ಉಡುಪಿ ಜಿಲ್ಲೆಯಲ್ಲಿ ಬಹುಜನ ಸಮಾಜ ಪಕ್ಷದ ಸದಸ್ಯತ್ವ ಅಭಿಯಾನ
ಉಡುಪಿ, ಜೂ.20: ಮುಂಬರುವ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಗಮನದಲ್ಲಿ ಟ್ಟುಕೊಂಡು ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ)ಯನ್ನು ಮತ್ತೆ ಸದೃಢವಾಗಿ ಕಟ್ಟುವ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶವಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಮಂಜುನಾಥ್ ವಿ. ಹೇಳಿದ್ದಾರೆ.
ಉಡುಪಿಯ ಪ್ರೆಸ್ಕ್ಲಬ್ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಾರ್ಟಿ ಉಡುಪಿ ಜಿಲ್ಲಾ ಸಮಿತಿಯನ್ನು ಪುನರ್ರಚಿಸಲಾಗಿದೆ ಎಂದರು.
ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಕರಾವಳಿಯ ಚಿರಪರಿಚಿತ ಹೋರಾಟಗಾರ ಶೇಖರ್ ಹೆಜಮಾಡಿ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ತೊಟ್ಟಂ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕುಂದಾಪುರ ಹಾಗೂ ಆನಂದ ಬ್ರಹ್ಮಾವರ, ಖಜಾಂಚಿಯಾಗಿ ಪುಷ್ಪಾಕರ ಕೊರಂಗ್ರಪಾಡಿ ಹಾಗೂ ಜಿಲ್ಲಾ ಕಚೇರಿ ಕಾರ್ಯದರ್ಶಿಯಾಗಿ ವಿಠಲ ಸಾಲಿಕೇರಿ ಆಯ್ಕೆಯಾಗಿದ್ದಾರೆ ಎಂದವವರು ಹೇಳಿದರು.
ಇದೇ ವೇಳೆ ಮಾತನಾಡಿದ ಪಕ್ಷದ ಜಿಲ್ಲಾ ಅಧ್ಯಕ್ಷ ಶೇಖರ್ ಹೆಜಮಾಡಿ, ಮುಂಬರುವ ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕಾರ್ಯ ಈಗಾಗಲೇ ಆರಂಭಿಸಲಾಗಿದೆ ಎಂದರು.
ರಾಜ್ಯ ಹಾಗೂ ಕೇಂದ್ರ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲು ಮತ್ತು ಬಹುಜನ ಸಮುದಾಯದ ಧ್ವನಿಯನ್ನು ಸ್ಥಳೀಯಾಡಳಿತ ವ್ಯವಸ್ಥೆಯಲ್ಲಿ ಪ್ರಬಲಗೊಳಿಸಲು ಪಕ್ಷವು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಲಿದೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷವನ್ನು ಸೇರುವಂತೆ ಕರೆ ನೀಡಿದ ಅವರು, ಸಂವಿಧಾ ನದ ಮೌಲ್ಯಗಳನ್ನು ಉಳಿಸಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಆಶಯಗಳನ್ನು ಸಾಕಾರಗೊಳಿಸುವುದೇ ಬಹುಜನ ಸಮಾಜ ಪಾರ್ಟಿಯ ಪ್ರಮುಖ ಗುರಿಯಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ತೊಟ್ಟಂ, ಉಪಾಧ್ಯಕ್ಷರಾದ ಗೋಪಾಲಕೃಷ್ಣ ಕುಂದಾಪುರ ಮತ್ತು ಆನಂದ ಬ್ರಹ್ಮಾವರ, ಖಜಾಂಚಿ ಪುಷ್ಪಾಕರ ಕೊರಂಗ್ರಪಾಡಿ, ಜಿಲ್ಲಾ ಕಚೇರಿ ಕಾರ್ಯದರ್ಶಿ ವಿಠಲ ಸಾಲಿಕೇರಿ ಹಾಗೂ ರಮೇಶ್ ಉಪಸ್ಥಿತರಿದ್ದರು.