ಅನಗತ್ಯ ರಸ್ತೆ ಅಗೆತ ಮಾಡಿದಲ್ಲಿ ಸೂಕ್ತ ಕ್ರಮದ ಎಚ್ಚರಿಕೆ
Update: 2026-06-11 19:31 IST
ಉಡುಪಿ, ಜೂ.11:ಈಗಾಗಲೇ ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ ಯಲ್ಲಿ ಉಡುಪಿ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಯಾವುದೇ ರಾಜ್ಯ ಹೆದ್ದಾರಿ/ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಹಾಗೂ ಅಕ್ಕಪಕ್ಕದಲ್ಲಿ ಅಗೆತ ಮಾಡುವುದನ್ನು ಅಕ್ಟೋಬರ್ ಅಂತ್ಯದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ.
ರಸ್ತೆ ಅಗೆತಕ್ಕೆ ಈಗಾಗಲೇ ಇಲಾಖೆಯಿಂದ ಅನುಮತಿ ನೀಡಲಾಗಿದ್ದರೂ ಸುರಕ್ಷತಾ ದೃಷ್ಟಿಯಿಂದ ಅಕ್ಟೋಬರ್ ಅಂತ್ಯದವರೆಗೆ ರಸ್ತೆ ಹಾಗೂ ರಸ್ತೆ ಬದಿಯಲ್ಲಿ ಯಾವುದೇ ಅಗೆತವನ್ನು ನಿಷೇಧಿಸಲಾಗಿದೆ. ಅಲ್ಲದೇ ಮುಂದಿನ ಅಕ್ಟೋಬರ್ ಅಂತ್ಯದವರೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ.
ಈ ಅವಧಿಯಲ್ಲಿ ಅನಗತ್ಯವಾಗಿ ರಸ್ತೆ ತುಂಡರಿಸುವುದು, ಅಗೆತ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ.