×
Ad

ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿ: ಡಾ.ತಲ್ಲೂರು

ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ ಸಮಾರೋಪ

Update: 2025-12-30 20:17 IST

ಉಡುಪಿ, ಡಿ.30: ರಂಗಭೂಮಿ ಸಂಸ್ಥೆಯ ವತಿಯಿಂದ ಉಡುಪಿ ಪರಿಸರದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿಯಾಗಲಿದೆ. ಮಕ್ಕಳಲ್ಲಿ ಹುದುಗಿರುವ ಪ್ರತಿಭಾಶಕ್ತಿಯನ್ನು ಹೊರ ತರುವುದೇ ಈ ರಂಗಶಿಕ್ಷಣದ ಉದ್ದೇಶವಾಗಿದೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ರಂಗಭೂಮಿ ರಂಗ ಶಿಕ್ಷಣ ಅಭಿಯಾನದ ಮಕ್ಕಳ ನಾಟಕೋತ್ಸವದಲ್ಲಿ ಮಂಗಳವಾರ ನಡೆದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಂಗಭೂಮಿ ಕಂಡ ಕನಸು ಈಗ ನನಸಾಗುತ್ತಿದೆ. ಈ ಬಾರಿ 11 ಶಿಕ್ಷಣ ಸಂಸ್ಥೆಗಳ 250ಕ್ಕೂ ಅಧಿಕ ಮಕ್ಕಳು ರಂಗಶಿಕ್ಷಣ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ರಂಗಶಿಕ್ಷಣವನ್ನು ಇನ್ನಷ್ಟು ಶಾಲೆಗಳಿಗೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ಅವರು ತಿಳಿಸಿದರು.

ಎಲ್ಲಾ ಕ್ಷೇತ್ರಗಳಲ್ಲಿಯೂ ನಿವೃತ್ತಿ ಎಂಬುದಿದೆ. ಆದರೆ ಕಲಾವಿದರಿಗೆ ನಿವೃತ್ತಿಯಿಲ್ಲ. ಮಕ್ಕಳಿಗೆ ರಂಗ ಶಿಕ್ಷಣ ನೀಡಿ ಅವರನ್ನು ನಾಡಿನ ಉತ್ತಮ ನಾಗರಿಕರನ್ನಾಗಿಸುವ ರಂಗಭೂಮಿಯ ಈ ಅಭಿಯಾನದಲ್ಲಿ ಸಂಘಸಂಸ್ಥೆಗಳು ಕೈ ಜೋಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅದಾನಿ ಪವರ್‌ನ ಎಜಿಎಂ ರವಿ ಜರೆ ಮಾತನಾಡಿ, ಕಳೆದ 6 ದಶಕಗಳಿಂದ ರಂಗಭೂಮಿಯ ಕಂಪನ್ನು ನಾಡಿನ ಉದ್ದಗಲಕ್ಕೂ ಪಸರಿಸಿದ ರಂಗಭೂಮಿ ಉಡುಪಿ ಸಂಸ್ಥೆ ಇದೀಗ ಮಕ್ಕಳನ್ನು ನಾಟಕದತ್ತ ಸೆಳೆಯಲು ರಂಗ ಶಿಕ್ಷಣವನ್ನು ಹಮ್ಮಿಕೊಂಡಿರುವುದು ಅಭಿನಂದನಾರ್ಹ. ಮಕ್ಕಳ ವ್ಯಕ್ತಿತ್ವ ವಿಕಸನದ ಜೊತೆಗೆ ಈ ರಂಗಶಿಕ್ಷಣ ಮಕ್ಕಳ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಲಿ ಎಂದರು.

ಉದ್ಯಮಿ ಶ್ರೀಶ ನಾಯಕ್ ಪೆರಣಂಕಿಲ ಮಾತನಾಡಿದರು. ರಂಗ ಶಿಕ್ಷಣ ಯೋಜನೆಯ ಸಂಚಾಲಕ ವಿದ್ಯಾವಂತ ಆಚಾರ್ಯ ಸಮಾರೋಪ ಭಾಷಣ ಮಾಡಿದರು. ಅಲಯನ್ಸ್ ಜಿಲ್ಲಾ ಗವರ್ನರ್ ಸುನೀಲ್ ಸಾಲ್ಯಾನ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಂಗ ಶಿಕ್ಷಣ ಪಡೆದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಹಾಗೂ ರಂಗಶಿಕ್ಷಣದ ಗುರುಗಳಿಗೆ ಗೌರವಾರ್ಪಣೆ ನಡೆಯಿತು. ಉದ್ಯಮಿ ಜಮಾಲುದ್ದೀನ್ ಅಬ್ಬಾಸ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ, ಆರ್‌ಆರ್‌ಸಿ ನಿರ್ದೇಶಕ ಡಾ.ಜಗದೀಶ್ ಶೆಟ್ಟಿ, ರಂಗಭೂಮಿ ಉಡುಪಿಯ ಉಪಾಧ್ಯಕ್ಷರಾದ ರಾಜಗೋಪಾಲ್ ಬಲ್ಲಾಳ್ ಹಾಗೂ ಭಾಸ್ಕರ್ ರಾವ್ ಕಿದಿಯೂರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪ್ರದೀಪಚಂದ್ರ ಕುತ್ಪಾಡಿ ಸ್ವಾಗತಿಸಿದರು. ರವಿರಾಜ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಅಮಿತಾಂಜಲಿ ಕಿರಣ್ ವಂದಿಸಿದರು.

ಇಂದು ದಿನದಲ್ಲಿ ಉಡುಪಿ ಬೈಲಕೆರೆ ಶ್ರೀಅನಂತೇಶ್ವರ ಪ್ರೌಢಶಾಲೆಯ ಮಕ್ಕಳಿಂದ ‘ಒಮ್ಮೆ ಸಿಕ್ಕರೆ, ನಿಟ್ಟೂರು ಪ್ರೌಢಶಾಲಾ ಮಕ್ಕಳಿಂದ ‘ಕತ್ತಲೆ ನಗರ ತಲೆಕೆಟ್ಟ ರಾಜ’, ಕುಂಜಿಬೆಟ್ಟು ಟಿ.ಎ.ಪೈ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ‘ತಾರೆ’, ಸೈಂಟ್ ಸಿಸಿಲೀಸ್ ಪ್ರೌಢಶಾಲೆಯ ಮಕ್ಕಳಿಂದ ‘ಅಳಿಲು ರಾಮಾಯಣ’ ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ ‘ಎಂಡ್ ಇಲ್ಲದ ಬಂಡ್ ಅವತಾರ’ ನಾಟಕಗಳು ಪ್ರದರ್ಶನಗೊಂಡವು.

ಎರಡು ದಿನಗಳ ಕಾಲ ನಡೆದ ಈ ನಾಟಕೋತ್ಸವದಲ್ಲಿ 11 ಶಿಕ್ಷಣ ಸಂಸ್ಥೆಗಳ 250ಕ್ಕೂ ಅಧಿಕ ಮಕ್ಕಳು ಭಾಗವಹಿಸಿ 11 ನಾಟಕಗಳನ್ನು ಪ್ರದರ್ಶಿಸಿದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News