×
Ad

ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2026-05-16 21:05 IST

ಉಡುಪಿ, ಮೇ 16: ಜಿಲ್ಲೆಯಲ್ಲಿ ಮುಂಗಾರು ಶೀಘ್ರವೇ ಪ್ರಾರಂಭಗೊ ಳ್ಳಲಿದ್ದು, ಈ ಸಂದರ್ಭದಲ್ಲಿ ಅತಿವೃಷ್ಠಿಯಿಂದ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಮಾನವ ಮತ್ತು ಜಾನುವಾರಗಳ ಜೀವಹಾನಿಯಾಗದಂತೆ ನೋಡಿಕೊಳ್ಳು ವಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಮತ್ತು ಜಿಲ್ಲಾ ಉಸ್ತುವಾರಿ ಸಚಿರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಡಾ.ವಿ. ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮಳೆಗಾಲದಲ್ಲಿ ಅತಿ ಹೆಚ್ಚು ಮಳೆ ಸುರಿದು ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಮಳೆಯಿಂದ ರಸ್ತೆಗಳು ಹಾಳಾಗಿ ಜನರ ಸುಗಮ ಸಂಚಾರಕ್ಕೆ ವ್ಯತ್ಯಯ ವಾಗದಂತೆ ಕ್ರಮಕೈಗೊಳ್ಳಬೇಕು. ಕಾಲುಸಂಕಗಳ ಬಳಕೆಯ ಸಂದರ್ಭದಲ್ಲಿ ಅವಘಡಗಳಾಗದಂತೆ ನೋಡಿ ಕೊಳ್ಳಬೇಕು. ಅದೇ ರೀತಿ ಗಾಳಿ-ಮಳೆಯ ಸಂದರ್ಭದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ಅಪಾಯಕಾರಿ ಮರಗಳ ತೆರವಿಗೆ, ವಿದ್ಯುತ್‌ನ ಮರು ಸಂಪರ್ಕಕ್ಕೆ ಆದ್ಯತೆ ನೀಡಬೇಕು ಎಂದರು.

ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿರುವ ಬಗ್ಗೆ ಮಾಹಿತಿಗಳನ್ನು ಕೇಳಿ ಪಡೆದ ಸಚಿವರು, ಬಿಸಿಯೂಟದ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಅಪಘಾತ ಸೇರಿದಂತೆ ತುರ್ತು ಸಂದರ್ಭ ಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸರಕಾರ 108 ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದು, ಜಿಲ್ಲೆಯಲ್ಲಿ 18 ಅಂಬುಲೆನ್ಸ್‌ ಗಳಿವೆ. ಇವುಗಳಲ್ಲಿ 16 ಅಂಬುಲೆನ್ಸ್‌ಗಳು ಮಾತ್ರ ಕಾರ್ಯನಿರ್ವಸುತ್ತಿವೆ. ಆದರೆ ಅವು ಸಕಾಲದಲ್ಲಿ ಸೇವೆಗಳನ್ನು ಒದಗಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಚಾಲಕರು, ಶುಶೂಷ್ರಕರು ಸೇರಿದಂತೆ ವಿವಿಧ ಸಿಬ್ಬಂದಿಗಳ ಕೊರತೆ ಇದ್ದು, ಅವುಗಳನ್ನು ನನ್ನ ಗಮನಕ್ಕೆ ತರಲಾಗಿಲ್ಲ ಎಂದ ಅವರು ಸರಕಾರದಿಂದ ಅನುಮತಿ ಪಡೆದು ಹೊರಗುತ್ತಿಗೆ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು.

ಕಾರ್ಕಳದ ತಾಲೂಕು ಆಸ್ಪತ್ರೆಯಲ್ಲಿ ತಜ್ಞ ಹೆರಿಗೆ ವೈದ್ಯರ ಕೊರತೆಯಿಂದಾಗಿ ಈ ಹಿಂದೆ 100ರಿಂದ 120ಕ್ಕೂ ಹೆಚ್ಚು ಹೆರಿಗೆ ಆಗುತ್ತಿದ್ದಲ್ಲಿ ಈಗ 5-6ಕ್ಕೆ ಇಳಿದಿದೆ ಎಂದು ಶಾಸಕ ಸುನಿಲ್ ಕುಮಾರ್ ಸಚಿವರಲ್ಲಿ ದೂರಿದರು. ಇದಕೆಕ ಉತ್ತರಿಸಿದ ಡಿಎಚ್‌ಓ, ಗುತ್ತಿಗೆ ಆಧಾರದಲ್ಲಿ ಗೈನಕಾಲಜಿಸ್ಟ್ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದರೂ ಯಾರೂ ಸಹ ಅರ್ಜಿ ಹಾಕಿಲ್ಲ ಎಂದರು. ಹಾಗಿದ್ದರೆ ಖಾಸಗಿ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ ಸೇವೆಗಳನ್ನು ಒದಗಿಸಬೇಕು ಎಂದು ಸಚಿವರು ಸೂಚಿಸಿದರು.

ಮುಂಬರುವ ಮುಂಗಾರಿನ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಗರಿಗೆದರಲಿದ್ದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ತೊಂದರೆ ಆಗದಂತೆ ಸಾಕಷ್ಟು ದಾಸ್ತಾನು ಇಟ್ಟುಕೊಂಡು ರೈತರ ಬೇಡಿಕೆಗೆ ಅನುಗುಣವಾಗಿ ಇವುಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಸರಕಾರ ರೈತರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪುಸ್ತಕದ ಅಂಕಿ-ಸಂಖ್ಯೆಗಳನ್ನು ತೋರಿಸುವ ಬದಲು ರೈತರ ಮನೆ ಬಾಗಿಲಿಗೆ ಹೋಗಿ, ಸೌಕರ್ಯಗಳನ್ನು ನೀಡಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.

