ಯಶ್ಪಾಲ್ ದ್ವೇಷ ಭಾಷಣ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಸಿಪಿಎಂ
ಉಡುಪಿ: ಉಡುಪಿಯಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಆಡಿರುವ ಸಂವಿಧಾನ ವಿರೋಧಿ, ಪ್ರಚೋದನಕಾರಿ ಹಾಗೂ ದ್ವೇಷಪೂರಿತ ಭಾಷಣವನ್ನು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಳ್ಳಬೇಕಾದ ಜನಪ್ರತಿನಿಧಿಯೊಬ್ಬರು ಸಮಾಜದಲ್ಲಿ ದ್ವೇಷ ಮತ್ತು ಉದ್ವಿಗ್ನತೆ ಸೃಷ್ಟಿಸುವ ರೀತಿಯಲ್ಲಿ ಸಾರ್ವಜನಿಕ ವಾಗಿ ಭಾಷಣ ಮಾಡಿರುವುದು ಅತ್ಯಂತ ಖಂಡನೀಯ. ಇದು ಶಾಸಕರ ಘನತೆಗೆ ಮಾತ್ರವಲ್ಲ, ಉಡುಪಿ ಜಿಲ್ಲೆಯ ಗೌರವಕ್ಕೂ ಕಳಂಕ ತರುವಂತಹ ವರ್ತನೆಯಾಗಿದೆ ಎಂದು ಸಿಪಿಎಂ ತಿಳಿಸಿದೆ.
ಈ ಪ್ರಕರಣವನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಕಾನೂನು ಎಲ್ಲರಿಗೂ ಸಮಾನವಾಗಿರುವುದರಿಂದ ಶಾಸಕ ಯಶ್ಪಾಲ್ ಸುವರ್ಣ ಅವರ ವಿರುದ್ಧವೂ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂಬ ತತ್ವವನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಿಪಿಎಂ ಉಡುಪಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಗ್ರಹಿಸಿದ್ದಾರೆ.