ಕೊಲ್ಲೂರು: ವಿಜೃಂಭಣೆಯ ಮಹಾನವರಾತ್ರಿ ರಥೋತ್ಸವ ಸಂಪನ್ನ
ಅಕ್ಷರಾಭ್ಯಾಸ ಕಾರ್ಯಕ್ರಮ, ಕದಿರು ಹಬ್ಬದ ಆಚರಣೆ
ಕೊಲ್ಲೂರು (ಕುಂದಾಪುರ), ಅ.2: ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಬುಧವಾರ ಅಪರಾಹ್ನ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಶ್ರೀ ಮೂಕಾಂಬಿಕಾ ದೇವಿಯ ವೈಭವದ ರಥೋತ್ಸವ ಸಂಪನ್ನಗೊಂಡಿತು.
ನವರಾತ್ರಿ ಪ್ರಾರಂಭವಾದ ದಿನದಿಂದ ಮಹಾನವಮಿಯ ತನಕವೂ ದೇವಸ್ಥಾನದಲ್ಲಿ ವಿವಿಧ ಪೂಜೆ ಹಾಗೂ ಧಾರ್ಮಿಕ ಆಚರಣೆಯನ್ನು ನಡೆಸಲಾಗಿತ್ತು. ಬುಧವಾರ ಅಪರಾಹ್ನ ತಂತ್ರಿ ನಿತ್ಯಾನಂದ ಅಡಿಗರ ಅವರ ನೇತೃತ್ವ ದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿಗಳ ಬಳಿಕ ದೇಗುಲದಿಂದ ಹೊರಕ್ಕೆ ತರಲಾದ ಶ್ರೀದೇವಿಯ ಉತ್ಸವ ಮೂರ್ತಿಯ ಪ್ರದಕ್ಷಿಣೆ ಹಾಗೂ ಬಲಿ ಸೇವೆ ನಡೆಸಿದ ಬಳಿಕ ದೇವಿಯನ್ನು ಅಲಂಕರಿಸಿದ ಪುಷ್ಪ ರಥದಲ್ಲಿ ಕುಳ್ಳಿರಿಸಲಾಯಿತು.
ರಥ ಪೂಜೆ ನಡೆಸಿದ ತಂತ್ರಿಗಳು ಬಳಿಕ ದೇವಿಗೆ ಪೂಜೆ ನೆರವೇರಿಸಿ, ಮಂಗಳಾರತಿ ಎತ್ತಿದ ಬಳಿಕ, ಸೇರಿದ್ದ ಸಾವಿರಾರು ಜನರು ಶ್ರೀದೇವಿಯ ಜಯಘೋಷದೊಂದಿಗೆ ರಥವನ್ನು ಎಳೆದರು. ದೇವಳದ ಒಳ ಪ್ರಾಂಗಣದಲ್ಲಿ ರಥ ಒಂದು ಸುತ್ತನ್ನು ಕ್ರಮಿಸಿತು.
ಬುಧವಾರ ನಡೆದ ಶರನ್ನವರಾತ್ರಿ ಉತ್ಸವಕ್ಕೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹರಿದು ಬಂದಿದ್ದರು. ಭಕ್ತಾಭಿಮಾನಿಗಳ ನೂಕುನುಗ್ಗಲು ಆಗದಂತೆ ಡಿವೈಎಸ್ಪಿ ಹೆಚ್.ಡಿ.ಕುಲಕರ್ಣಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಸದಸ್ಯರಾದ ಪಿ.ವಿ.ಅಭಿಲಾಶ್, ರಘುರಾಮ ದೇವಾಡಿಗ ಆಲೂರು, ಮಹಾಲಿಂಗ ನಾಯ್ಕ, ರಾಜೇಶ್ ಕಾರಂತ್, ಸುರೇಂದ್ರ ಶೆಟ್ಟಿ, ಧನಾಕ್ಷೀ ಪೂಜಾರಿ, ಸುಧಾ ಬೈಂದೂರು, ಶಾಸಕರಾದ ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಐ.ಎಚ್.ತುಂಬಿಗೆ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್ ಕೊಲ್ಲೂರು ಮುಂತಾದವರು ಉಪಸ್ಥಿತರಿದ್ದರು.
ಗುರುವಾರ ವಿಜಯದಶಮಿ ಆಚರಣೆಯ ಅಂಗವಾಗಿ ಬೆಳಿಗ್ಗೆ 3 ಗಂಟೆಯಿಂದ ಪುಟಾಣಿಗಳಿಗೆ ದೇವಸ್ಥಾನದ ಋತ್ವೀಜರ ಮೂಲಕ ಅಕ್ಷರಾಭ್ಯಾಸ ಕಾರ್ಯಕ್ರಮ, ಕದಿರು ಹಬ್ಬದ ಆಚರಣೆ, ನವನ್ನಾಪ್ರಾಶನ ಹಾಗೂ ಸಂಜೆ ವಿಜಯೋತ್ಸವ ನಡೆಯಿತು.
ಎಸ್ಪಿ ಹರಿರಾಮ್ ಶಂಕರ್ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಸುಧಾಕರ ನಾಯ್ಕ್ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ, ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜಿಲ್ಲಾ ಹೋಂ ಗಾರ್ಡ್ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ, ವೃತ್ತ ನಿರೀಕ್ಷಕರಾದ ಜಯರಾಮ್ ಗೌಡ, ನಿಲೇಶ್ ಚೌಹಾಣ್, ಉಪನಿರೀಕ್ಷಕರುಗಳಾದ ವಿನಯ್ ಕೊರ್ಲಹಳ್ಳಿ, ತಿಮ್ಮೇಶ್, ಯೂನಸ್ ಗಡ್ಡೇಕರ್, ಸುಧಾರಾಣಿ, ಚಂದ್ರಕಲಾ ಪತ್ತರ್, ನವೀನ್ ಬೋರ್ಕರ್ ಮುಂತಾದವರಿದ್ದರು.
ದೇವಿದರ್ಶನ ಪಡೆದ ಅಣ್ಣಾಮಲೈ: ತಮಿಳುನಾಡಿನ ಬಿಜೆಪಿ ಮುಖಂಡ ಹಾಗೂ ಉಡುಪಿ ಜಿಲ್ಲೆಯ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಅವರು ಇಂದು ವಿಜಯದಶಮಿ ಸಂದರ್ಭದಲ್ಲಿ ಮುಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಗುರುವಾರ ಮುಂಜಾನೆಯೇ ದೇವಸ್ಥಾನಕ್ಕೆ ಭೇಟಿ ನೀಡಿದ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು. ಅಣ್ಣಾಮಲೈ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ನೆರೆದ ಭಕ್ತರು ಮುಗಿಬಿದ್ದರು.