×
Ad

ನವೆಂಬರ್ ಮೊದಲ ವಾರ ಕಟಪಾಡಿ ಫ್ಲೈ-ಓವರ್ ಕಾಮಗಾರಿ ಆರಂಭ: ರಾ.ಹೆದ್ದಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಕೋಟ

Update: 2025-10-14 20:26 IST

ಉಡುಪಿ, ಅ.14: ಕಟಪಾಡಿಯಲ್ಲಿ ಫ್ಲೈ-ಓವರ್ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಈಗಾಗಲೇ ಉದ್ದೇಶಿಸಲಾ ಗಿದ್ದು, ಕಾಮಗಾರಿಯನ್ನು ನವೆಂಬರ್ ಮೊದಲನೇ ವಾರದಿಂದ ಪ್ರಾರಂಭಿಸಬೇಕು. ಕಾಮಗಾರಿ ವೇಳೆ ಹೆದ್ದಾರಿ ಬಂದ್ ಆಗುವ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ವಾಗುವಂತೆ ಸರ್ವಿಸ್ ರಸ್ತೆಯಲ್ಲಿ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಳೆಯಿಂದಲೇ ಹೆದ್ದಾರಿಯಲ್ಲಿರುವ ವಿದ್ಯುತ್ ತಂತಿ ಕಂಬಗಳ ಸ್ಥಳಾಂತರ ಕಾರ್ಯವನ್ನು ಪ್ರಾರಂಭಿಸಬೇಕು. ಈ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸ್ಥಳಿಯ ಸಂಸ್ಥೆಗಳ ಸಹಕಾರ ಪಡೆಯಬೇಕು. ರಾ.ಹೆದ್ದಾರಿ ಇಬ್ಬಾಗದಲ್ಲಿ ಸರ್ವಿಸ್ ರಸ್ತೆ ಕಾಮಗಾರಿಯ ಪ್ರಗತಿಯನ್ನು ಹೆಚ್ಚಿಸಬೇಕು. ಅರಣ್ಯ ಇಲಾಖೆಯಿಂದ ಮರಗಳ ತೆರವಿಗೆ ತ್ವರಿತವಾಗಿ ಅನುಮತಿ ಪಡೆದು ತೆರವುಗೊಳಿಸಬೇಕು ಎಂದರು.

ಸಂತೆಕಟ್ಟೆ ಕಲ್ಯಾಣಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯನ್ನು ಹೆಚ್ಚಿಸುವುದರೊಂದಿಗೆ ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕೋಟ ಸೂಚನೆ ನೀಡಿದರು.

ಅಂಬಲಪಾಡಿ ಜಂಕ್ಷನ್‌ನಲ್ಲಿ ಫ್ಲೈ-ಓವರ್ ನಿರ್ಮಾಣ ಕಾಮಗಾರಿ ಪ್ರಗತಿ ಯಲ್ಲಿದೆ. ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದ ಅವರು, ಕಾಮಗಾರಿಯಿಂದ ಗೋಪುರದ ಹತ್ತಿರ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

169ಎ ಮಲ್ಪೆಯಿಂದ ಕರಾವಳಿ ಜಂಕ್ಷನ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ 2.2 ಕಿ.ಮೀ. ಈಗಾಗಲೇ ಪ್ರಗತಿ ಯಲ್ಲಿದೆ. ಈ ಕಾಮಗಾರಿಗೆ ಅಗತ್ಯವಿರುವ ಬಾಕಿ ಉಳಿದ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣ ಗೊಳಿಸಲು ಕ್ರಮವಹಿಸಬೇಕು. ಭೂಮಾಲಕರಿಗೆ ವೈಜ್ಞಾನಿಕವಾಗಿ ಪರಿಹಾರದ ಹಣವನ್ನು ನೀಡಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದರು.

