಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗುತ್ತಿದೆ. ಸಿ.ಆರ್.ಝೆಡ್ ವ್ಯಾಪ್ತಿಯಲ್ಲಿ ಬರುವ ಬೀಚ್ ಗಳಲ್ಲಿ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುವ ಅವಕಾಶವಿದ್ದು, ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಮುಂದಿನ ದಿನಗಳಲ್ಲಿ ಜಲಕ್ರೀಡೆ ಮತ್ತು ವಾಯು ಕ್ರೀಡೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬೀಚ್ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಚಾರ ದೊರಕಿಸುವಲ್ಲಿ ಸಹಕರಿಸಬೇಕು ಎಂದವರು ಮನವಿ ಮಾಡಿದರು.
ದೇವಾಲಯಗಳ ನಗರಿ ಎಂದೇ ಪ್ರಸಿದ್ದಿ ಪಡೆದ ಉಡುಪಿ ಜಿಲ್ಲೆಯು ದೇಗುಲ ಪ್ರವಾಸೋದ್ಯಮದಲ್ಲಿ ಈಗಾಗಲೇ ಮುಂಚೂಣಿಯಲ್ಲಿದೆ. ಇಲ್ಲಿನ ದೇವಸ್ಥಾನಗಳಲ್ಲಿ ಜರಗುವ ಹಬ್ಬ ಹರಿದಿನಗಳು ರಾಜ್ಯದಲ್ಲೇ ಹೆಸರುವಾಸಿ ಯಾಗಿದ್ದು ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದೆ. ಇದರ ಜೊತೆಗೆ ಜಿಲ್ಲೆಗೆ ದೈವದತ್ತವಾಗಿ ದೊರೆತಿರುವ ಬೀಚ್ಗಳನ್ನು ವಿಶ್ವ ಮಟ್ಟದಲ್ಲಿ ಪ್ರದರ್ಶಿಸುವ ನಿಟ್ಟಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಮನೋರಂಜನಾ ಕಾರ್ಯಕ್ರಮ ಗಳನ್ನು ಹಾಗೂ ಕ್ರೀಡಾಕೂಟಗಳನ್ನು ಹಮ್ಮಿಕೊಂಡು ವಿಶ್ವಾದ್ಯಂತದ ಪ್ರವಾಸಿಗರನ್ನು ಆಕರ್ಷಿಸಲಾಗುತ್ತಿದೆ ಎಂದವರು ಹೇಳಿದರು.
ಸ್ವಚ್ಚತಾ ಸಪ್ತಾಹದ ಅಂಗವಾಗಿ ಈಗಾಗಲೇ ಎಂಟು ಬೀಚ್ ಗಳಲ್ಲಿ ಸ್ವಚ್ಚತಾ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ಬೀಚ್ಗಳ ಸ್ವಚ್ಚತೆ ಮತ್ತು ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಇಲ್ಲಿನ ಹಲವಾರು ಪ್ರವಾಸಿ ತಾಣಗಳು ಇನ್ನೂ ಪ್ರವಾಸಿಗರ ಕಣ್ಣಿಗೆ ಬಿದ್ದಿಲ್ಲ. ಇಂತಹ ಪ್ರವಾಸಿ ತಾಣಗಳನ್ನು ಗುರುತಿಸುವ ಮತ್ತು ಅವುಗಳನ್ನು ಹಂತ ಹಂತವಾಗಿ ಅಭಿವೃದ್ದಿ ಪಡಿಸಿ ಇನ್ನೂ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಗುರಿ ಇದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಪ್ರವಾಸಿ ತಾಣಗಳಿಗೆ ಪ್ರಚಾರ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುವುದು ಎಂದರು.
ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ ವಿಶ್ವ ಪ್ರವಾಸೋದ್ಯಮದ ದಿನದ ಅಂಗವಾಗಿ ಬೀಚ್ ಕ್ರೀಡಾಕೂಟಗಳನ್ನು ಹಮ್ಮಿಕೊಂಡು ಬೀಚ್ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ. ಬೀಚ್ಗಳ ಸ್ವಚ್ಚತೆ ಮತ್ತು ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಬೀಚ್ ಪ್ರವಾಸೋದ್ಯಮದ ಪ್ರಚಾರಕ್ಕೆ ಅಗತ್ಯವಿರುವಬೆಂಬಲವನ್ನು ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಯಾದವ್, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಉದ್ಯಮಿ ಪ್ರತಿಭಾ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.