ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
ಉಡುಪಿ, ಡಿ.18: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿ ಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿ ರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021ರ ಸೆಕ್ಷನ್ 56(1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದ್ದಾರೆ.
ಮಣಿಪಾಲದ ತಮ್ಮ ಕಚೇರಿಯಲ್ಲಿ ತಮಿಳುನಾಡು ಮೂಲದ ಇಬ್ಬರು ದಂಪತಿಗಳಿಗೆ ಹಾಗೂ ಹಾಸನ ಮೂಲದ ಓರ್ವ ದಂಪತಿಗೆ ಒಟ್ಟು ಮೂರು ಮಕ್ಕಳ ಅಂತಿಮ ದತ್ತು ಆದೇಶವನ್ನು ಇತ್ತೀಚೆಗೆ ನೀಡಿ ಅವರು ಮಾತನಾಡುತ್ತಿದ್ದರು.
ದತ್ತು ಪಡೆಯಲು ಇಚ್ಛಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹು ದಾಗಿದೆ. ಮಗು ಬೇಡವಾದಲ್ಲಿ ಕಸದ ತೊಟ್ಟಿ, ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ ಹಾಗೂ ಪೊದೆಗಳಲ್ಲಿ ಎಸೆಯದೇ ಪರಿತ್ಯಕ್ತ ಮಕ್ಕಳ ರಕ್ಷಣೆಗಾಗಿ ಇರುವ ವಿಶೇಷ ಮಮತೆಯ ತೊಟ್ಟಿಲುಗಳಲ್ಲಿ ಮಕ್ಕಳನ್ನು ಬಿಡಬಹು ದಾಗಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಸಂತೆಕಟ್ಟೆಯ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರ, ಉಡುಪಿಯ ಬಿ.ಆರ್.ಶೆಟ್ಟಿ ಆಸ್ಪತ್ರೆ ಹಾಗೂ ನಿಟ್ಟೂರು ಸರಕಾರಿ ಬಾಲಕಿಯರ ಬಾಲಮಂದಿರ ಇಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಲಾಗಿದೆ ಎಂದರು.
ಕಾನೂನು ಉಲ್ಲಂಘಿಸಿ ಅಥವಾ ಮಕ್ಕಳ ಮಾರಾಟ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿಗಳು ಶಾಮೀಲಾಗಿದ್ದಲ್ಲಿ 1 ಲಕ್ಷ ರೂ. ದಂಡ ಹಾಗೂ 7 ವರ್ಷ ದವರೆಗೆ ಜೈಲು ಶಿಕ್ಷೆ ಹಾಗೂ ಮಕ್ಕಳನ್ನು ಮಾರಾಟ ಮಾಡಿದವರಿಗೆ ಹಾಗೂ ಮಕ್ಕಳನ್ನು ದತ್ತು ಪಡೆದವರಿಗೆ ಒಂದು ಲಕ್ಷ ದಂಡ ಹಾಗೂ 5 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ, ರಕ್ಷಣಾಧಿಕಾರಿಗಳಾದ ಮಹೇಶ್, ಸುರಕ್ಷಾ, ಶ್ರೀಕೃಷ್ಣಾನುಗೃಹ ದತ್ತು ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದತ್ತು ಪ್ರಕ್ರಿಯೆ ಕುರಿತು ಹಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ವೆಬ್ಸೈಟ್ - https://missionvatsalya.wcd.gov.in-, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಛೇರಿ ದೂರವಾಣಿ ಸಂಖ್ಯೆ: 0820-2574964 ಮತ್ತು ಸಂತೆಕಟ್ಟೆಯ ಶ್ರೀಕೃಷ್ಣಾನುಗೃಹ ದತ್ತು ಕೇಂದ್ರ ದೂರವಾಣಿ ಸಂಖ್ಯೆ: 9880442640ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.