ಮಳೆಯಿಂದ ಕಡಿತಗೊಂಡ ರಾಷ್ಟ್ರೀಯ ಹೆದ್ದಾರಿ ಪರಿಶೀಲಿಸಿದ ಸಂಸದ
ಬೈಂದೂರು, ಮೇ 29: ಕಳೆದ ರವಿವಾರ ಭಾರೀ ಮಳೆಯಿಂದಾಗಿ ಸಂಪರ್ಕ ಕಡಿತಗೊಂಡು, ತ್ವರಿತ ಕ್ರಮದಿಂದ ದುರಸ್ತಿ ನಡೆದು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದ್ದ ಕೊಲ್ಲೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಸೂಕ್ಷ್ಮ ಪ್ರದೇಶಗಳಿಗೆ ಶುಕ್ರವಾರ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೈಂದೂರಿನಿಂದ ಕೊಲ್ಲೂರು ತನಕ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳನ್ನು ವೀಕ್ಷಿಸಿ, ಮುಂಬರುವ ದಿನಗಳಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಶಾಶ್ವತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಬೈಂದೂರಿನಿಂದ ಕೊಲ್ಲೂರು ದೇವಳದ ಮುಖಾಂತರ ಹೊಸನಗರ, ಶಿಕಾರಿಪುರ, ರಾಣಿಬೆನ್ನೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ- 766ಸಿಗೆ ಸುಮಾರು 400 ಕೋಟಿ ರೂ. ಮಂಜೂ ರಾಗಿದೆ. ಅರಣ್ಯ ಇಲಾಖೆಯ ಅನುಮತಿ ಸಹಿತ ಕೆಲವು ತಾಂತ್ರಿಕ ಕಾರಣಗಳಿಂದ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಇದೀಗ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದು ಶೀಘ್ರವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದರು.
ಇತ್ತೀಚೆಗೆ ಹೆದ್ದಾರಿ ಕುಸಿತಗೊಂಡು ಸಂಪರ್ಕಕ್ಕೆ ಸಮಸ್ಯೆಯಾಗಿದ್ದು ತಕ್ಷಣ ಸರಿಪಡಿಸಲಾಗಿತ್ತು. ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಜಾಗೃತಿ ವಹಿಸಲು ಹಾಗೂ ಕ್ಷಿಪ್ರಗತಿಯಲ್ಲಿ ಕಾಮಗಾರಿ ನಡೆಸಲು ಸೂಚನೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬಿಜೆಪಿ ಮಂಡಲ ಅಧ್ಯಕ್ಷ ಅನಿತಾ, ಪ್ರಧಾನ ಕಾರ್ಯದರ್ಶಿ ಗೋಪಾಲ ಪೂಜಾರಿ, ದಿಶಾ ಸಮಿತಿ ಸದಸ್ಯ ರಮೇಶ್, ಮುಖಂಡರಾದ ಪ್ರಿಯದರ್ಶಿನಿ ದೇವಾಡಿಗ, ಶರತ್ ಶೆಟ್ಟಿ ಉಪ್ಪುಂದ, ಹಿಂದುಳಿದ ಮೋರ್ಚಾ ಅಧ್ಯಕ್ಷ ಶಿವರಾಜ ಪೂಜಾರಿ, ಗೋಳಿಹೊಳೆ ಗ್ರಾ.ಪಂ ಮಾಜಿ ಅಧ್ಯಕ್ಷ ಮಂಜಯ್ಯ ಪೂಜಾರಿ, ಸುರೇಶ ಭಟವಾಡಿ, ಪುಷ್ಪರಾಜ ಶೆಟ್ಟಿ ಅಲ್ಲದೇ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.