ಕಂದಾಯ ಇಲಾಖೆಯಲ್ಲಿ ಜಾಗ ಮಂಜೂರು ಮಾಡಿದರೂ ದಾಖಲಾತಿ ನೀಡಲು ಅನುಕೂಲವಾಗುವಂತೆ 1-5 ಡಾಟಾ ಎಂಟ್ರಿ ಮಾಡಲು 3652 ಕಡತಗಳು ಬಾಕಿ ಇವೆ. ಇವುಗಳನ್ನು ಆದ್ಯತೆಯ ಮೇಲೆ ಮಾಡಬೇಕು. ಜಾಗ ಕೋರಿ 53-54 ಹಾಗೂ 94ಸಿಗಳಲ್ಲಿ ಅತ್ಯಂತ ಬಡಜನರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಈವರೆಗೂ ಅವುಗಳ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಜಿಲ್ಲಾಧಿಕಾರಿಗಳು ಪ್ರತೀ ವಾರ ತಹಶೀಲ್ದಾರರ ಸಭೆ ಕರೆದು ಹಕ್ಕು ಪತ್ರಗಳನ್ನು ನೀಡಲು ಮುಂದಾಗಬೇಕು. ಮುಂದಿನ ಬಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಾಗ 500ಕ್ಕೂ ಹೆಚ್ಚು ಜನರಿಗೆ ಹಕ್ಕುಪತ್ರ ವಿತರಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಸರಕಾರದ ಪ್ರಧಾನ ಕಾರ್ಯದರ್ಶಿಗಳು 680ಕ್ಕೂ ಹೆಚ್ಚು 54-55 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಇವು ಇ-ಪೋರ್ಟಲ್‌ನಲ್ಲಿ ದಾಖಲಿಸದೇ ಇರುವ ಬಗ್ಗೆ ಕ್ರಮ ಕೈಗೊಳ್ಳಲು ತಿಳಿಸಿದ್ದರೂ ಸಹ ಈವರೆಗೆ ಯಾವುದೇ ರೀತಿಯ ಕ್ರಮವಾಗಿಲ್ಲ. ಈ ಬಗ್ಗೆ ಗಮನಹರಿಸಬೇಕು ಎಂದರು.

ಜಿಲ್ಲೆಯಲ್ಲಿ ಡೀಮ್ಡ್ ಫಾರೆಸ್ಟ್ ಭೂಮಿಯು ಅರಣ್ಯ ಅಥವಾ ಕಂದಾಯ ಇಲಾಖೆಗೆ ಸೇರಿದೆಯೇ ಎಂಬ ಬಗ್ಗೆ ವರ್ಗೀಕರಿ ಸಲು ಈಗಾಗಲೇ ಜಂಟಿ ಸರ್ವೆಯನ್ನು ಕೈಗೊಳ್ಳಬೇಕಿತ್ತು. ಸರ್ವೇ ಮಾಡುವುದರಿಂದ ಭೂಮಿಯು ಅರಣ್ಯ ಅಥವಾ ಕಂದಾಯ ಇಲಾಖೆಗೆ ಸೇರಿದೆ ಎಂದು ಗುರುತಿಸಲು ಅವಕಾಶವಿದೆ. ಡೀಮ್ಡ್ ಫಾರೆಸ್ಟ ವ್ಯಾಪ್ತಿಯಲ್ಲಿ ಕೆಲವು ಸರಕಾರಿ ಕಟ್ಟಡಗಳು, ಶಾಲೆಗಳು, ಆಸ್ಪತ್ರೆಗಳು ಸೇರಿವೆ. ಈ ಸರ್ವೇ ಕಾರ್ಯವನ್ನು ಕೈಗೊಳ್ಳಲು ಇರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ, ಕೂಡಲೇ ಸರ್ವೇ ಕಾರ್ಯವನ್ನು ಕೈಗೊಳ್ಳಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಕಂದಾಯ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಾಮಾಜಿಕ ಭದ್ರತೆಯನ್ನು ಒದಗಿಸುವ ಪಿಂಚಣಿ ಸರ್ವೇ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಅರ್ಹ ಯಾವುದೇ ಒಬ್ಬ ಫಲಾನುಭವಿ ಕೈತಪ್ಪಿ ಹೋಗದಂತೆ ನೋಡಿಕೊಳ್ಳಬೇಕು. ತಪ್ಪು ದಾಖಲೆಗಳನ್ನು ಪಡೆದು ಲಾಭ ಪಡೆಯುತ್ತಿದ್ದರೆ ಅವರನ್ನು ಪಟ್ಟಿಯಿಂದ ಕೈಬಿಡಬೇಕು ಎಂದರು.

ಸಭೆಯಲ್ಲಿ ವಿಧಾನಪರಿಷತ್‌ನ ಶಾಸಕರಾದ ಎಸ್.ಎಲ್. ಬೋಜೇಗೌಡ, ಡಾ.ಮಂಜುನಾಥ್ ಭಂಡಾರಿ, ಕಿಶೋರ್‌ ಕುಮಾರ್ ಪುತ್ತೂರು, ಶಾಸಕರಾದ ವಿ.ಸುನಿಲ್ ಕುಮಾರ್, ಯಶ್‌ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಖಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿಎಫ್‌ಓ ರುಥ್ರೇನ್ ಪಿ, ವೈಲ್ಡ್‌ಲೈಫ್ ಡಿಎಫ್‌ಓ ಶಿವರಾಮ್ ಎಂ. ಬಾಬು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.





Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News