×
Ad

ಕಾರಂತರ ಕೃತಿಗಳಿಂದ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ: ಡಾ.ಎಕ್ಕಾರು

ಅರಿವಿನ ಬೆಳಕು ಉಪನ್ಯಾಸ ಮಾಲೆ ಉದ್ಘಾಟನೆ

Update: 2025-09-29 19:38 IST

ಉಡುಪಿ, ಸೆ.29:ಡಾ.ಶಿವರಾಮ ಕಾರಂತರು 6 ದಶಕಗಳ ಹಿಂದಿನಿಂದಲೂ ಸಂವಿಧಾನದ ಅಂಶಗಳನ್ನು ತಮ್ಮ ಜೀವನದಲ್ಲಿ ಪ್ರತಿಪಾದಿಸಿದವರು. ಅದೇ ರೀತಿ ಅವರ ಕೃತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ಓದುಗರಿಗೆ ತಿಳಿಸಿಕೊಡುತ್ತವೆ. ವಿದ್ಯಾರ್ಥಿಗಳು ತಮ್ಮ ಸಮಯವನ್ನು ವ್ಯರ್ಥ ಮಾಡದೇ ಡಾ.ಕಾರಂತರಂಥವರ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿ ಕೊಳ್ಳಬೇಕು ಎಂದು ಚಿಂತಕ ಹಾಗೂ ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ‘ಅರಿವಿನ ಬೆಳಕು ಉಪನ್ಯಾಸ ಮಾಲೆ -10’ರ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

‘ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಸಾಹಿತಿ ಮತ್ತು ಮಹಿಳಾ ಚಿಂತಕಿ ವಸಂತಿ ಶೆಟ್ಟಿ ಬ್ರಹ್ಮಾವರ, ಕಾರಂತರ ನೇರ ನಡೆ- ನುಡಿ ಹಾಗೂ ಅವರು ಬದುಕಿದ ರೀತಿ ಪ್ರತಿಯೊಬ್ಬರಿಗೂ ಆದರ್ಶ. ಅವರು ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯ ನಿರ್ವಹಿಸಿದವರು. ಇಂದಿನ ಯುವ ಪೀಳಿಗೆ ಅವರ ಮಾರ್ಗವನ್ನು ಪಾಲಿಸುವಂತಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ ಮತ್ತಿತರರು ಉಪಸ್ಥಿತರಿದ್ದರು.

ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಭವ್ಯ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News