ಕಾರ್ಕಳ ತಾಲೂಕಿನ 169ಎಗೆ ಸಂಬಂಧಿಸಿದಂತೆ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫುಲ್ಕೇರಿ ಬೈಪಾಸ್ ಮುರತ್ತಂಗಡಿ ಪದವಿ ಪೂರ್ವ ಕಾಲೇಜಿನವರೆಗೆ 6 ಬಸ್ ನಿಲ್ದಾಣಗಳಿದ್ದು ಇವುಗಳ ಪುನರ್ ನಿರ್ಮಾಣ ಕಾರ್ಯ ನಡೆಸಿ, ಕಾಲೇಜಿನ ತಡೆಗೋಡೆ ಮೇಲೆ ರಕ್ಷಣಾ ತಡೆಗೋಡೆ ನಿರ್ಮಾಣ ಕೈಗೊಳ್ಳಬೇಕು. ಈ ಪ್ರದೇಶದಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ಪೂರ್ಣಗೊಂಡಿದ್ದು ಆದಷ್ಟು ಬೇಗ ವಿದ್ಯುತ್ ಸಂಪರ್ಕ ನೀಡಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವುದರೊಂದಿಗೆ ನಿಗದಿತ ಕಾಲಾವಧಿಯಲ್ಲಿ ಅವುಗಳನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡ ಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಾಗೂ ಅಭಿಯಂತರರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮಿಷನರ್ ರಶ್ಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಡಿಎಫ್‌ಓ ಗಣಪತಿ, ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾ.ಹೆ.ಅಭಿಯಂತರರು ಹಾಗೂ ಇತರರು ಉಪಸ್ಥಿತರಿದ್ದರು.

‘ಬ್ಲ್ಯಾಕ್‌ಸ್ಪಾಟ್ ಕಾಮಗಾರಿ ತಕ್ಷಣ ಮಾಡಿ’

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಬಳಿ ಬೀದಿ ದೀಪ ಅಳವಡಿಸಬೇಕು. ಈಗಾಗಲೇ ಗುರುತಿಸಿರುವ 22 ಬ್ಲಾಕ್‌ಸ್ಪಾಟ್‌ ಗಳಲ್ಲಿ ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಅಪಘಾತಗಳನ್ನು ಕಡಿಮೆ ಗೊಳಿಸಿ ಅಪಘಾತ ಮುಕ್ತ ವಲಯವಾಗಿಸಲು ಕಳೆದ ಸಭೆಯಲ್ಲಿ ಸೂಚಿಸಲಾಗಿತ್ತು, ಕಾಪು ಮತ್ತು ಪಡುಬಿದ್ರಿಯಲ್ಲಿ ಮಾತ್ರ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಕೋಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬಾಕಿ ಉಳಿದ ಬ್ಲಾಕ್‌ಸ್ಪಾಟ್‌ಗಳಲ್ಲಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೂಡಲೇ ಕೈಗೊಳ್ಳಬೇಕು. ಕೇವಲ ಟೋಲ್ ವಸೂಲಿಗೆ ಸೀಮಿತವಾಗದೆ ಹೆದ್ದಾರಿ ನಿರ್ವಹಣಾ ಕಾಮಗಾರಿಗಳನ್ನು ಸಹ ನಡೆಸಲು ಮುಂದಾಗಬೇಕು ಎಂದು ಅವರು ಹೇಳಿದರು.

ಓವರ್‌ಸ್ಪೀಡ್ ಪತ್ತೆಗೆ ಕೆಮರಾ

ಹೆದ್ದಾರಿಯಲ್ಲಿ ಓವರ್ ಸ್ಪೀಡ್ ವಾಹನಗಳನ್ನು ಗುರುತಿಸಲು ಕ್ಯಾಮರಾ ಅಳವಡಿಕೆಯನ್ನು ಪೊಲೀಸ್ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಅಗತ್ಯವಿರುವ ವಿದ್ಯುತ್‌ಚ್ಛಕ್ತಿ ಸೌಲಭ್ಯ ಮತ್ತು ಇತರ ಅಗತ್ಯ ಕಾಮಗಾರಿ ಗಳನ್ನು ಹೆದ್ದಾರಿ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಸಂಸದರು ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News